ರಾಜ್ಯ ಸರ್ಕಾರಕ್ಕೆ ರಾಷ್ಟ್ರಪ್ರಶಸ್ತಿ
ಬೆಂಗಳೂರು(ಸೆ.25): ಹಿರಿಯ ನಾಗರಿಕರ ಸೇವೆ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ದೇಶದಲ್ಲೇ ಅತ್ಯುತ್ತಮ ಕಾರ್ಯಕ್ಷಮತೆಯ ರಾಷ್ಟ್ರೀಯ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪಡೆದಿದೆ.
ಅಲ್ಲದೇ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಕಾಯಿಲೆ ಹಾಗೂ ಮಾನಸಿಕ ಸಮಸ್ಯೆಗಳ ಸಂಬಂಧ ನಡೆಸಿದ ಸಂಶೋಧನೆಗಳಿಗಾಗಿ ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆ ರಾಷ್ಟ್ರಪ್ರಶಸ್ತಿ ಪಡೆದಿದೆ. ವೈಯಕ್ತಿಕ ವೃತ್ತಿಗಳಿಗೆ ನೀಡಲಾಗುವ ಹಿರಿಯ ನಾಗರಿಕ ಪ್ರಶಸ್ತಿಗಾಗಿ ಬೆಂಗಳೂರಿನ ಗಾಂಧಿ ಭವನದ ಅಧ್ಯಕ್ಷ ಹೋ.ಶ್ರೀನಿವಾಸಯ್ಯ ಅವರು ಆಯ್ಕೆಯಾಗಿದ್ದಾರೆ.
ಅ.1ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಉಮಾಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--