ಅಭಿಮಾನಿಗಳಿಗೆ ಸುಮಲತಾ ಅಭಿಮಾನದ ಪತ್ರದಲ್ಲೇನಿದೆ?
ಕನ್ನಡಿಗರನ್ನು ಅಗಲಿದ ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಅಂಬಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ನಂತರ ಅಂಬಿ ಪತ್ನಿ ಸುಮಲತಾ ಟ್ವಿಟರ್ನಲ್ಲಿ ಸಕಲರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಬೆಂಗಳೂರು[ಡಿ.01] ಸರಕಾರಿ ಗೌರವದೊಂದಿಗೆ ಕಳುಹಿಸಿಕೊಟ್ಟ ಸನ್ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ, ಮಂಡ್ಯದ ಸಂಸದ ಸಿ ಎಸ್ ಪುಟ್ಟರಾಜು ಅವರಿಗೂ, ಇನ್ನಿತರ ಶಾಸಕರು ಮತ್ತು ಸಂಸದರಿಗೂ, ಕರ್ನಾಟಕ ಸರ್ಕಾರಕ್ಕೂ ನಾನು ಈ ಮೂಲಕ ಅಭಿನಂದನೆ ತಿಳಿಸುತ್ತೇನೆ ಎಂದಿದ್ದಾರೆ.
ಮೂರು ದಿನಗಳ ಕಾಲ ಸತತವಾಗಿ ಶ್ರಮವಹಿಸಿ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಂಡ ಪೋಲಿಸ್ ಇಲಾಖೆ ಮತ್ತು ಜನತೆಗೆ ಸದಾ ಕಾಲ ಆಭಾರಿಯಾಗಿರುತ್ತೇವೆ. ವಿಶೇಷವಾಗಿ ಅಂಬರೀಶ್ ಅವರನ್ನು ತಮ್ಮ ರಾಜನಂತೆ ಗೌರವಿಸಿ ಅತ್ಯಂತ ಪ್ರೀತಿಯಿಂದ ಕಳಿಸಿಕೊಟ್ಟ ಮಂಡ್ಯದ ಅಭಿಮಾನಿಗಳು ಮತ್ತು ಎಲ್ಲ ಅಭಿಮಾನಿಗಳಿಗೆ ನಾವುಗಳು ಯಾವಾಗಲು ಚಿರಋಣಿ ಎಂದು ತಮ್ಮ ಮನದಾಳದ ಅಭಿನಂದನೆ ತಿಳಿಸಿದ್ದಾರೆ.
ರಮ್ಯಾಗೆ ಬಿಸಿ ಮುಟ್ಟಿಸಿದ ಅಭಿಮಾನಿಯ ಪತ್ರ...8 ಸಂಗತಿಗಳು ವೈರಲ್
ಆರ್ ಎ ಎಫ್ ಸಿಬ್ಬಂದಿಯವರಿಗೂ, ಮಂಡ್ಯ ಮತ್ತು ಬೆಂಗಳೂರು ಜಿಲ್ಲೆಯ ಅಧಿಕಾರಿ ವರ್ಗದವರಿಗೂ ನಾನು ಈ ಮೂಲಕ ಅಭಿನಂದನೆ ತಿಳಿಸಲು ಇಚ್ಛಿಸುತ್ತೇನೆ. ಅಂಬರೀಶ್ ಅವರು ಮೇಲೆ ಸದಾ ಕಾಲ ಪ್ರೀತಿ ಮತ್ತು ಅಭಿಮಾನವನ್ನು ತೋರಿಸಿದ ಮಂಡ್ಯ ಜನತೆಯ ಬಗ್ಗೆ ಹೇಳಲು ಪದಗಳೇ ಸಾಲುತ್ತಿಲ್ಲ. ಅವರು ಬದುಕಿದ್ದಾಗ ಹೇಗೆ ಪ್ರೀತಿ ಅಭಿಮಾನ ತೋರಿಸಿದರೋ ಹಾಗೆ ಅವರು ನಿಧನರಾದಾಗಲೂ ಪ್ರೀತಿ ಅಭಿಮಾನಕ್ಕೆ ಯಾವುದೇ ಕೊರತೆಯಾಗದಂತೆ ನಡೆದುಕೊಂಡ ಮಂಡ್ಯದ ಜನತೆಯನ್ನು ನಾನು ಸದಾ ನೆನಪಿಟ್ಟುಕೊಳ್ಳುತ್ತೇನೆ.
ಅವರೊಬ್ಬ ನಟ, ಕೇಂದ್ರದ ಮಂತ್ರಿ, ರಾಜ್ಯದ ಮಂತ್ರಿ, ಒಬ್ಬ ಸೂಪರ್ ಸ್ಟಾರ್, ಎಲ್ಲರಿಗೂ ಒಬ್ಬ ಒಳ್ಳೆಯ ಗೆಳೆಯರಾಗಿದ್ದರು. ಆದರೆ ಇವೆಲ್ಲಕ್ಕೂ ಮಿಗಿಲಾಗಿ ನಿಮ್ಮೆಲ್ಲರ ಪ್ರೀತಿ ಅಭಿಮಾನವೇ ಅವರಿಗೆ ದೊಡ್ಡ ಕಳಶದಂತೆ. ಅಂಬರೀಶ್ ಅವರು ನಮ್ಮ ಕರ್ನಾಟಕದ ಪುಣ್ಯ ಭೂಮಿಯಲ್ಲಿ ಹುಟ್ಟಿದ್ದೆ ಅವರಿಗೊಂದು ಅದೃಷ್ಟ. ಹಾಗೆಯೇ ಮಂಡ್ಯದ ಮಣ್ಣಿನ ಮಗ ಎನಿಸಿಕೊಳ್ಳಲು ಅಷ್ಟೇ ಅದೃಷ್ಟ ಮಾಡಿದ್ದರು ಎಂದಿದ್ದಾರೆ.
ಈ ಅತ್ಯಂತ ಕಷ್ಟದ ಮತ್ತು ದುಃಖದ ಹೊತ್ತಿನಲ್ಲಿ ನನ್ನನು ಮತ್ತು ನನ್ನ ಕುಟುಂಬವನ್ನು ಬೆಂಬಲಿಸಿ ನಿಂತ ಎಲ್ಲರಿಗೂ ನಾನು ಈ ಮೂಲಕ ಧನ್ಯವಾದವನ್ನು ತಿಳಿಸುತ್ತೇನೆ. ನಿಮ್ಮ ಸಾಂತ್ವನದ ಮಾತುಗಳು ಮತ್ತು ನಿಮ್ಮ ಪ್ರೀತಿಯ ನಡೆಗಳು ಈ ಸಂಕಷ್ಟದ ಹೊತ್ತಿನಲ್ಲಿ ನಮಗೆ ಶಕ್ತಿ ತುಂಬಿದವು. ನಾನು, ಅಭಿಷೇಕ್ ಮತ್ತು ಅಂಬರೀಶ್ ಇಡೀ ಕುಟುಂಬವು ಕರ್ನಾಟಕದ ಜನತೆಗೆ ಎಂದಿಗೂ ಋಣಿಯಾಗಿರುತ್ತೇವೆ ಎಂದಿದ್ದಾರೆ.