ಗುರುವಾರ ನಡೆದ ಸಂಪುಟ ಸಭೆಯಲ್ಲಿ ಸಚಿವ ಸಂಪುಟ ವಿಸರ್ಜನೆ ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. 

ಹೈದರಾಬಾದ್‌: ಅವಧಿಪೂರ್ವ ಚುನಾವಣೆಗೆ ಹೋಗಲು ತುದಿಗಾಲಿನಲ್ಲಿ ನಿಂತಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್‌ ಅವರು ಗುರುವಾರ ವಿಧಾನಸಭೆ ವಿಸರ್ಜನೆ ಮಾಡಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಗಿದೆ. 

Add Asianetnews Kannada as a Preferred SourcegooglePreferred

ಅಲ್ಲದೇ ಈ ನಿರ್ಧಾರ ಬಳಿಕ ಇದೀಗ ಮುಖ್ಯಮಂತ್ರಿ ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದಾರೆ. ತೆಲಂಗಾಣದ ಸಚಿವ ಸಂಪುಟ ಸಭೆ ಬಳಿಕ ವಿಧಾನಸಭೆ ವಿಸರ್ಜನೆ ಮಾಡಲಾಗಿದೆ.

ತೆಲಂಗಾಣ ವಿಧಾನಸಭೆ ವಿಸರ್ಜನೆ ಹಿನ್ನೆಲೆಯಲ್ಲಿ ರಾಜ್ಯಪಾಲ ಇ.ಎಸ್‌.ಎಲ್‌. ನರಸಿಂಹನ್‌ ಅವರು ಮುಖ್ಯ ಕಾರ್ಯದರ್ಶಿ ಎಸ್‌.ಕೆ. ಜೋಶಿ ಹಾಗೂ ಇನ್ನಿತರೆ ಅಧಿಕಾರಿಗಳನ್ನು ಭೇಟಿಯಾಗಿ ಈಗಾಗಲೇ ಮಾತುಕತೆ ನಡೆಸಿದ್ದಾರೆ.

ಸದ್ಯ, ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಪರ ಅಲೆ ಇದೆ ಎಂಬ ಸಮೀಕ್ಷಾ ವರದಿಗಳನ್ನು ಆಧರಿಸಿ, ಶೀಘ್ರ ಚುನಾವಣೆಗೆ ಹೋಗಲು ರಾವ್‌ ನಿರ್ಧರಿಸಿದ್ದಾರೆ. ಡಿಸೆಂಬರ್‌ನಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಿಜೋರಾಂ ಚುನಾವಣೆ ಜೊತೆಗೆ ರಾಜ್ಯದಲ್ಲೂ ಚುನಾವಣೆ ನಡೆಯಲಿದೆ.