ಬುಲೆಟ್ ಟ್ರೈನ್ ವಿರೋಧಿಸುವವರು ಎತ್ತಿನ ಗಾಡಿಯಲ್ಲಿ ಪ್ರಯಾಣಿಸಲಿ
ಯಾರು ಬುಲೆಟ್ ರೈಲನ್ನು ವಿರೋಧಿಸುತ್ತಾರೋ ಅವರು ಎತ್ತಿನ ಗಾಡಿಯಲ್ಲಿ ಹೋಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಭರುಚ್(ಡಿ.3): ಯಾರು ಬುಲೆಟ್ ರೈಲನ್ನು ವಿರೋಧಿಸುತ್ತಾರೋ ಅವರು ಎತ್ತಿನ ಗಾಡಿಯಲ್ಲಿ ಹೋಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ.
ಗುಜರಾತ್’ನ ಭರುಚ್ ಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ 1.1 ಲಕ್ಷ ಕೋಟಿ ರೂ. ಯೋಜನೆಯ ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಹೇಳಿಕೆ ನೀಡಿದ್ದಾರೆ.
ಅಲ್ಲದೇ ಜಪಾನ್ ಸಹಯೋಗದೊಂದಿಗೆ ಮುಂಬೈ ಹಾಗೂ ಅಹಮದಾಬಾದ್ ನಡುವೆ ಬುಲೆಟ್ ರೈಲು ಆರಂಭ ಮಾಡಲಾಗುತ್ತಿದ್ದು, ಇದರಿಂದ ಸಾವಿರಾರು ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.
ಈ ಹಿಂದೆ ಕೇಂದ್ರದಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಸರ್ಕಾರವೂ ಕೂಡ ಬುಲೆಟ್ ರೈಲು ಆರಂಭಿಸಲು ಯೋಜನೆ ರೂಪಿಸಿತ್ತು. ಆದರೆ ಇದರಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಈಗ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಹೇಳಿದರು. ಯುಪಿಎ ಸರ್ಕಾರ ಆಡಳಿತದಲ್ಲಿ ಇದ್ದ ಅವಧಿಯಲ್ಲಿ ಯಾವುದೇ ಸಾಧನೆ ಮಾಡಿಲ್ಲ, ಬೇರೆಯವರು ಮಾಡುವ ಕೆಲಸಕ್ಕೆ ಅವರ್ಯಾಕೆ ವಿರೋಧ ವ್ಯಕ್ತಪಡಿಸಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೇ ಯುಪಿಎ ಸರ್ಕಾರದ ಅವಧಿಯಲ್ಲಿ ಗುಜರಾತ್’ಗಾಗಿ ಯಾವುದೇ ಕೆಲಸವನ್ನೂ ಕೂಡ ಮಾಡಲಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.