ನೆರೆ ಪ್ರದೇಶಗಳಿಗೆ ಮತ್ತೆ ಹೋಗ್ತೀನಿ: ಬಿಎಸ್‌ವೈ| ವಾಸ್ತವಾಂಶ ತಿಳಿಯಲು ಮತ್ತೊಮ್ಮೆ ಭೇಟಿ| ಪರಿಹಾರ ನೀಡಲು ಕೇಂದ್ರದಿಂದ ಉನ್ನತ ಸಭೆ

ನವದೆಹಲಿ[ಆ.18]: ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಂದಿನ ದಿನಗಳಲ್ಲಿ ನಾನು ಮತ್ತೊಮ್ಮೆ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವ ಬಗ್ಗೆ ಕೇಂದ್ರದ ಉನ್ನತ ಮಟ್ಟದ ಸಮಿತಿಯು ಸಭೆ ನಡೆಸಿದೆ. ಆದರೆ, 7ರಿಂದ 8 ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇರುವ ಕಾರಣ ಕೇಂದ್ರ ಸರ್ಕಾರ ಒಂದು ತೀರ್ಮಾನಕ್ಕೆ ಬರಬೇಕಿದೆ. ಪ್ರವಾಹ ಸಂದರ್ಭದಲ್ಲಿ ಎಲ್ಲ ಕಡೆ ನೀರು ತುಂಬಿತ್ತು. ವಾಸ್ತವಾಂಶ ತಿಳಿದುಕೊಳ್ಳಬೇಕಾದರೆ ನಾನು ಇನ್ನೊಮ್ಮೆ ಭೇಟಿ ನೀಡಬೇಕಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯಲು ಅವಕಾಶ ನೀಡಿಲ್ಲ ಎಂದರು.

ಇದೇ ವೇಳೆ ಯಡಿಯೂರಪ್ಪ ಅವರು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

‘ಕಾಂಗ್ರೆಸ್ಸಿಗರು ತಲೆತಿರುಕರು’

ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕಾಂಗ್ರೆಸ್ಸಿಗರು ತಲೆತಿರುಕರು. ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.