ಉತ್ತರಾಖಂಡ ಮುಖ್ಯಮಂತ್ರಿಯಾಗಿ ನಾಳೆ ತ್ರಿವೇಂದ್ರ ರಾವತ್ ಪ್ರಮಾಣವಚನ
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ.
ಡೆಹ್ರಾಡೂನ್ (ಮಾ.17): ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಆಯ್ಕೆ ಮಾಡಿದ್ದು, ನಾಳೆ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ನಾಳೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಕೃಷ್ಣಕಾಂತ್ ಪೌಲ್ ಪ್ರಮಾಣವಚನ ಬೋಧಿಸಲಿದ್ದಾರೆ.
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ.
ಡೋಯಿವಾಲಾ ಕ್ಷೇತ್ರದಿಂದ ಶಾಸಕನಾಗಿರುವ ರಾವತ್, ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 24 ಸಾವಿರ ವೋಟುಗಳ ಅಂತರದಿಂದ ಮಣಿಸಿದ್ಧಾರೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ 56 ವರ್ಷ ಪ್ರಾಯದ ರಾವತ್, ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. 2007-12ರ ಅವಧಿಯಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಅಮಿತ್ ಶಾಗೆ ಆಪ್ತರಾಗಿರುವ ರಾವತ್ ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉತ್ತರ ಪ್ರದೇಶದ ಮೇಲುಸ್ತುವಾರಿ ಹೊಂದಿದ್ದರು. ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿತ್ತು.
ಕಳೆದ ವಿಧಾನಸಭಾ ಚುನಾವಣೆಗಳಲ್ಲಿ 70 ಕ್ಷೇತ್ರಗಳ ಪೈಕಿ ಬಿಜೆಪಿಯು 57 ಸ್ಥಾನಗಳನ್ನು ಪಡೆದಿದೆ.