ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆ ವೇಳೆ ಪ್ರಮುಖ ಖಾತೆಗಳಿಗಾಗಿ ಕ್ಯಾತೆ ತೆಗೆದಿದ್ದ ಉಭಯ ಪಕ್ಷಗಳು ನಿಗಮ-ಮಂಡಳಿಗಳ ಹಂಚಿಕೆಯಲ್ಲೂ ಇದನ್ನು ಮುಂದುವರೆಸಿವೆ.

ಬೆಂಗಳೂರು : ಸಚಿವ ಸ್ಥಾನಗಳಿಗೆ ಆಯ್ತು, ಇದೀಗ ನಿಗಮ- ಮಂಡಳಿಗಳ ಹಂಚಿಕೆ ಬಗ್ಗೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟ ನಡೆದಿದೆ. ಇದರಿಂದಾಗಿ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ವಿಳಂಬವಾಗತೊಡಗಿದೆ. ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆ ವೇಳೆ ಪ್ರಮುಖ ಖಾತೆಗಳಿಗಾಗಿ ಕ್ಯಾತೆ ತೆಗೆದಿದ್ದ ಉಭಯ ಪಕ್ಷಗಳು ನಿಗಮ-ಮಂಡಳಿಗಳ ಹಂಚಿಕೆಯಲ್ಲೂ ಇದನ್ನು ಮುಂದುವರೆಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೆಡಿಎಸ್ ಕೆಲ ಪ್ರಮುಖ ನಿಗಮ-ಮಂಡಳಿಗಳ ಮೇಲೆ ಕಣ್ಣಿಟ್ಟಿದೆ. ಶತಾಯ ಗತಾಯ ತಾನು ಬೇಡಿಕೆ ಇಟ್ಟಿರುವ 2 - 3 ನಿಗಮ- ಮಂಡಳಿಗಳನ್ನು ತನಗೇ ನೀಡಬೇಕು ಎಂದು ಒತ್ತಾಯಿಸಿದೆ. ಇದು ಗೊಂದಲಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಆಯಾ ಖಾತೆಗಳ ಅಡಿಯಲ್ಲಿ ಬರುವ ನಿಗಮ ಮಂಡಳಿಗಳನ್ನು ಆಯಾ ಪಕ್ಷಗಳಿಗೆ ನಿಗದಿಪಡಿಸಬಹುದು ಎಂಬ ಅಭಿಪ್ರಾಯವನ್ನು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದ್ದರು.

ಆದರೆ, ಹಾಗಾದಲ್ಲಿ ತಮ್ಮ ಪಕ್ಷಕ್ಕೆ ಪ್ರಮುಖವಲ್ಲದ ನಿಗಮ ಮಂಡಳಿಗಳೇ ಹೆಚ್ಚು ಸಿಗುತ್ತವೆ. ಆ ಚೌಕಟ್ಟು ಹಾಕಿಕೊಳ್ಳದೆ ಹಂಚಿಕೆ ಆಗಬೇಕು ಎಂಬ ಪಟ್ಟನ್ನು ಜೆಡಿಎಸ್ ನಾಯಕರು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ವಿಸ್ತರ ಶಾಸಕರ ಬಲಾಬಲದ ಆಧಾರದ ಮೇಲೆ ಎರಡೂ ಪಕ್ಷಗಳ ನಡುವೆ ನಿಗಮ-ಮಂಡಳಿಗಳನ್ನು ಹಂಚಿಕೆ ಮಾಡಿಕೊಳ್ಳಲು ಮೊದಲೇ ನಿರ್ಧರಿಸಲಾಗಿದೆ. ಮೂರನೇ ಎರಡು ಭಾಗದಷ್ಟು ನಿಗಮ ಮಂಡಳಿಗಳು ಕಾಂಗ್ರೆಸ್ ಪಾಲಿಗೆ ಮತ್ತು ಮೂರನೇ ಒಂದು ಭಾಗದಷ್ಟು ನಿಗಮ ಮಂಡಳಿಗಳು ಜೆಡಿಎಸ್‌ಗೆ ಎಂಬುದನ್ನು ಅಖೈರುಗೊಳಿಸಲಾಗಿದೆ. 

ಮೊದಲ ಹಂತದಲ್ಲಿ ಪ್ರಮುಖ ನಿಗಮ ಮಂಡಳಿಗಳ ಪೈಕಿ ಕಾಂಗ್ರೆಸ್‌ನಿಂದ 20 ಹಾಗೂ ಜೆಡಿಎಸ್‌ನಿಂದ 10 ಸ್ಥಾನಗಳಿಗೆ ನೇಮಕ ಮಾಡುವ ಬಗ್ಗೆಯೂ ತೀರ್ಮಾನವಾಗಿದೆ. ಆದರೆ, ಯಾವ ಪಕ್ಷಕ್ಕೆ ಯಾವ ನಿಗಮ ಮಂಡಳಿಗಳು ಎಂಬ ವಿಷಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಬಜೆಟ್ ಅಧಿವೇಶನ ಮುಗಿದ ತಕ್ಷಣ ನಿಗಮ-ಮಂಡಳಿಗಳ ನೇಮಕ ಮಾಡಬೇಕು ಎಂಬ ಕಾಂಗ್ರೆಸ್ ಪ್ರಯತ್ನಕ್ಕೆ ಹಿನ್ನಡೆ ಉಂಟಾಗಿದ್ದು, ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಹೆಚ್ಚಿಸಿದೆ ಎಂದು ತಿಳಿದು ಬಂದಿದೆ. ಪ್ರಸಕ್ತ ಬಜೆಟ್ ಅಧಿವೇಶನ ಮುಗಿದ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮತ್ತೊಮ್ಮೆ ಸಭೆ ಸೇರಿ ನಿಗಮ ಮಂಡಳಿಗಳ ಹಂಚಿಕೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಿಕೊಳ್ಳುವ ಸಂಭವವಿದೆ ಎನ್ನಲಾಗಿದೆ.