ಧರ್ಮಸ್ಥಳದಲ್ಲಿ ಬರ: ಹೆಗ್ಗಡೆ ಜತೆ ಸಿಎಸ್‌ ಸಮಾಲೋಚನೆ |  ನೇತ್ರಾವತಿಗೆ ಚೆಕ್‌ ಡ್ಯಾಂ ನಿರ್ಮಿಸಬೇಕು ಎಂದ ಧರ್ಮಾಧಿಕಾರಿ | 

ಬೆಂಗಳೂರು (ಮೇ. 21):  ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವುದನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಮಾಲೋಚನೆ ನಡೆಸಿದರು.

Add Asianetnews Kannada as a Preferred SourcegooglePreferred

ನೇತ್ರಾವತಿ ನದಿಯಲ್ಲಿ ನೀರಿನ ಕೊರತೆ ಇದೆ. ಹೀಗಾಗಿ, ನೇತ್ರಾವತಿ ನದಿಗೆ ಮತ್ತೊಂದು ಚೆಕ್‌ ಡ್ಯಾಂ ನಿರ್ಮಾಣ ಮಾಡುವ ಅಗತ್ಯ ಇದೆ ಎಂದು ಧರ್ಮಾಧಿಕಾರಿಗಳು ಮುಖ್ಯ ಕಾರ್ಯದರ್ಶಿಗೆ ಸಲಹೆ ನೀಡಿದ್ದಾರೆ. ಜೊತೆಗೆ ಸರ್ಕಾರದ ಕಳಕಳಿಗೆ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಧರ್ಮಸ್ಥಳದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದರಿಂದ ಭಕ್ತರು ಕೆಲ ದಿನಗಳ ಕಾಲ ತಮ್ಮ ಪ್ರವಾಸವನ್ನು ಮುಂದೂಡುವಂತೆ ಕೆಲ ದಿನಗಳ ಹಿಂದಷ್ಟೇ ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಕ್ರಮ ಕೈಗೊಂಡಿದೆ. ಮಳೆಯ ಕೊರತೆಯಿಂದ ನೇತ್ರಾವತಿ ನದಿಯ ನೀರಿನ ಪ್ರಮಾಣ ತೀರಾ ತಳಮಟ್ಟಕ್ಕಿಳಿದಿದ್ದು, ಧರ್ಮಸ್ಥಳದಲ್ಲಿ ನೀರಿನ ಅಭಾವ ಹೆಚ್ಚಾಗಿದೆ.