ಶಿಮುಲ್ ಅಧ್ಯಕ್ಷರಾಗಿ ವಿದ್ಯಾಧರ ಅಧಿಕಾರ ಸ್ವೀಕಾರ
ಒಕ್ಕೂಟದ ಅಧ್ಯಕ್ಷರ ಆಯ್ಕೆಗೆ ಕಳೆದ ತಿಂಗಳು ನಡೆದ ಚುನಾವಣೆ ನಡೆದಿತ್ತು, ವಿದ್ಯಾಧರ ಅವಿರೋಧವಾಗಿ ಆಯ್ಕೆಯಾಗಿದ್ದರು. ಪ್ರತಿಸ್ಪರ್ಧಿ ಶಿವಕುಮಾರ್ ಆಯ್ಕೆಯನ್ನು ಪ್ರಶ್ನಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು, ಇದೀಗ ರಾಜ್ಯ ಹೈಕೋರ್ಟ್ ತಡೆಯಾಜ್ಞೆಯನ್ನು ತೆರೆವುಗೊಳಿಸಿದೆ. ಈ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ ಅವರು ವಿದ್ಯಾಧರ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಶಿವಮೊಗ್ಗ(ಡಿ.19): ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗಗಳ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್) ನೂತನ ಅಧ್ಯಕ್ಷರಾಗಿ ಹೊಸನಗರದ ಹೆಚ್.ಎನ್ ವಿದ್ಯಾಧರ ಹೈಕೋರ್ಟ್ ಆದೇಶದಂತೆ ಅಧಿಕಾರ ಸ್ವೀಕರಿಸಿದರು.
ಒಕ್ಕೂಟದ ಅಧ್ಯಕ್ಷರ ಆಯ್ಕೆಗೆ ಕಳೆದ ತಿಂಗಳು ನಡೆದ ಚುನಾವಣೆ ನಡೆದಿತ್ತು, ವಿದ್ಯಾಧರ ಅವಿರೋಧವಾಗಿ ಆಯ್ಕೆಯಾಗಿದ್ದರು. ಪ್ರತಿಸ್ಪರ್ಧಿ ಶಿವಕುಮಾರ್ ಆಯ್ಕೆಯನ್ನು ಪ್ರಶ್ನಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು, ಇದೀಗ ರಾಜ್ಯ ಹೈಕೋರ್ಟ್ ತಡೆಯಾಜ್ಞೆಯನ್ನು ತೆರೆವುಗೊಳಿಸಿದೆ. ಈ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ ಅವರು ವಿದ್ಯಾಧರ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು ಉತ್ಪಾದನೆ ವರ್ಷದಿಂದ ವರ್ಷ ಹೆಚ್ಚಳವಾಗುತ್ತಿದೆ. ಇದಕ್ಕೆ ಮಾರುಕಟ್ಟೆ ಒದಗಿಸಲು ಆದ್ಯತೆ ನೀಡಲಾಗುವುದು. ಜೊತೆಗೆ ಗ್ರಾಹಕರಿಗೆ ಗುಣಮಟ್ಟದ ಹಾಲು ಪೂರೈಕೆಗೆ ಒತ್ತು ನೀಡಲಾಗುವುದು ಎಂದರು. ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಹಾಲು ಶೀತಲೀಕರಣ ಘಟಕಗಳ ಆಧುನೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಪ್ರತಿದಿನ 5.37 ಲಕ್ಷ ಕೆ.ಜಿ ಹಾಲು ಸಂಗ್ರಹಣೆ ಮಾಡಲಾಗುತ್ತಿದೆ. ಪ್ರತಿದಿನ 2.13 ಲಕ್ಷ ಕೆ.ಜಿ ಹಾಲು, ಮೊಸರು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಒಕ್ಕೂಟವು 1414.60 ಲಕ್ಷ ರೂ .ಷೇರು ಬಂಡವಾಳ ಹೊಂದಿದ್ದು, 2016-17ನೇ ಸಾಲಿನಲ್ಲಿ 7.25 ಕೋಟಿ ರೂ. ಲಾಭಗಳಿಸಿದೆ. ದಾವಣಗೆರೆಯಲ್ಲಿ ಆಧುನಿಕ ಹಾಲು ಸಂಸ್ಕರಣ ಘಟಕ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಇನ್ನೂ ಒಂದು ವರ್ಷದಲ್ಲಿ ಅದನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.