ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ರಾಜೀನಾಮೆಗೆ ಕಾಯುತ್ತಿದ್ದೇವೆ ಎಂದು ನಾಯಕರೋರ್ವರು ಹೇಳಿದ್ದಾರೆ. ಹಾಗಾದ್ರೆ ಕರ್ನಾಟಕ ರಾಜಕೀಯ ಮುಂದಿನ ಬೆಳವಣಿಗೆ ಏನು..?

ಬೆಂಗಳೂರು: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರಾ ಎಂಬುದನ್ನು ಕಾದು ನೋಡುತ್ತಿದ್ದೇವೆ. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಮುಂದಿನ ಕಾರ್ಯತಂತ್ರ ರೂಪಿಸುತ್ತೇವೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಭಾನುವಾರ ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಬಹುಮತ ಇಲ್ಲದಿದ್ದರೂ ಅಪವಿತ್ರ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿವೆ. ಇದೀಗ ಲೋಕಸಭಾ ಚುನಾವಣೆ ಯಲ್ಲಿ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದರು.

ಸರ್ಕಾರದ ಭವಿಷ್ಯ ನಿಂಬೆಹಣ್ಣು ಹೇಳಬೇಕು!: ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ನಿಂಬೆ ಹಣ್ಣು ಹೇಳಬೇಕು ಎಂದು ಬಿಜೆಪಿ ನಾಯಕ ಆರ್.ಅಶೋಕ್ ವ್ಯಂಗ್ಯವಾಗಿ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ತೋರಿಸಿದ ಅವರು, ಸರ್ಕಾರದ ಅಸ್ತಿತ್ವದ ಬಗ್ಗೆ ಸಚಿವ ಎಚ್.ಡಿ.ರೇವಣ್ಣ ಮತ್ತವರ ನಿಂಬೆ ಹಣ್ಣು ಹೇಳಬೇಕು ಎಂದು ಲೇವಡಿ ಮಾಡಿದರು.