ರಾಹುಲ್ ಪ್ರಧಾನಿಯಾಗಲು ತಕರಾರಿಲ್ಲ: ದೇವೇಗೌಡರು
ರಾಹುಲ್ ಗಾಂಧಿಯನ್ನು ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದೆ. ರಾಹುಲ್ ಗಾಂಧಿ ಪ್ರಧಾನಿಯಾಗಲು ಯಾವುದೇ ತಕರಾರಿಲ್ಲ ಎಂದು ಜೆಡಿಎಸ್ ವರಿಷ್ಟ ದೇವೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಳಿಕ ರಾಹುಲ್ ಗಾಂಧಿ ಪ್ರಧಾನಿಯಾಗಲು ದೇವೆಗೌಡರು ಒಲವು ತೋರುತ್ತಿದ್ದಾರೆ.
ನವದೆಹಲಿ (ಜು. 24): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಮಹಾ ಮೈತ್ರಿಯ ನೇತೃತ್ವ ವಹಿಸಿಕೊಳ್ಳುವುದಕ್ಕೆ ತಮ್ಮ ತಕರಾರಿಲ್ಲ ಎಂದು ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್ .ಡಿ.ದೇವೇಗೌಡ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ರಾಜ್ಯದಲ್ಲಿ ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಈ ಹಿನ್ನೆಲೆಯಲ್ಲಿ ರಾಹುಲ್ ಉಮೇದುದಾರಿಕೆಯನ್ನು ತಾವು ಬೆಂಬಲಿಸುತ್ತಿರುವುದಾಗಿ ದೇವೇಗೌಡ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಯಲ್ಲಿ ಕನಿಷ್ಠ ಪಕ್ಷ 280 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ವಿಪಕ್ಷಗಳ ಮೈತ್ರಿ ನಡೆಯಲಿದೆ ಎಂದು ದೇವೇಗೌಡ ವಿವರಿಸಿದರು.