ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಸ್ಥಳೀಯ ಸಂಸ್ಥೆ ಚುನಾವಣೆಯ ವೇಳೆ ಮೈತ್ರಿ ಮುಂದುವರಿಯಬೇಕೆಬೇಡವೇಎನ್ನುವ ವಿಚಾರ ಸದ್ಯಕ್ಕೆ ಚರ್ಚೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಹಿರಿಯ ನಾಯಕರು ಸಭೆ ಸೇರಿ ನಿರ್ಧಾರ ಮಾಡಲಿದ್ದಾರೆ. 

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಯ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಸಿದ್ಧತೆ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಂತೆ ಭಾನುವಾರ ಜೆಡಿಎಸ್‌ನ ಮಹತ್ವದ ಸಭೆ ನಡೆಯಲಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪಕ್ಷದ
ನಾಯಕರು ಭಾಗವಹಿಸಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರ ಸ್ಥಳೀಯ ಸಂಸ್ಥೆಯ ಚುನಾವಣೆಗೆ ನಡೆಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಸರ್ಕಾರದ ಮಟ್ಟದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಕೈ ಜೋಡಿಸಬೇಕೇ? ಅಥವಾ ಬೇಡವೇ ಎಂಬುದರ ಕುರಿತು ಮಾತುಕತೆ ನಡೆಸುವುದರ ಜತೆಗೆ ಸಾಧಕ-ಬಾಧಕ ಕುರಿತು ಚರ್ಚೆಗಳು ನಡೆಯಲಿವೆ. ಏಕಾಂಗಿಯಾಗಿ ಚುನಾವಣಾ ಅಖಾಡಕ್ಕಿಳಿದರೆ ಪಕ್ಷಕ್ಕೆ ಉಂಟಾಗುವ ಲಾಭ-ನಷ್ಟಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ. 

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ದೇವೇಗೌಡ ಅವರು ಪಕ್ಷದ ನಾಯಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಬೇರೆಯವರಿಗೆ ವಹಿಸುವ ಬಗ್ಗೆ ಮಾತುಕತೆ ನಡೆಯಲಿದೆ. ಈಗಾಗಲೇ ಪಕ್ಷದ ಮುಖಂಡ ಎಚ್.ವಿಶ್ವನಾಥ್ ಅವರಿಗೆ ವಹಿಸುವುದು ಬಹುತೇಕ ಖಚಿತವಾಗಿದೆ. 

ಆದರೆ ವಿಶ್ವನಾಥ್ ಅವರೇ ಹಿಂದೇಟು ಹಾಕುತ್ತಿರುವ ಕಾರಣ ಅವರ ಮನವೊಲಿಸಲು ನಾಯಕರು ಮುಂದಾಗಿದ್ದಾರೆ. ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಪಿ.ಜಿ.ಆರ್.ಸಿಂಧ್ಯಾ ಸೇರಿದಂತೆ ಇತರೆ ನಾಯಕರು ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅವರೊಂದಿಗೆ ಇರುವ ಆಶ್ವಾಸನೆ ನೀಡುವ ಮೂಲಕ ಅವರ ಮನವೊಲಿಸಲಾಗುವುದು ಎಂದು ತಿಳಿದುಬಂದಿದೆ.