ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಷ್ಟವಾಗಲಿದೆ ಎನ್ನುವ ಮಾಹಿತಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಲುಪಿದ್ದು, ಈ ಬಗ್ಗೆ ವರದಿಯನ್ನು ಪಕ್ಷದ ವರಿಷ್ಠರಿಗೆ ನೀಡಲು ಅವರು ದಿಲ್ಲಿಗೆ ತೆರಳಿದ್ದಾರೆ. 

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಲಿ ಬಿಜೆಪಿ ಸಂಸದರು ಪ್ರತಿನಿಧಿಸುತ್ತಿರುವ ಸುಮಾರು ಆರೇಳು ಕ್ಷೇತ್ರಗಳಲ್ಲಿ ಹೇಳಿಕೊಳ್ಳುವಷ್ಟು ಅನುಕೂಲಕರ ಪರಿಸ್ಥಿತಿ ಇಲ್ಲ ಎಂಬ ಮಾಹಿತಿ ಪಕ್ಷದ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಅವರಿಗೆ ತಲುಪಿದೆ. ಈ ಮಾಹಿತಿಯನ್ನು ಒಳಗೊಂಡಂತೆ ಲೋಕಸಭಾ ಚುನಾವಣೆ ಸಿದ್ಧತೆಗೆ ಪೂರಕವಾಗಿ ವಿವರವಾದ ವರದಿಯೊಂದನ್ನು ಯಡಿಯೂರಪ್ಪ ಅವರು ಪಕ್ಷದ ವರಿಷ್ಠರಿಗೆ ನೀಡುವುದಕ್ಕಾಗಿ ದೆಹಲಿಗೆ ಕೊಂಡೊಯ್ದಿದ್ದಾರೆ. 

Add Asianetnews Kannada as a Preferred SourcegooglePreferred

ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ದೆಹಲಿಗೆ ತೆರಳಿದ್ದಾರೆ. 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನ ಎಲ್ಲ ರಾಜ್ಯಗಳ ಬಿಜೆಪಿ ಅಧ್ಯಕ್ಷರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲ ರಾಜ್ಯಾಧ್ಯಕ್ಷರೂ ತಮ್ಮ ರಾಜ್ಯಗಳ ಪಕ್ಷದ ಸಂಘಟನೆ ಹಾಗೂ ಪ್ರತಿ ಕ್ಷೇತ್ರದಲ್ಲಿನ ಪ್ರಸಕ್ತ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಚಿತ್ರಣ ಒಳಗೊಂಡ ವರದಿ ಮಂಡಿಸಲಿದ್ದಾರೆ.

ಹೀಗಾಗಿ, ಯಡಿಯೂರಪ್ಪ ಅವರು ಕರ್ನಾಟಕದಲ್ಲಿನ 28 ಕ್ಷೇತ್ರಗಳಲ್ಲಿನ ಪಕ್ಷದ ಪರಿಸ್ಥಿತಿಯನ್ನು ಹೈಕಮಾಂಡ್ ಮುಂದಿಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಭೆಯ ಹಿನ್ನೆಲೆಯಲ್ಲೇ ಯಡಿಯೂರಪ್ಪ ಅವರು ಎಲ್ಲ ಜಿಲ್ಲಾ ಘಟಕಗಳಿಂದ ಮಾಹಿತಿ ಸಂಗ್ರಹಿಸಿದ್ದರು. ಆ ಮಾಹಿತಿ ಅನುಸಾರ ಹಾಲಿ ಬಿಜೆಪಿ ಸದಸ್ಯರೇ ಪ್ರತಿನಿಧಿಸುತ್ತಿರುವ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಕೊಪ್ಪಳ, ಮೈಸೂರು ಹಾಗೂ ಉತ್ತರ ಕನ್ನಡ ಸೇರಿದಂತೆ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮೊದಲಿನಷ್ಟು ಉತ್ತಮ ವಾತಾವರಣವಿಲ್ಲ. ಸ್ವಲ್ಪ ಹೆಚ್ಚುಕಡಮೆಯಾದರೆ ಪಕ್ಷಕ್ಕೆ ಹಿನ್ನಡೆ ಉಂಟಾಗಬಹುದು ಎನ್ನಲಾಗಿದೆ.