ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್. ಯಡಿಯೂರಪ್ಪ ಮುಂದಿನ ಆಗಸ್ಟ್ ನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡು ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲಿದ್ದಾರೆ. 

ಬೆಂಗಳೂರು : ರಾಜ್ಯದ ರಾಜಕೀಯ ಪರಿಸ್ಥಿತಿ, ಸರ್ಕಾರದ ಒಡೆದಾಳುವ ನೀತಿ ಮತ್ತು ಕೇಂದ್ರದ ಸಾಧನೆ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸುವ ಸಂಬಂಧ ಆ. 9 ರಿಂದ ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಭೆಯಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎಂದು ಸಿಎಂ ಕುಮಾರಸ್ವಾಮಿ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿಗಳ ಹೇಳಿಕೆ ವಿಚಾರದಲ್ಲಿ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ಒಡೆದಾಳುವ ನೀತಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ತೀರ್ಮಾನಿ ಸಲಾಗಿದೆ. ಕ್ರಾಂತಿ ದಿನವಾದ ಆ.9ರಿಂದ ಮೂರು ತಂಡಗಳಾಗಿ ಪ್ರವಾಸ ಪ್ರಾರಂಭಿಸಲಾಗುವುದು. ತಾವು ಸೇರಿದಂತೆ ಬಿಜೆಪಿ ಮುಖಂಡರಾದ ಗೋವಿಂದ ಕಾರಜೋಳ, ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಮೊದಲ ತಂಡ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಅರವಿಂದ ಲಿಂಬಾವಳಿ, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಎರಡನೇ ತಂಡ ಮತ್ತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ, ಲಕ್ಷ್ಮಣ ಸವದಿ ನೇತೃತ್ವದಲ್ಲಿ ಮೂರನೇ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು. 

ಸಭೆಯಲ್ಲಿ ಪ್ರವಾಸದ ರೂಪುರೇಷೆಗಳ ಕುರಿತು ಚರ್ಚಿಸಲಾಗಿದೆ. ಯಾವ ಜಿಲ್ಲೆಯಿಂದ ಪ್ರವಾಸ ಆರಂಭಿಸಬೇಕು ಎಂಬುದರ ಬಗ್ಗೆ ಶೀಘ್ರದಲ್ಲಿಯೇ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಉತ್ತರ ಕರ್ನಾಟಕ 13 ಜಿಲ್ಲೆಗಳಲ್ಲಿ ನಾನು ಪ್ರವಾಸ ಮಾಡ ಲಿದ್ದು, ಅಲ್ಲಿನ ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸುತ್ತೇನೆ. ಇತರೆ ನಾಯಕರು ಸಹ ತಮ್ಮ ತಂಡದೊಂದಿಗೆ ಜನತೆಯ ಕುಂದು ಕೊರತೆಗಳು, ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲಾಗುವುದು. ಇದರ ಜತೆ ಕೇಂದ್ರದ ಸಾಧನೆಗಳನ್ನು ಜನತೆಯ ಮುಂದೂಡಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ ಇತರರು ಉಪಸ್ಥಿತರಿದ್ದರು.