ಜೆಡಿಎಸ್‌ನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಬೆಂಗಳೂರು:  ಉತ್ತರ ಕರ್ನಾಟಕಕ್ಕೆ ತಾರತಮ್ಯ ಸಂಬಂಧ ಬಹಿರಂಗ ಚರ್ಚೆಗೆ ಸಿದ್ಧ ಎಂದು ಜೆಡಿಎಸ್‌ನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. 

Add Asianetnews Kannada as a Preferred SourcegooglePreferred

ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಅಧಿಕಾರದ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಕೊಟ್ಟ ಯೋಜನೆಗಳು ಎಷ್ಟು ಎಂಬುದನ್ನು ಆದೇಶಗಳ ದಿನಾಂಕ ಸಹಿತ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯಲ್ಲೇ ಬಹಿರಂಗ ಚರ್ಚೆ ಏರ್ಪಡಿಸಲಿ. 

ಅವರ ಬಳಿ ಇರುವ ಅಂಕಿ ಅಂಶ, ದಾಖಲೆಗಳನ್ನು ತೆಗೆದುಕೊಂಡು ಬರಲಿ. ನನ್ನ ಬಳಿ ಇರುವ ದಾಖಲೆ ಗಳೊಂದಿಗೆ ಚರ್ಚೆಗೆ ಬರುತ್ತೇನೆ’ ಎಂದು ಸವಾಲು ಹಾಕಿದರು. ‘ದೇವೇಗೌಡ ಅವರು ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ವ್ಯವಸ್ಥಿತವಾಗಿ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. 

ಕುಮಾರಸ್ವಾಮಿಮುಖ್ಯಮಂತ್ರಿ ಆದ ಬಳಿಕ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಮಾತನಾಡುತ್ತಿದ್ದಾರೆ. ಅಲ್ಲದೇ ಈ ಭಾಗಕ್ಕೆ ಅನುದಾನ ಬಿಡುಗಡೆ ಸಂಬಂಧ ಶ್ವೇತಪತ್ರ ಹೊರಡಿಸಲಿ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಶ್ವೇತಪತ್ರ ಹೊರಡಿಸಲು ಅದಕ್ಕೆ ಅದರದ್ದೇ ಆದ ಘನತೆ ಇದೆ. ಸರ್ಕಾರ ಶ್ವೇತ ಪತ್ರ ಹೊರಡಿಸಿದರೆ ಒಳ್ಳೆಯದು. ಮಾಜಿ ಶಾಸಕನಾಗಿ ನಾನೇ ಉತ್ತರ ಪತ್ರ ಹೊರಡಿಸುತ್ತೇನೆ’ ಎಂದರು.