ಇದೀಗ ಹಜ್ ಭವನಕ್ಕೆ ಟಿಪ್ಪು  ಹೆಸರು ನಾಮಕರಣ ಮಾಡಲು ಬಿಜೆಪಿ ನಾಯಕರು ವಿರೋಧ ಮಾಡುತ್ತಿರುವುದು ಯಾಕೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ.

ಚನ್ನಪಟ್ಟಣ: ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿ ಬಹುತೇಕ ಬಿಜೆಪಿ ಮುಖಂಡರು ಟಿಪ್ಪು ಜಯಂತಿಯನ್ನು ಆಚರಿಸಿದ್ದಾರೆ. ಇದೀಗ ಹಜ್ ಭವನಕ್ಕೆ ಟಿಪ್ಪು ಹೆಸರು ನಾಮಕರಣ ಮಾಡಲು ವಿರೋಧ ಮಾಡುತ್ತಿರುವುದು ಯಾಕೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ.

Add Asianetnews Kannada as a Preferred SourcegooglePreferred

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಬಿಜೆಪಿ ಮುಖಂಡರು, ರಾಜ್ಯ ಮಟ್ಟದ ನಾಯಕರು ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿರುವ ಬಗ್ಗೆ ನನ್ನ ಬಳಿ ಸಾಕ್ಷ್ಯವಿದೆ. ಆದರೆ, ಈಗ ಹಜ್ ಭವನಕ್ಕೆ ಟಿಪ್ಪು ಹೆಸರಿಡಲು ವಿರೋಧ ಮಾಡುತ್ತಿರುವುದು ಯಾಕೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ ಎಂದರು.

ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತ ಖಾತೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಗ್ಗೆ ಬಿಜೆಪಿ ಮುಖಂಡರ ಜೊತೆ ನಾನು ಸಹ ಚರ್ಚಿಸಲು ಸಿದ್ಧನಿದ್ದೇನೆ. ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಬಿಜೆಪಿ ಶಾಸಕರು ಬೆಂಬಲ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಕಾಂಗ್ರೆಸ್‌ನ ಹಿರಿಯ ಅಲ್ಪಸಂಖ್ಯಾತ ನಾಯಕರಿಗೆ ಯಾವುದೇ ಬೇಸರವಿಲ್ಲ. ನಾನು ಕಾಂಗ್ರೆಸ್‌ಗೆ ಇದೀಗ ಬಂದಿದ್ದೇನೆ. ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಸಚಿವನಾಗಿದ್ದೇನೆ ಎಂದರು.