* ಯುವ ಕುಸ್ತಿಪಟು ಸಾಗರ್ ರಾಣಾ ಹತ್ಯೆ ಕೇಸ್‌ನಲ್ಲಿ ಆರೋಪಿಯಾಗಿರುವ ಸುಶೀಲ್ ಕುಮಾರ್* ಎರಡು ಒಲಿಂಪಿಕ್ ಪದಕ ವಿಜೇತ ಸುಶೀಲ್‌ ಕುಮಾರ್* ಸಾಗರ್ ರಾಣಾ ಅವರನ್ನು ಥಳಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ 

ನವದೆಹಲಿ(ಮೇ.28): ಕುಸ್ತಿಪಟು ಸಾಗರ್ ರಾಣಾ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದಿಗ್ಗಜ ಕುಸ್ತಿಪಟು ಸುಶೀಲ್‌ ಕುಮಾರ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಯುವ ಕುಸ್ತಿಪಟು ಸಾಗರ್ ರಾಣಾ ಅವರಿಗೆ ಸುಶೀಲ್ ಹಲ್ಲೆ ನಡೆಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಘಟನೆ ನಡೆದ ವೇಳೆ ಸುಶೀಲ್‌ ಸ್ಥಳದಲ್ಲೇ ಇದ್ದರು ಎಂದು 8 ಮಂದಿ ಪ್ರತ್ಯಕ್ಷದರ್ಶಿಗಳು ಸಾಕ್ಷಿ ಹೇಳಿದ್ದಾರೆ. ಇದರಿಂದ ರಾಣಾ ಸಾವಿನಲ್ಲಿ ಸುಶೀಲ್‌ ಪಾತ್ರವಿದೆ ಎನ್ನುವ ಆರೋಪಕ್ಕೆ ಪುಷ್ಠಿ ದೊರೆತಂತಾಗಿದೆ. ಇದೇ ವೇಳೆ ವಿಚಾರಣೆ ವೇಳೆ ಸುಶೀಲ್‌ ಸರಿಯಾಗಿ ಸ್ಪಂದಿಸದ ಕಾರಣ, ಅವರಿಂದ ಮಾಹಿತಿ ಪಡೆಯಲು ಪೊಲೀಸರು ಮನೋತಜ್ಞರ ಸಹಾರ ಪಡೆಯುತ್ತಿರುವುದಾಗಿ ತಿಳಿದುಬಂದಿದೆ. 

ಮತ್ತೊಂದೆಡೆ ಗ್ಯಾಂಗ್‌ಸ್ಟರ್‌ ಕಾಲಾ ಜತೇಡಿ ಸಹೋದರ ಪ್ರದೀಪ್‌ ಎಂಬಾತನ ಜೊತೆ ಸುಶೀಲ್‌ ತೆಗಿಸಿಕೊಂಡಿರುವ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ಪ್ರದೀಪ್‌ ಸಹ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಆತ ವಿದೇಶದಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕುಸ್ತಿಪಟು ಸುಶೀಲ್‌ ಕುಮಾರ್‌ಗೆ ಗ್ಯಾಂಗ್‌ಸ್ಟರ್‌ಗಳ ನಂಟು?

ಇದೇ ಮೇ.04ರಂದು ಸುಶೀಲ್ ಕುಮಾರ್ ಹಾಗೂ ಮತ್ತವರ ಬೆಂಬಲಿಗರು ನವದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಜೂನಿಯರ್ ನ್ಯಾಷನಲ್ ಕುಸ್ತಿ ಚಾಂಪಿಯನ್‌ ಸಾಗರ್ ರಾಣಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆ ಬಳಿಕ ಜೂನಿಯರ್ ಕುಸ್ತಿಪಟುವನ್ನು ಆತನ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದರಾದರೂ, ಮರುದಿನವೇ ಚಿಕಿತ್ಸೆ ಫಲಕಾರಿಯಾಗದೇ ಮೇ.05ರಂದು ಕೊನೆಯುಸಿರೆಳೆದಿದ್ದರು.

ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು, ಇನ್ನು 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು.