ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ. ಬಿಜೆಪಿ, ಜೆಡಿಎಸ್ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದರು. 

ಹೊಸಪೇಟೆ (ಮಾ.01): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ. ಬಿಜೆಪಿ, ಜೆಡಿಎಸ್ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದರು. ಶುಕ್ರವಾರ ಹಂಪಿ ಉತ್ಸವದಲ್ಲಿ ಫಲ-ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ. ಇನ್ನು 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರಲಿದೆ. ಮುಂದೆ ಕೂಡ ಕಾಂಗ್ರೆಸ್ ಸರ್ಕಾರವೇ ಬರಲಿದೆ. ಬಿಜೆಪಿಯಲ್ಲೇ ಅನೇಕ ಬಣಗಳಿವೆ. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ, ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. 13 ರಿಂದ 14 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.

Add Asianetnews Kannada as a Preferred SourcegooglePreferred

ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಇದ್ದಾರೆ. ಹೈಕಮಾಂಡ್ ಹಾಕಿರುವ ಗೆರೆ ನಾವು ದಾಟಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಡಿ.ಕೆ.ಶಿವಕುಮಾರ್ ಅವರು ಚೆನ್ನಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಶಿವರಾತ್ರಿ ಹಬ್ಬಕ್ಕೆ ಸ್ವಾಮೀಜಿ ಆಹ್ವಾನ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಬಂದಿದ್ದರು. ಡಿ.ಕೆ. ಶಿವಕುಮಾರ್‌ ಅವರು ಬಿಜೆಪಿಗೆ ಹೋಗ್ತಾರೆ ಅನ್ನೋದು ರಾಜಕೀಯ ಉಹಾಪೋಹ ಅಷ್ಟೇ. ಡಿ.ಕೆ ಶಿವಕುಮಾರ್ ಅವರ ರಕ್ತದಲ್ಲಿಯೇ ಕಾಂಗ್ರೆಸ್ ಇದೆ. ಅವರು ಪಕ್ಕಾ ಕಾಂಗ್ರೆಸ್ ಮನುಷ್ಯ ಎಂದರು.

ವಸ್ತು ಪ್ರದರ್ಶನಕ್ಕೆ ಚಾಲನೆ: ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಶುಕ್ರವಾರ ಹಂಪಿ ಉತ್ಸವ ಅಂಗವಾಗಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಸಾವಯವ ಮತ್ತು ಸಿರಿಧಾನ್ಯ, ಕೃಷಿ ವಸ್ತು ಪ್ರದರ್ಶನಕ್ಕೆ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀ‌ರ್ ಅಹಮದ್‌ ಖಾನ್ ಚಾಲನೆ ನೀಡಿದರು. ವಸ್ತು ಪ್ರದರ್ಶನದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಹಿಳೆಯರೊಂದಿಗೆ ಕೂತು ಬೀಸುಕಲ್ಲಿನಲ್ಲಿ ಧಾನ್ಯಗಳನ್ನು ಬೀಸಿದರು. ಒಕ್ಕಣೆಯಲ್ಲಿ ಒನಕೆ ಹಿಡಿದು ಕಾಳು ಒಪ್ಪ ಮಾಡಿದರು. 

ಜನರ ಬಳಿ ಗೃಹಜ್ಯೋತಿ ಹಣ ಕೇಳಿದ್ದಕ್ಕೆ ಸಚಿವ ಕೆ.ಜೆ.ಜಾರ್ಜ್‌ ಚಾರ್ಜ್‌!

ಹಳ್ಳಿ ಮನೆ ಮುಂದಿನ ಬಾವಿಯಲ್ಲಿ ನೀರು ಸೇದಿದರು. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೆ ಶಾಸಕ ಎಚ್.ಆರ್. ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಸಾಥ್‌ ನೀಡಿದರು. ಆನಂತರ ಕುರುವತ್ತಿ ಬಸವೇಶ್ವರ ಪ್ರತಿಕೃತಿ, ಸಿರಿಧಾನ್ಯಗಳಿಂದ ನಿರ್ಮಿಸಲಾಗಿರುವ ನೇಗಿಲು ಹಿಡಿದ ರೈತ ಹಾಗೂ ಕೃಷಿ ಇಲಾಖೆಯ ಮುಖ್ಯ ಯೋಜನೆಗಳನ್ನು ವೀಕ್ಷಿಸಿದರು. ಈ ವೇಳೆ ಜಿಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್. ಶ್ರೀಹರಿ ಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಮತ್ತಿತರರಿದ್ದರು.