ಕಟ್ಟಡ ನಿರ್ಮಿಸದೆ ₹97 ಕೋಟಿ ಅಕ್ರಮ: ಬೈರತಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಟಿ.ಜೆ.ಅಬ್ರಹಾಂ
ಕಟ್ಟಡ ನಿರ್ಮಿಸದೆ ಕಾಮಗಾರಿ ನಡೆದಿದೆ ಎಂದು ದಾಖಲಾತಿ ಸೃಷ್ಟಿಸಿ 97 ಕೋಟಿ ರು. ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ದಾಖಲಾಗಿದೆ.
ಬೆಂಗಳೂರು (ಮಾ.28) : ಕಟ್ಟಡ ನಿರ್ಮಿಸದೆ ಕಾಮಗಾರಿ ನಡೆದಿದೆ ಎಂದು ದಾಖಲಾತಿ ಸೃಷ್ಟಿಸಿ 97 ಕೋಟಿ ರು. ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ(Bairati Basavaraja) ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ದಾಖಲಾಗಿದೆ.
ಸೋಮವಾರ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ(Social activist TJ Abraham) ಅವರು ಲೋಕಾಯುಕ್ತ(Karnataka Lokayukta)ಕ್ಕೆ ದೂರು ನೀಡಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಕಾಮಗಾರಿಗಳನ್ನು ನಡೆಸದೆ ದಾಖಲೆಗಳನ್ನು ಸೃಷ್ಟಿಸಿ ಭ್ರಷ್ಟಾಚಾರ(Curruption) ಎಸಗಲಾಗಿದೆ. ಯಾವುದೋ ಕಟ್ಟಡಗಳನ್ನು ತೋರಿಸಿ ಹಣ ಲೂಟಿ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Bengaluru: ಹೆಬ್ಬಾಳದಲ್ಲಿ 40 ಸಾವಿರ ಟಿವಿ ಹಂಚಿದ ಬೈರತಿ ಸುರೇಶ್
ಲೋಕಾಯುಕ್ತರಿಗೆ ದೂರು ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಟಿ.ಜೆ.ಅಬ್ರಾಹಂ, ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ(KR Pura assembly constituency)ದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಕೋಟ್ಯಂತರ ರು. ಹಣ ಮಂಜೂರು ಮಾಡಿಸಿಕೊಂಡು ಕಾಮಗಾರಿ ನಡೆಸದೆ ಎಲ್ಲವೂ ಕಾಗದ ಪತ್ರದಲ್ಲಿಯೇ ಕಟ್ಟಡ ನಿರ್ಮಾಣ ಮಾಡಿಸಿರುವುದಾಗಿ ದಾಖಲೆ ಸೃಷ್ಟಿಸಲಾಗಿದೆ. ಈಮೂಲಕ 97 ಕೋಟಿ ರು. ವಂಚನೆ ಮಾಡಲಾಗಿದೆ. ಕೆ.ಆರ್.ಪುರ ಕ್ಷೇತ್ರಕ್ಕೆ ಈವರೆಗೆ ಬಿಬಿಎಂಪಿ(BBMP)ಗೆ ಸಂಬಂಧಿಸಿದಂತೆ 1883 ಕಾಮಗಾರಿಗಳಿಗೆ 488 ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ. ಈ ಪೈಕಿ 97 ಕೋಟಿ ರು. ಕಾಮಗಾರಿ ಮಾಡದೆ ಹಣ ಬಿಡುಗಡೆ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಕ್ಷೇತ್ರದಲ್ಲಿ 373 ಮಂದಿ ಗುತ್ತಿಗೆದಾರರಿದ್ದಾರೆ. 155 ಗುತ್ತಿಗೆದಾರರಿಗೆ ಒಂದು ಗುತ್ತಿಗೆ ನೀಡಿದರೆ 78 ಮಂದಿಗೆ ಎರಡು ಗುತ್ತಿಗೆ ಮತ್ತು 41 ಮಂದಿಗೆ ಮೂರು ಗುತ್ತಿಗೆ ನೀಡಲಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ 15 ಗುತ್ತಿಗೆದಾರರು 848 ಕಾಮಗಾರಿಗಳಿಗೆ ಕಾರ್ಯಾದೇಶ ಪಡೆದುಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ನಾನು ನೀಡಿರುವ ದೂರಿನ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಮಾಡುವ ನಂಬಿಕೆ ಇದೆ. ಒಂದು ವೇಳೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.
ಯಾವುದೇ ಅಮಿಷೆಗಳಿಗೆ ಒಳಗಾಗಿ ಬಿಜೆಪಿಗೆ ಹೋಗಿಲ್ಲ: ಸಿದ್ದು ವಿರುದ್ಧ ಸಚಿವ ಬೈರತಿ ಗರಂ