Asianet Suvarna News Asianet Suvarna News

ಸುಮಲತಾ ಜೊತೆ ಶೀಘ್ರ ಭೇಟಿ, ಪಕ್ಷದಲ್ಲಿ ಗೌರವಯುತ ಸ್ಥಾನದ ಭರವಸೆ: ವಿಜಯೇಂದ್ರ

ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

A quick meeting with Sumalatha Ambareesh Says BY Vijayendra gvd
Author
First Published Mar 27, 2024, 6:06 AM IST

ಬೆಂಗಳೂರು (ಮಾ.27): ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಂಡ್ಯ ಜಿಲ್ಲೆಯ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಬಾರಿ ಹೇಳಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಎರಡು ಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು. 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಇಟ್ಟುಕೊಂಡು ಹೊರಟಿದ್ದೇವೆ. 

ಈ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭೆಯಲ್ಲಿ ಎಲ್ಲವನ್ನೂ ಬದಿಗೊತ್ತಿ ಜೆಡಿಎಸ್‌ಗೆ ಬೆಂಬಲ ನೀಡಿ ಗೆಲ್ಲಿಸಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದರು. ಮಂಡ್ಯದಲ್ಲಿ ನಾರಾಯಣಗೌಡ ಅವರು ಬಿಜೆಪಿಗೆ ಬಂದು ಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯ ತಳಮಟ್ಟದಲ್ಲಿ ದೊಡ್ಡ ಪಡೆಯೇ ಇದೆ ಎಂದು ಇದೇ ವೇಳೆ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ಹಾಲಿ ಸಂಸದೆ ಸುಮಲತಾ ಅಂಬರೀಶ್ ವಿಚಾರದಲ್ಲಿ ಪಕ್ಷದ ವರಿಷ್ಠರು ತುಂಬಾ ಗೌರವ ಇಟ್ಟುಕೊಂಡಿದ್ದಾರೆ. ಅವರನ್ನು ಭೇಟಿ ಮಾಡುತ್ತೇನೆ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುವುದು ಜವಾಬ್ದಾರಿ. ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ ವಿಶ್ವಾಸ

ಪಕ್ಷದಲ್ಲಿ ಹಿಡಿತ ಸಾಧಿಸಲು ಯತ್ನಿಸಿಲ್ಲ: ಇತ್ತೀಚಿನ ಪಕ್ಷದ ನಿರ್ಧಾರಗಳಲ್ಲಿ ಬಿಜೆಪಿಯನ್ನು ಬಲಗೊಳಿಸುವ ತಂತ್ರ ಅಡಗಿದೆಯೇ ಹೊರತು ಯಾವುದೋ ಒಂದು ಕುಟುಂಬವನ್ನು ಬಲಪಡಿಸುವಂಥ ಪ್ರಯತ್ನ ಅಥವಾ ನಮ್ಮ ಹಿಡಿತ ಸಾಧಿಸುವಂಥ ಹುನ್ನಾರ ಇಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಮವಾಗಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಿದ ಬಳಿಕ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ನಮ್ಮ ಮುಂದೆ ಎರಡು ಗುರಿಗಳಿವೆ. 

ಒಂದನೆಯದ್ದು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಬೇಕು. ಎರಡನೆಯದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಬೇಕು. ಈ ಎರಡೂ ಉದ್ದೇಶ ಇಟ್ಟುಕೊಂಡು ವರಿಷ್ಠರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಇದನ್ನು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಪಕ್ಷದಲ್ಲಿನ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 2018ರ ವಿಧಾನಸಭಾ ಚುನಾವಣೆಯಲ್ಲಿ ನಾನು ವರುಣ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಯತ್ನಿಸಿದೆ. 

ಸಿಎಂ ಸಿದ್ದರಾಮಯ್ಯರಿಂದ ಡ್ರಾಮಾ, ಅವರಿಗಿದು ಶೋಭೆಯಲ್ಲ: ಬಿ.ವೈ.ವಿಜಯೇಂದ್ರ

ವರಿಷ್ಠರು ಟಿಕೆಟ್ ಕೊಡುವುದಿಲ್ಲ ಎಂಬ ನಿರ್ಧಾರ ಕೈಗೊಂಡರು. ನಾನು ಪಕ್ಷದ ಕಾರ್ಯಕರ್ತನಾಗಿ ವರಿಷ್ಠರ ಆದೇಶವನ್ನು ಪಾಲನೆ ಮಾಡಿದೆ. ನಂತರ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯ ಬಿಜೆಪಿಯ ಕೋರ್‌ಕಮಿಟಿಯಲ್ಲಿ ನನ್ನನ್ನು ವಿಧಾನಪರಿಷತ್ ಸದಸ್ಯನಾಗಿ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಹೈಕಮಾಂಡ್ ಈ ನಿರ್ಣಯವನ್ನು ಒಪ್ಪಿಕೊಳ್ಳಲಿಲ್ಲ. ಕಾರ್ಯಕರ್ತನಾಗಿ ನಾನು ಹೈಕಮಾಂಡ್ ತೀರ್ಮಾನವನ್ನು ಚಾಚೂ ತಪ್ಪದೆ ಒಪ್ಪಿದೆ ಎಂದು ವಿವರಿಸಿದರು.

Follow Us:
Download App:
  • android
  • ios