ಪಂಜಾಬ್‌ನ ಆಮ್‌ ಆದ್ಮಿ ಪಾರ್ಟಿ(ಎಎಪಿ) ಸರ್ಕಾರವು ಟೋಲ್‌ ಪ್ಲಾಜಾಗಳನ್ನು ರದ್ದುಪಡಿಸಿರುವ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಟೋಲ್‌ ಪ್ಲಾಜಾಗಳನ್ನು ರದ್ದುಪಡಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದ್ದಾರೆ. 

ಬೆಂಗಳೂರು (ಏ.05): ಪಂಜಾಬ್‌ನ ಆಮ್‌ ಆದ್ಮಿ ಪಾರ್ಟಿ(ಎಎಪಿ) ಸರ್ಕಾರವು ಟೋಲ್‌ ಪ್ಲಾಜಾಗಳನ್ನು ರದ್ದುಪಡಿಸಿರುವ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಟೋಲ್‌ ಪ್ಲಾಜಾಗಳನ್ನು ರದ್ದುಪಡಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದ್ದಾರೆ. ಮಂಗಳವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಜಾಬ್‌ನ ನಮ್ಮ ಪಕ್ಷದ ಸರ್ಕಾರವು ಈವರೆಗೆ ಆ ರಾಜ್ಯದಲ್ಲಿ ಎಂಟು ಟೋಲ್‌ ಪ್ಲಾಜಾಗಳನ್ನು ರದ್ದುಪಡಿಸಿದೆ. 

Add Asianetnews Kannada as a Preferred SourcegooglePreferred

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಪ್ರತಿ ಟೋಲ್‌ ಪ್ಲಾಜಾಗೆ ತೆರಳಿ ಪರಿಶೀಲಿಸುತ್ತಿದ್ದಾರೆ. ಪಿಪಿಪಿ ಮಾದರಿಯ ಅಗ್ರಿಮೆಂಟ್‌ನಲ್ಲಿ ಏನಿದೆ? ಎಷ್ಟುಹಣ ಸಂಗ್ರಹವಾಗಬೇಕಿತ್ತು? ಎಷ್ಟುಹಣ ಸಂಗ್ರಹವಾಗಿದೆ. ಯಾವ ಟೋಲ್‌ ಪ್ಲಾಜಾ ಸ್ಥಗಿತಗೊಳಿಬೇಕು ಎಂಬುದು ಸೇರಿದಂತೆ ಎಲ್ಲಾ ಮಾಹಿತಿಗಳನ್ನು ತಿಳಿದು ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದರು. ಪಂಜಾಬ್‌ನಲ್ಲಿ ನಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಂಟು ಟೋಲ್‌ ಪ್ಲಾಜಾಗಳನ್ನು ಸ್ಥಗಿತಗೊಳಿಸಲಾಗಿದೆ. 

ಇಂದಿನಿಂದ ರಾಜ್ಯದಲ್ಲಿ ಐಟಿ ದಾಳಿಗೆ ಸಿದ್ಧತೆ: ಸುರ್ಜೇವಾಲಾ ಆರೋಪ

ಆದರೆ, ಕರ್ನಾಟಕದಲ್ಲಿ ಕಮಿಷನ್‌ ಆಸೆಗಾಗಿ ಅವಧಿ ಮುಗಿದರೂ ಟೋಲ್‌ ಶುಲ್ಕ ಮುಂದುವರೆಸಲು ಅವಕಾಶ ನೀಡಲಾಗಿದೆ. 20 ವರ್ಷದ ಗುತ್ತಿಗೆ ಅವಧಿ ಮುಗಿದಿದ್ದರೂ ತುಮಕೂರು ಟೋಲ್‌ ಪ್ಲಾಜಾ ಸೇರಿದಂತೆ ಗುತ್ತಿಗೆ ಅವಧಿ ಮುಗಿದಿರುವ ರಾಜ್ಯದ ಹಲವು ಟೋಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೆಟ್ರೋಲ್‌ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಟೋಲ್‌ ಶುಲ್ಕ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಮುಖಂಡರಾದ ಬಿ.ಟಿ.ನಾಗಣ್ಣ, ವಿಶ್ವನಾಥ್‌, ಜಗದೀಶ್‌ ಸದಂ ಇದ್ದರು.

ಆಪ್‌ ಗೆದ್ದರೆ 300 ಯನಿಟ್‌ ಉಚಿತ ವಿದ್ಯುತ್‌: ಕರ್ನಾಟಕ ವಿಧಾನಸಭಾ ಚನಾವಣೆ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷವು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟುಮೀಸಲಾತಿ, ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್‌ ವಿದ್ಯುತ್‌ ಉಚಿತ, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ ಮೂರು ಸಾವಿರ ರು. ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಭರವಸೆಗಳನ್ನು ‘ಕೇಜ್ರಿವಾಲ್‌ ಗ್ಯಾರಂಟಿ’ ಹೆಸರಲ್ಲಿ ನೀಡಿದೆ. ಪಕ್ಷದ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರು ಬುಧವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಗ್ಯಾರಂಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ಆಮ್‌ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರೆಂಟಿ ಕಾರ್ಡ್‌ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟುಈಡೇರಿಸುತ್ತೇವೆ. ಪ್ರಣಾಳಿಕೆಯಲ್ಲಿದ್ದ ಎಲ್ಲ ಗ್ಯಾರಂಟಿಗಳನ್ನು ದೆಹಲಿಯಲ್ಲಿ ಈಡೇರಿಸಿದ್ದೇವೆ. ಪಂಜಾಬ್‌ನಲ್ಲಿ ಕೂಡ ಒಂದೊಂದಾಗಿ ಜಾರಿಗೆ ಬರುತ್ತಿದೆ. ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ತಿಳಿಸಿದರು.

ವಿಜೃಂಭಣೆಯ ಐತಿಹಾಸಿಕ ಧರ್ಮರಾಯ ಹಸಿ ಕರಗ ಮಹೋತ್ಸವಕ್ಕೆ ಸಕಲ ಸಿದ್ಧತೆ

ಗುಣಮಟ್ಟದ ಆರೋಗ್ಯ ಸೇವೆಗಾಗಿ ಕ್ಲಿನಿಕ್‌ಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಹಳೆ ಪಿಂಚಣಿ ಯೋಜನೆ ಜಾರಿ ಮುಂತಾದ ಒಟ್ಟು ಹತ್ತು ವಲಯಗಳಿಗೆ ಸಂಬಂಧಿಸಿದ ಪ್ರಮುಖ ಗ್ಯಾರಂಟಿಗಳನ್ನು ಇಂದು ಘೋಷಿಸಲಾಗುತ್ತಿದೆ. ಜೊತೆಗೆ, ಬೆಂಗಳೂರು ಹಾಗೂ ರಾಜ್ಯದ ಪ್ರಾದೇಶಿಕ ಅಭಿವೃದ್ಧಿಗಾಗಿ ಪ್ರತ್ಯೇಕವಾದ ಗ್ಯಾರಂಟಿಗಳನ್ನು ಘೋಷಿಸುತ್ತಿದ್ದೇವೆ ಎಂದು ಹೇಳಿದರು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಅಶ್ವಿನ್‌ ಮಹೇಶ್‌, ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ ಮತ್ತಿತರರು ಭಾಗವಹಿಸಿದ್ದರು.