ಏಕನಾಥ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆಯನ್ನು 2 ಹೋಳು ಮಾಡಿ ಬಿಜೆಪಿ ಜತೆ ಸರ್ಕಾರ ರಚಿಸಿದ್ದರು. ಈಗ ಏಕ‘ನಾಥ್‌’ ಅವರಿಂದ ಸ್ಫೂರ್ತಿ ಪಡೆದು ಪಕ್ಷವೊಂದನ್ನು ವಿಭಜಿಸಿ ಬಿಜೆಪಿ ಜತೆ ಸರ್ಕಾರ ರಚಿಸುವುದೇ ‘ನಾಥ್‌ ಆಪರೇಶನ್‌’.

ಸತಾರಾ(ಮಹಾರಾಷ್ಟ್ರ)(ಮೇ.14): ಮಹಾರಾಷ್ಟ್ರದಲ್ಲಿ ತಾವು ಈ ಹಿಂದೆ ಶಿವಸೇನೆಯನ್ನು 2 ಹೋಳು ಮಾಡಿ ಬಿಜೆಪಿ ಜತೆ ಸರ್ಕಾರ ರಚಿಸಿದ ರೀತಿಯಲ್ಲಿ, ಕರ್ನಾಟಕದಲ್ಲೂ ‘ನಾಥ್‌ ಆಪರೇಷನ್‌’ ಹೆಸರಿನ ‘ರಹಸ್ಯ ಕಾರ್ಯಾಚರಣೆ’ ಲೋಕಸಭೆ ಚುನಾವಣೆ ನಂತರ ನಡೆಯಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಾಂಬ್‌ ಸಿಡಿಸಿದ್ದಾರೆ. ಅರ್ಥಾತ್‌, ಕಾಂಗ್ರೆಸ್‌ 2 ಹೋಳಾಗಲಿದ್ದು, ಅದರಲ್ಲಿನ ಒಬ್ಬ ನಾಯಕ ಸಿಡಿದೆದ್ದು ಬಂದು ಬಿಜೆಪಿ ಜತೆ ಸೇರಿ ಸರ್ಕಾರ ರಚಿಸುವ ಸಾಧ್ಯತೆ ಇದೆ ಎಂದು ಅವರು ಯಾವ ಪಕ್ಷದ ಹೆಸರೂ ಎತ್ತದೇ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸತಾರಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಶಿಂಧೆ, ‘ಕರ್ನಾಟಕಕ್ಕೆ ಇತ್ತೀಚೆಗೆ ನಾನು ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಆಗ ಅಲ್ಲಿನ ಕೆಲವು (ಬಿಜೆಪಿ) ನಾಯಕರು, ‘ನಾವು ಇಲ್ಲಿ ‘ನಾಥ್‌ ಆಪರೇಶನ್‌’ ಮಾಡಬೇಕಿದೆ. ಎಂದರು. ನಾನು ‘ನಾಥ್‌ ಆಪರೇಶನ್‌ ಎಂದರೇನು?’ ಎಂದು ಕೇಳಿದೆ. ಅದಕ್ಕೆ ಅವರು, ‘ನೀವು ಏಕನಾಥ ಶಿಂಧೆ. ಮಹಾರಾಷ್ಟ್ರದಲ್ಲಿ ಶಿವಸೇನೆಯನ್ನು ಒಡೆದು ಪ್ರತ್ಯೇಕ ಬಣ ರಚಿಸಿಕೊಂಡು ಬಿಜೆಪಿ ಜತೆ ಮೈತ್ರಿ ಸರ್ಕಾರ ಮಾಡಿದಿರಿ. ನಿಮ್ಮಿಂದ ಸ್ಫೂರ್ತಿ ಪಡೆದು ಅದೇ ರೀತಿ ನಾವು ಕರ್ನಾಟಕದಲ್ಲಿ ಮಾಡಬೇಕು ಎಂದುಕೊಂಡಿದ್ದೇವೆ. ಅದಕ್ಕೇ ನಿಮ್ಮ ಹೆಸರನ್ನೇ ‘ನಾಥ್‌ ಆಪರೇಶನ್‌’ ಎಂದು ಇಸಟ್ಟಿದ್ದೇವೆ’ ಎಂದು ವಿವರಿಸಿದರು’ ಎಂದರು.

ಲಾರೆನ್ಸ್ ಬಿಷ್ಣೋಯ್‌ನನ್ನು ಮುಗಿಸಿ ಬಿಡುತ್ತೇವೆ: ಮಹಾರಾಷ್ಟ್ರ ಸಿಎಂ

‘ಇದಲ್ಲ ಏನು ತೋರಿಸುತ್ತದೆ ಎಂದರೆ ಕರ್ನಾಟಕದಲ್ಲೂ ಏನೋ ನಡೆದಿದೆ. ಲೋಕಸಭೆ ಚುಣಾವಣೆ ನಂತರ ಅದು ಆಗಲಿದೆ. ‘ನಿಮ್ಮ ಅನುಭವ ನಮಗೆ ತುಂಬಾ ಸಹಾಯ ಮಾಡುತ್ತಿದೆ’ ಎಂದು ಅವರು (ಬಿಜೆಪಿ ನಾಯಕರು) ನನಗೆ ಹೇಳಿದರು. ಆಗ ‘ಒಳ್ಳೇದು. ನಾನು ಆಗ ಮತ್ತೆ ಕರ್ನಾಟಕಕ್ಕೆ ಭೇಟಿ ನೀಡುವೆ’ ಎಂದು ಭರವಸೆ ನೀಡಿದೆ’ ಎಂದು ಶಿಂಧೆ ಸ್ವಾರಸ್ಯಕರವಾಗಿ ವಿವರಿಸಿದರು.

ಏನಿದು ನಾಥ್‌ ಆಪರೇಶನ್‌?

ಏಕನಾಥ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆಯನ್ನು 2 ಹೋಳು ಮಾಡಿ ಬಿಜೆಪಿ ಜತೆ ಸರ್ಕಾರ ರಚಿಸಿದ್ದರು. ಈಗ ಏಕ‘ನಾಥ್‌’ ಅವರಿಂದ ಸ್ಫೂರ್ತಿ ಪಡೆದು ಪಕ್ಷವೊಂದನ್ನು ವಿಭಜಿಸಿ ಬಿಜೆಪಿ ಜತೆ ಸರ್ಕಾರ ರಚಿಸುವುದೇ ‘ನಾಥ್‌ ಆಪರೇಶನ್‌’.