ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲವನ್ನು ವಿಧಾನ ಮಂಡಲ ಅಧೀವೇಶನದ ಬಳಿಕ ಸಭೆ ಕರೆದು ಚರ್ಚಿಸಲಾಗುವುದು. ವಾಲ್ಮೀಕಿ ಸಮುದಾಯ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆಂಗಳೂರು (ಜು.06): ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲವನ್ನು ವಿಧಾನ ಮಂಡಲ ಅಧೀವೇಶನದ ಬಳಿಕ ಸಭೆ ಕರೆದು ಚರ್ಚಿಸಲಾಗುವುದು. ವಾಲ್ಮೀಕಿ ಸಮುದಾಯ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗದಿಂದ ಮನವಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಜೆಟ್‌ ಅಧಿವೇಶನ ಮುಗಿದ ಬಳಿಕ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕವಾಗಿ ಸಭೆ ಕರೆದು ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಚರ್ಚಿಸುತ್ತೇನೆ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ದವಾಗಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬಿಜೆಪಿ ಕಚೇರಿಗೆ ಯುವ ‘ಕಾಂಗ್ರೆಸ್‌’ಪಡೆ ಮುತ್ತಿಗೆ ಯತ್ನ: ನಲಪಾಡ್‌ ನೇತೃತ್ವದಲ್ಲಿ ಧರಣಿ

ಮುಸ್ಲಿಂ ಮೀಸಲೂ ರದ್ದಾಗಿದೆ: ಹಿಂದಿನ ಸರ್ಕಾರ ಮೀಸಲಾತಿ ಕುರಿತು ಆತುರಾತುರವಾಗಿ ತೀರ್ಮಾನ ಮಾಡಿ, ಗೊಂದಲ ಸೃಷ್ಟಿಸಿದೆ. ಮುಸ್ಲಿಂರಿಗೆ ಶೇ.4ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ ಶೇ.2 ರಷ್ಟುಮೀಸಲಾತಿ ನೀಡಿದೆ. 2 ಸಿ, 2 ಡಿ ಸಹ ಮಾಡಿದ್ದು ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಪರಿಶಿಷ್ಟಜಾತಿ ಹಾಗೂ ಪಂಗಡದ ನಕಲಿ ಜಾತಿ ಪ್ರಮಾಣಪತ್ರದ ಬಗ್ಗೆ ಸಿ.ಆರ್‌.ಇ. ಸೆಲ್‌ನಲ್ಲಿ ಕ್ರಮ ತೆಗೆದುಕೊಳ್ಳಬೇಕು. ರಾಯಚೂರು, ವಿಜಯಪುರ ಭಾಗದಲ್ಲಿ ಕೋಲಿ, ಕಬ್ಬಲಿಗ, ತಳವಾರ ಸಮುದಾಯಗಳನ್ನು ಎಸ್‌.ಟಿ.ಗೆ ಸೇರಿಸಬೇಕು ಎಂಬ ಬೇಡಿಕೆ ಇದೆ. ಕೋಲಿ ಸಮಾಜದವರು ತಳವಾರರು ಎಂದೇ ಹೇಳುತ್ತಾರೆ. ಈ ಗೊಂದಲಗಳ ಬಗ್ಗೆಯೂ ತೀರ್ಮಾನವಾಗಬೇಕು. ನಾಯಕ ಸಮುದಾಯದ ತಳವಾರರನ್ನು ಮಾತ್ರ ಎಸ್‌.ಟಿ.ಗೆ ಸೇರಿಸಲಾಗಿದ್ದು ಇವೆಲ್ಲಾ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು ಸಂವಿಧಾನ ಮತ್ತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ನನ್ನ ಆಸ್ತಿ ತನಿಖೆ ಮಾಡಲಿ: ಕಾಂಗ್ರೆಸ್‌ಗೆ ಎಚ್‌.ಡಿ.ಕುಮಾರಸ್ವಾಮಿ ಸವಾಲು

ಪರಿಶಿಷ್ಟ ಪಂಗಡಕ್ಕೆ ಸ್ಥಾಪನೆಯಾಗಿರುವ ಪ್ರತ್ಯೇಕ ಸಚಿವಾಲಯಕ್ಕೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ಬುಡಕಟ್ಟು ಸಲಹಾ ಮಂಡಳಿ ಸ್ಥಾಪನೆ ಬಗ್ಗೆ ವರದಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಮೀಸಲಾತಿಯನ್ನು ಸಂವಿಧಾನದ 9 ನೇ ಪರಿಚ್ಛೇಧಕ್ಕೆ ಸೇರಿಸಲು ನಮ್ಮ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುತ್ತದೆ. ಅದಕ್ಕೆ ಮೊದಲು ಬಿಜೆಪಿ ಸರ್ಕಾರ ಸೃಷ್ಟಿಸಿದ ಎಲ್ಲಾ ಗೊಂದಲ ನಿವಾರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ವಿವರಿಸಿದರು. ಸಹಕಾರ ಸಚಿವ ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ವಾಲ್ಮೀಕಿ ಸಮುದಾಯದ 14 ಶಾಸಕರು, ಮುಖಂಡರು ಹಾಜರಿದ್ದರು.