ಕಳೆದ ಮೂರು ವರ್ಷಗಳ ನಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿರಿಸಲು ಜನಸ್ಪಂದನ ಸಮಾವೇಶ ಮಾಡಲಾಗುತ್ತಿದೆ. 

ಬೆಂಗಳೂರು(ಸೆ.11): ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದೆ. ಸೂರ್ಯ-ಚಂದ್ರ ಇರುವುದು ಎಷ್ಟುಸತ್ಯವೋ ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ದೊಡ್ಡಬಳ್ಳಾಪುರದಲ್ಲಿ ಶನಿವಾರ ನಡೆದ ‘ಜನಸ್ಪಂದನ ಸಮಾವೇಶ’ದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ನಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿರಿಸಲು ಜನಸ್ಪಂದನ ಸಮಾವೇಶ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದ ಮಂಗಳೂರು ಸಮಾವೇಶಕ್ಕೆ ಸ್ವಯಂ ಪ್ರೇರಣೆಯಿಂದ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಜನರು ಬಂದಿದ್ದರು. ಇಂದಿನ ಸಮಾವೇಶಕ್ಕೂ ಅದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ನೋಡಿ ಜನರು ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಬಂದಿದ್ದಾರೆ. ಆದರೆ, ಕಾಂಗ್ರೆಸ್‌ ನಾಯಕರು ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ ಎಂದರು.

ಬಿಜೆಪಿ ಜನೋತ್ಸವದ ದಿನ ಕಾಂಗ್ರೆಸ್‌ನಿಂದ ಭ್ರಷ್ಟೋತ್ಸವ: ಡಿಕೆಶಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಮಾತ್ರ ನಾಯಕನಲ್ಲ. ವಿಶ್ವಮಟ್ಟದ ನಾಯಕನಾಗಿದ್ದಾರೆ. ಮೋದಿ ಅವರು ಒಂದು ಜಾತಿ, ಧರ್ಮಕ್ಕೆ ಸೀಮಿತವಾದ ನಾಯಕನಲ್ಲ. ದೇಶದ 130 ಕೋಟಿ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಬೇಲ್‌ ಮೇಲೆ ಇರುವವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಅಧಿಕಾರದಲ್ಲಿ ಇದ್ದಾಗ ದೇಶದ ಇಬ್ಭಾಗ ಮಾಡಿದರು. ಧರ್ಮಗಳ ನಡುವೆ ಬೆಂಕಿ ಹಚ್ಚಿದ್ದರು, ದೇಶ, ಧರ್ಮ, ರಾಜ್ಯ ಒಡೆಯುವ ಕೆಲಸ ಮಾಡಿದ್ದರು. ನೆಹರೂ ಅವರು ಸ್ವಾರ್ಥಕ್ಕಾಗಿ ಈ ದೇಶ ಒಡೆದರು. ಇದೀಗ ಭಾರತ ಜೋಡೋ ಕಾರ್ಯಕ್ರಮ ಮಾಡುತ್ತಿರುವ ರಾಹುಲ್‌ ಗಾಂಧಿ, ಇದನ್ನು ಕೈಬಿಟ್ಟು ಪಕ್ಷದ ನಾಯಕರನ್ನು ಜೋಡಿಸುವ ಕೆಲಸ ಮಾಡಲಿ ಎಂದು ಶ್ರೀರಾಮುಲು ಹೇಳಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಗುಲಾಮ್‌ ನಬಿ ಆಜಾದ್‌, ಕಪಿಲ್‌ ಸಿಬಲ್‌ ಸೇರಿದಂತೆ ಅನೇಕರು ಪಕ್ಷದ ಬಿಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದೆ. ಆದರೆ, ಮುಂದಿನ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಪ್ರಯತ್ನಗಳು ಹುಸಿಯಾಗಲಿವೆ ಎಂದರು.