ತಾಲೂಕಿನ ಕಡುವಿನಕಟ್ಟೆ ಗ್ರಾಮದ ಅನೇಕ ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಬುಧವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ ಕುಮಾರ್‌ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ

ಚಾಮರಾಜನಗರ : ತಾಲೂಕಿನ ಕಡುವಿನಕಟ್ಟೆ ಗ್ರಾಮದ ಅನೇಕ ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಬುಧವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ ಕುಮಾರ್‌ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಡುವಿನ ಕಟ್ಟೆ ಹುಂಡಿ (ಕೆ.ಕೆ.ಹುಂಡಿ) ಗ್ರಾಮದ ಮುಖಂಡರಾದ ಪ್ರಕಾಶ್ ಮಂಜು, ದರ್ಶನ್, ನಾಗಣ್ಣ, ಉಮೇಶ್‌ ಅವರಿಗೆ ಪಕ್ಷದ ಶಾಲು ಹಾಕಿ ಸ್ವಾಗತಿಸಿದರು.

ಬಳಿಕ ಮಾತನಾಡಿದ ನಿರಂಜನ್‌ ಕುಮಾರ್‌, ದೇಶದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರರಹಿತ ಆಡಳಿತಕ್ಕೆ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಅವರ ನಾಯಕತ್ವದ ಬಿಜೆಪಿ ವಿಶ್ವವ್ಯಾಪಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಅದೇ ರೀತಿ ರಾಜ್ಯದಲ್ಲಿಯು ಸಹ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಹಂಬಲದೊಂದಿಗೆ ಅನೇಕ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುತ್ತಿದೆ.

ಯುವಕರು ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆ

ಕೆಕೆ ಹುಂಡಿ ಗ್ರಾಮದ ಯುವಕರು ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದರು.ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗ್ರಾಮ, ಹೋಬಳಿ ವ್ಯಾಪ್ತಿಯಲ್ಲಿ ಇನ್ನು ಹೆಚ್ಚು ಮಂದಿಯನ್ನು ಪಕ್ಷಕ್ಕೆ ತತ್ವ ಸಿದ್ಧಾಂತವನ್ನು ಒಪ್ಪಿ ಸೇರ್ಪಡೆ ಮಾಡಿಕೊಳ್ಳುವ ಮೂಲಕ ತಾಲೂಕಿನ ಪಕ್ಷವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಪ್ರಬಲಗೊಳಿಸೋಣ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲರು ಪಣ ತೊಡೋಣ ಎಂದರು.

ಕ್ಷೇತ್ರದಲ್ಲಿ ಆಡಳಿತ ಕುಸಿದಿದೆ

ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್‌. ಮಲ್ಲಿಕಾರ್ಜುನಪ್ಪ ಮಾತನಾಡಿ, ಕ್ಷೇತ್ರದಲ್ಲಿ ಆಡಳಿತ ಕುಸಿದಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳ ನಡೆಯುತ್ತಿಲ್ಲ. ನಗರಸಭೆ 31 ವಾರ್ಡುಗಳಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದೇ ನಿವಾಸಿಗಳು ಪರಿತಪ್ಪಿಸುತ್ತಿದ್ದಾರೆ. ಹಳ್ಳಿಗಳು ಸಹ ಇದಕ್ಕೆ ಹೊರತಾಗಿಲ್ಲ. ಹೀಗಾಗಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಕ್ಕಪಾಠ ಕಲಿಸಲು ಜನರು ಮನಸ್ಸು ಮಾಡಿದ್ದಾರೆ ಎಂದು ತಿಳಿದರು.

ಜಿಪಂ ಮಾಜಿ ಸದಸ್ಯ ಸಿ.ಎನ್‌. ಬಾಲರಾಜು ಮಾತನಾಡಿ, ಕಾಂಗ್ರೆಸ್ ದುರಾಡಳಿತ ವಿರುದ್ಧ ಜನರು ಬೇಸತ್ತಿದ್ದಾರೆ. ಕಡುವಿನ ಕಟ್ಟೆ ಹುಂಡಿ ಗ್ರಾಮದ ಯುವಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಆ ಗ್ರಾಮದ ಬೂತ್‌ನಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಬರಲಿದೆ. ಆ ನಿಟ್ಟಿನಲ್ಲಿ ನಿಮ್ಮ ಕಾರ್ಯಯೋಜನೆಯನ್ನು ನಾವೆಲ್ಲರು ರೂಪಿಸೋಣ. ಇನ್ನು ಅನೇಕರು ಪಕ್ಷಕ್ಕೆ ಬರುವವರಿದ್ದಾರೆ. ಅವರನ್ನು ಸೇರ್ಪಡೆ ಮಾಡಿಕೊಂಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವ ಸ್ವಾಮಿ, ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾಡಹಳ್ಳಿ ಕುಮಾರ್‌, ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ನಿಂಗೇಗೌಡ, ಗ್ರಾಪಂ ಮಾಜಿ ಉಪಾಧ್ಯಕ್ಷ ಕುಮಾರ ಸ್ವಾಮಿ, ಎಸ್. ಬಾಲಸುಬ್ರಮಣ್ಯ, ಮಾಜಿ ಅಧ್ಯಕ್ಷ ರಾಜು, ವಕೀಲ ಹೊಸೂರು ಮಹೇಶ್, ಉಡಿಗಾಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹೆಗ್ಗೋಠಾರ ಮಂಜು, ಶಿವಪುರ ಶಕಿ ಕೇಂದ್ರ ಅಧ್ಯಕ್ಷ ಶಿವರಾಜು ಮೊದಲಾದರು ಇದ್ದರು.