ಅನಿತಾ ಕುಮಾರಸ್ವಾಮಿ ಅವರಿಗೆ ರಾಜಕಾರಣವೇ ಇಷ್ಟವಿಲ್ಲ. ಎರಡು ಬಾರಿ ಅನಿವಾರ್ಯ ಕಾರಣಗಳಿಂದ ಮಧುಗಿರಿ ಹಾಗೂ ರಾಮನಗರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ರಾಮನಗರ (ಏ.04): ನಮ್ಮ ಕುಟುಂಬದಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ ರಾಜಕಾರಣವೇ ಇಷ್ಟವಿಲ್ಲ. ಆದರೆ, ನಾನು ಸಿನಿಮಾ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದರಿಂದ ಎರಡು ಬಾರಿ ಅನಿವಾರ್ಯ ಕಾರಣಗಳಿಂದ ಮಧುಗಿರಿ ಹಾಗೂ ರಾಮನಗರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು ಎಂದು ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಹಿಂದೆ ಮಧುಗಿರಿ ಹಾಗೂ ರಾಮನಗರದಲ್ಲಿ ಅನಿರೀಕ್ಷಿತವಾಗಿ ಸ್ಪರ್ಧೆ ಮಾಡಿದ್ದರು. ಕಳೆದ ಬಾರಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿ ಗೆದ್ದರು. ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಟಿಕೇಟ್ ಆಕಾಂಕ್ಷಿಗಳಲ್ಲ, ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿಗಳ ಫೇಕ್ ಲಿಸ್ಟ್ ರಿಲೀಸ್: ಹೈಕಮಾಂಡ್ಗೆ ಪೀಕಲಾಟ- ಆಕಾಂಕ್ಷಿಗಳ ಹೊಡೆದಾಟ
ಎಲ್ಲಾ ಪಕ್ಷದಲ್ಲೂ ಗೊಂದಲಗಳು ಇದ್ದೇ ಇರುತ್ತದೆ. ಅಂತಿಮವಾಗಿ ವರಿಷ್ಠರು ಈ ಬಗ್ಗೆ ನಿರ್ಧಾರ ಮಾಡ್ತಾರೆ. ದೇವೇಗೌಡರು ಪಕ್ಷವನ್ನ ಕಟ್ಟಿ ಬೆಳಿಸಿದವರು. ಜೆಡಿಎಸ್ ಹೋರಾಟದ ಹಿನ್ನೆಲೆಯಲ್ಲಿ ಬಂದ ಪಕ್ಷವಾಗಿದೆ. ಪಕ್ಷ ಉಳಿಸಿಕೊಳ್ಳಲು ನಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದೇವೆ. ಪಕ್ಷ ಹೇಳಿದರೆ ನಾನೇ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಕಾರ್ಯಕರ್ತರು, ಮುಖಂಡರು ತೀರ್ಮಾನ ಮಾಡಿದ್ರೆ ನಾನೇ ಬ್ಯಾಕ್ ಆಫ್ ಆಗುತ್ತೇನೆ ಎಂದು ಮಾಹಿತಿ ನೀಡಿದರು.
ಸರಣಿ ಟ್ವೀಟ್ ಮೂಲಕ ಸ್ಪರ್ಧಿಸಲ್ಲ ಎಂದ ಅನಿತಾ:
"ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ.
ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ಶ್ರೀ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಪೂಜ್ಯ ಶ್ರೀ ದೇವೇಗೌಡ ಅವರು & ಶ್ರೀ ಕುಮಾರಸ್ವಾಮಿ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ.
ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ.
2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್ ಪಕ್ಷ, ಪೂಜ್ಯ ಶ್ರೀ ದೇವೇಗೌಡ ಅವರು, ಶ್ರೀ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ.
ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!
ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ.
ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ.
ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ.
ಒಟ್ಟು 7 ಸರಣಿ ಟ್ವೀಟ್ಗಳ ಮೂಲಕ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
