ಎಲ್ಲ ಚುನಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ.

ಬೆಂಗಳೂರು (ಏ.05): ‘ಎಲ್ಲ ಚುನಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ’ ಎಂದು ಜೆಡಿಎಸ್‌ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಪರೋಕ್ಷವಾಗಿ ತಮ್ಮ ಓರಗಿತ್ತಿ ಭವಾನಿ ರೇವಣ್ಣ ಅವರಿಗೆ ಟಾಂಗ್‌ ನೀಡಿದ್ದಾರೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 

Add Asianetnews Kannada as a Preferred SourcegooglePreferred

ಇದು ಶುದ್ಧ ಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ದನಿಗೂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹ, ಜೆಡಿಎಸ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಎಳೆದು ತರಬೇಡಿ. ಅವರಿಗೆ ರಾಜಕೀಯ ಮಾಡಿ ಸಾಧಿಸುವುದು ಏನೂ ಇಲ್ಲ. ಪಕ್ಷ ಉಳಿಸಿಕೊಳ್ಳುವ ಸಂಬಂಧ ಕಣಕ್ಕಿಳಿಸಬೇಕಾಯಿತು ಎಂದು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ಕುರಿತು ಹಬ್ಬಿರುವ ವದಂತಿಗೆ ಟ್ವೀಟರ್‌ ಮೂಲಕ ಸ್ಪಷ್ಟನೆ ನೀಡಿರುವ ಅನಿತಾ ಕುಮಾರಸ್ವಾಮಿ, ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ಗೆ ಬಿಟ್ಟುಕೊಟ್ಟಿದ್ದೇನೆ. 

ಸೇಡಂ ಜಿದ್ದಾಜಿದ್ದಿ: ಕಾಗಿಣಾ ತೀರದಲ್ಲಿ ಈ ಬಾರಿ ಮತ್ತೊಂದು ಚತುಷ್ಕೋನ ಕದನ

ಪುನಃ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಪಕ್ಷದ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಸಹ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಮತ್ತು ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ. ದಯಮಾಡಿ ನನ್ನ ಭಾವನೆಯನ್ನು ಗೌರವಿಸಬೇಕು ಎಂದು ಮನವಿ ಮಾಡಿದ್ದಾರೆ.

ಹಾಸನಕ್ಕೆ ಹೋಲಿಸಬೇಡಿ- ಎಚ್‌ಡಿಕೆ: ಇದೇ ವಿಚಾರವಾಗಿ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಪಕ್ಷವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ಹಿಂದೆ ಸ್ಪರ್ಧಿಸಿ ಚುನಾಯಿತರಾಗಿದ್ದರು. ನಮ್ಮ ಅಭ್ಯರ್ಥಿಗಳು ಕೈ ಕೊಟ್ಟು ಹೋದಾಗ ಪಕ್ಷವನ್ನು ಉಳಿಸಿಕೊಳ್ಳುವುದು ಅನಿವಾರ್ಯವಾಗಿತ್ತು. ಅವರನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಂಡಿಲ್ಲ. ಕೆಲವರು ಸುಮ್ಮನೆ ಆರೋಪ ಮಾಡಿದರು. ಹಾಸನ ರಾಜಕೀಯವೇ ಬೇರೆ, ಮಂಡ್ಯ ರಾಜಕೀಯವೇ ಬೇರೆ. ಎರಡನ್ನು ಒಟ್ಟಿಗೆ ಮಾಡಿ ನೋಡುವುದು ಬೇಡ. ನಮ್ಮ ಕುಟುಂಬದಲ್ಲಿ ಟಿಕೆಟ್‌ಗಾಗಿ ಹೊಡೆದಾಟ ಇಲ್ಲ. 

ಡಿ.ಕೆ.ಶಿವಕುಮಾರ್‌ಗೆ ಸಿಎಂ ಹುದ್ದೆ ಕೊಡಲ್ಲ ಎಂದಿಲ್ಲ: ಸಿದ್ದರಾಮಯ್ಯ

ಇವೆಲ್ಲವೂ ಷಡ್ಯಂತ್ರ. ಪಕ್ಷಕ್ಕಾಗಿ ಅನಿತಾ ಅವರನ್ನು ಕಣಕ್ಕಿಳಿಸಬೇಕಾಯಿತೇ ಹೊರತು ಬೇರೆ ಉದ್ದೇಶ ಇಲ್ಲ. ಇದನ್ನು ಹಾಸನಕ್ಕೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.