ದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಅವರು ಸುಮಾರು ಮೂರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ಶಾಸಕಾಂಗ ಪಕ್ಷದ ನಾಯಕನ ನೇಮಕ ಶೀಘ್ರದಲ್ಲೇ ಮಾಡುವಂತೆ ಮನವಿ ಮಾಡಿದರು. ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಬೆಂಗಳೂರು(ಆ.09): ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ನೇಮಕ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಪ್ರಭಾವಿ ನಾಯಕರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎರಡು ದಿನಗಳ ಕಾಯುವಿಕೆ ಬಳಿಕ ಮಂಗಳವಾರ ದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಅವರು ಸುಮಾರು ಮೂರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ಶಾಸಕಾಂಗ ಪಕ್ಷದ ನಾಯಕನ ನೇಮಕ ಶೀಘ್ರದಲ್ಲೇ ಮಾಡುವಂತೆ ಮನವಿ ಮಾಡಿದರು. ಬುಧವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಬೆಲೆ ಏರಿಕೆ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ: ಬೊಮ್ಮಾಯಿ ಲೇವಡಿ

‘ಯಾರನ್ನೇ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮಾಡಿ. ಆದರೆ, ಆದಷ್ಟು ಬೇಗ ಮಾಡುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು. ಆಡಳಿತಾರೂಢ ಕಾಂಗ್ರೆಸ್‌ನ ವೈಫಲ್ಯಗಳ ವಿರುದ್ಧ ಪ್ರಬಲವಾಗಿ ಹೋರಾಟ ನಡೆಸಲು ನಾಯಕತ್ವದ ಅಗತ್ಯವಿದೆ. ನೀವು ಯಾರನ್ನೇ ಶಾಸಕಾಂಗ ಪಕ್ಷದ ನಾಯಕನನ್ನಾಗಿ ನೇಮಕ ಮಾಡಿದರೂ ಅವರ ನೇತೃತ್ವದಲ್ಲಿ ಹೋರಾಟ ನಡೆಸಲು ಅನುಕೂಲವಾಗುತ್ತದೆ. ಈಗ ನಾವು ಏನೇ ಹೋರಾಟ ಆರಂಭಿಸಿದರೂ ಶಾಸಕಾಂಗ ಪಕ್ಷದ ನಾಯಕನೇ ಇಲ್ಲ ಎಂಬ ಟೀಕೆ ಕಾಂಗ್ರೆಸ್‌ ಪಾಳೆಯದಿಂದ ಕೇಳಿಬರುತ್ತದೆ. ಇದು ಪಕ್ಷದ ಶಾಸಕರಿಗೆ ಮುಜುಗರ ಉಂಟು ಮಾಡುತ್ತದೆ. ಉತ್ತರ ನೀಡಲು ಕಷ್ಟವಾಗುತ್ತದೆ’ ಎಂಬ ಅಂಶವನ್ನು ಬೊಮ್ಮಾಯಿ ಅವರು ಅಮಿತ್‌ ಶಾ ಅವರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

‘ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸುವ ಬಗ್ಗೆಯೂ ಅಮಿತ್‌ ಶಾ ಅವರು ಬೊಮ್ಮಾಯಿ ಜತೆ ಸಮಾಲೋಚನೆ ನಡೆಸಿದರು. ಅಲ್ಲದೆ, ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹೇಗೆ ಸಾಗಿದೆ? ಅವುಗಳಿಗೆ ಜನರ ಪ್ರತಿಕ್ರಿಯೆ ಹೇಗಿದೆ ಎಂಬಿತ್ಯಾದಿ ಮಾಹಿತಿಯನ್ನೂ ಕೇಳಿ ಪಡೆದುಕೊಂಡರು’ ಎಂದು ಮೂಲಗಳು ತಿಳಿಸಿವೆ.