ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ರಾಜಕೀಯ ಜೀವನವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ನಿರ್ಧರಿಸಿದೆ. ಚಿತ್ರದುರ್ಗದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದ ಮೂಲಕ ಗೌರವಿಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ರಾಜಕೀಯ ಜೀವನದ 50 ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲು ನಿರ್ಧರಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಳಿಕ ಸಂಜೆ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಸಾರ್ವಜನಿಕವಾಗಿ ಬೃಹತ್ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಅಭಿನಂದಿಸುವ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಏಪ್ರಿಲ್-ಮೇ ತಿಂಗಳಿನಲ್ಲಿ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬಳಿಕ ಬಹುತೇಕ ಏಪ್ರಿಲ್ ಅಂತ್ಯ ಅಥವಾ ಮೇ ತಿಂಗಳಲ್ಲಿ ರಾಜ್ಯದ ಮಧ್ಯ ಭಾಗವಾದ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಏರ್ಪಡಿಸುವ ಬಗ್ಗೆ ಅಲ್ಲಿನ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಶ್ರೀರಾಮುಲು ಮತ್ತಿತರ ನಾಯಕರು ಒಲವು ತೋರಿದ್ದಾರೆ ಎನ್ನಲಾಗಿದೆ.

ಹಿನ್ನೋಟದ ಸ್ಮರಣೆ:

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಅವರು ತಮ್ಮ ರಾಜಕೀಯ ಜೀವನದ 50 ವರ್ಷಗಳನ್ನು ಪೂರೈಸುತ್ತಿದ್ದಾರೆ. ಹೀಗಾಗಿ, ಬುಧವಾರ ರಾಜ್ಯ ಕಾರ್ಯಕಾರಿಣಿಯಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಅಭಿನಂದನಾ ಕಾರ್ಯಕ್ರಮವೂ ನೆರವೇರಲಿದೆ. ಅವರ ರಾಜಕೀಯ ಜೀವನದ ಹಿನ್ನೋಟವನ್ನು ನೆನಪಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

1976ರಲ್ಲಿ ತಮ್ಮ 32ನೇ ವಯಸ್ಸಿನಲ್ಲಿ ರಾಜಕೀಯ ಪ್ರವೇಶ ಮಾಡಿದ ಯಡಿಯೂರಪ್ಪ ಅವರು ಶಿಕಾರಿಪುರ ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನದವರೆಗೆ ಸುದೀರ್ಘ ರಾಜಕಾರಣದ ಹಾದಿ ಸವೆಸಿದ್ದಾರೆ. ಬಿಜೆಪಿಯನ್ನು ಕಟ್ಟಿ ಬೆಳೆಸಿ ಅಧಿಕಾರದ ಗದ್ದುಗೆ ಏರುವವರೆಗೆ ಶ್ರಮಿಸಿದ ಯಡಿಯೂರಪ್ಪ ಅವರು ಸದ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿದ್ದರೂ ಪಕ್ಷದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ.

--