ಅನಾರೊಗ್ಯ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊರಗೆ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಡಿಸೆಂಬರ್ವರೆಗೆ ಇನ್ನೂ ಸಮಯವಿದೆ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.
ದಾವಣಗೆರೆ (ಜು.24): ಅನಾರೊಗ್ಯ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊರಗೆ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಡಿಸೆಂಬರ್ವರೆಗೆ ಇನ್ನೂ ಸಮಯವಿದೆ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು. ಈ ಮೂಲಕ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಎಂದು ಡಿಕೆಶಿ ಆಪ್ತ ಬಳಗದ ಶಾಸಕ ಶಿವಗಂಗಾ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಐದು ವರ್ಷದಲ್ಲಿ ಡಿಸೆಂಬರ್ ಸಹ ಇದೆಯಲ್ಲವೇ? ಕಾದು ನೋಡಿ ಅಷ್ಟೇ. ಎಲ್ಲರೂ ಒಗ್ಗಟ್ಟಾಗಿದ್ದರೆ ಏನೂ ಸಮಸ್ಯೆ ಇಲ್ಲ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಬಿಜೆಪಿ ರೀತಿಯ ಪರಿಸ್ಥಿತಿ ನಮ್ಮಲ್ಲಿಲ್ಲವೆಂದು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರ ಬಾಯಿಗೆ ಬೀಗ ಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಬಿಜೆಪಿಯಲ್ಲಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದಲೇ ಉಚ್ಚಾಟಿಸಿದರು. ಹೊನ್ನಾಳಿಯ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರಿಗೆ ಆ ಪಕ್ಷದ ವರಿಷ್ಟರು ವಾರ್ನಿಂಗ್ ಮಾಡಿದ್ದಾರೆ. ಅಂತಹ ಪರಿಸ್ಥಿತಿ ನಮ್ಮ ಪಕ್ಷದಲ್ಲಿ ಇಲ್ಲ ಎಂದು ತಿಳಿಸಿದರು. ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಸಮಾವೇಶದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದನ್ನು ನೋಡಿದೆ. ಅದು ಸಹಜವಾಗಿದ್ದು, ಕಾರ್ಯಕ್ರಮದಲ್ಲಿ ಇಲ್ಲದೇ ಇದ್ದವರ ಹೆರನ್ನು ಸಾಮಾನ್ಯವಾಗಿ ಹೇಳುವುದಿಲ್ಲ. ಹಾಗಾಗಿ ಮುಖ್ಯಮಂತ್ರಿಗಳು ಹಾಗೆ ಹೇಳಿರಬಹುದು ಎಂದು ಸಮರ್ಥಿಸಿಕೊಂಡರು.
ದಾವಣಗೆರೆಯಲ್ಲಿ ಪಂಚ ಪೀಠಾಧೀಶ್ವರರು, ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಜಾತಿಗಣತಿ ವೇಳೆ ವೀರಶೈವ ಲಿಂಗಾಯತ ಎಂಬುದಾಗಿ ಬರೆಸುವಂತೆ ಪಂಚ ಪೀಠಾಧೀಶರು ಸೂಚಿಸಿದ್ದನ್ನು, ಸಮ್ಮೇಳನದ ನಡೆಯನ್ನು ಸ್ವಾಗತಿಸುತ್ತೇನೆ. ಪಂಚ ಪೀಠಾಧೀಶರು ಹೇಳಿದಂತೆಯೇ ನಾವೆಲ್ಲರೂ ನಡೆದುಕೊಳ್ಳಬೇಕು. ಜಾತಿಗಣತಿ ವೇಳೆ ವೀರಶೈವ ಲಿಂಗಾಯತ ಅಂತಲೇ ಬರೆಸಬೇಕು ಎಂದು ಸಮಾಜ ಬಾಂಧವರಿಗೆ ಮನವಿ ಮಾಡಿದರು.
