ಪಕ್ಷವನ್ನು ಸಜ್ಜುಗೊಳಿಸಿ ಪಾಲಿಕೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಅಗತ್ಯ ಚುನಾವಣಾ ಸಿದ್ಧತೆ ಮಾಡಿ’ ಎಂದು ಬಿಬಿಎಂಪಿ ವ್ಯಾಪ್ತಿಯ ಕಾಂಗ್ರೆಸ್ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

ಬೆಂಗಳೂರು (ಜೂ.16): ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಶೀಘ್ರವೇ ಪ್ರಕಟವಾಗಲಿದೆ. ಈ ವೇಳೆಗೆ ಪಕ್ಷವನ್ನು ಸಜ್ಜುಗೊಳಿಸಿ ಪಾಲಿಕೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಅಗತ್ಯ ಚುನಾವಣಾ ಸಿದ್ಧತೆ ಮಾಡಿ’ ಎಂದು ಬಿಬಿಎಂಪಿ ವ್ಯಾಪ್ತಿಯ ಕಾಂಗ್ರೆಸ್ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವಿಭಜನೆ ನೆಪದಲ್ಲಿ ಚುನಾವಣೆ ವಿಳಂಬವಾಗುವುದಿಲ್ಲ. ಚುನಾವಣೆ ಬಳಿಕವೂ ವಿಭಜನೆ ಮಾಡಬಹುದು. ಹೀಗಾಗಿ ಬಿಬಿಎಂಪಿ ಚುನಾವಣೆಗೆ ಸಜ್ಜಾಗಿ. ಶತಾಯಗತಾಯ ಬಿಬಿಎಂಪಿಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ನಗರದ ಬ್ಲಾಕ್ ಕಾಂಗ್ರೆಸ್‌ ನಾಯಕರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್‌, ‘ಪಾಲಿಕೆ ಚುನಾವಣೆ ಸಿದ್ಧತೆ ಬಗ್ಗೆ ಸಭೆ ಮಾಡಿದ್ದೇವೆ. ಪಾಲಿಕೆ ಚುನಾವಣೆ ಶೀಘ್ರವೇ ಪ್ರಕಟವಾಗಲಿದ್ದು, ಈ ವೇಳೆ ಪಕ್ಷ ಸಜ್ಜುಗೊಳಿಸಲು ಸೂಚಿಸಿದ್ದೇನೆ’ ಎಂದು ಹೇಳಿದರು. ಇನ್ನು ಖಾಲಿ ಇರುವ ಪದಾಧಿಕಾರಿಗಳ ಹುದ್ದೆ ತುಂಬಲು, ನಿಷ್ಕ್ರಿಯರಾಗಿರುವ ಪದಾಧಿಕಾರಿಗಳ ಜಾಗಕ್ಕೆ ಬೇರೆಯವರನ್ನು ನೇಮಿಸುವಂತೆ ಸೂಚನೆ ನೀಡಿದ್ದೇನೆ. ಕೆಲಸ ಮಾಡದ ಪದಾಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ತಿದ್ದಿಕೊಳ್ಳದಿದ್ದರೆ ಅವರನ್ನು ಬದಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ನಾವು ಸೋತಿರಬಹುದು. ಆದರೆ ಪಾಲಿಕೆ ಚುನಾವಣೆಯಲ್ಲಿ ನಾವು ಚೇತರಿಸಿಕೊಳ್ಳುವ ವಿಶ್ವಾಸ ನನಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಬೇಕು ಎಂದು ನಾಯಕರಿಗೆ ಸೂಚಿಸಿದ್ದೇನೆ ಎಂದು ಶಿವಕುಮಾರ್‌ ತಿಳಿಸಿದರು. ಬಿಬಿಎಂಪಿ ವಿಭಾಗಿಸುವ ಬಗ್ಗೆ ಸಮಿತಿಯ ವರದಿ ಇದೆ. ಸದ್ಯಕ್ಕೆ 225 ವಾರ್ಡ್ ಮಾಡಲಾಗಿದ್ದು, ಚುನಾವಣೆ ನಂತರವೂ ಬಿಬಿಎಂಪಿ ವಿಭಜನೆ ಮಾಡಬಹುದು. ಈಗಲೇ ಮಾಡಬೇಕೆಂದೇನಿಲ್ಲ. ಹೀಗಾಗಿ ಚುನಾವಣೆ ಬಳಿಕ ವಿಭಜನೆ ಬಗ್ಗೆ ಪರಿಶೀಲಿಸಲಾಗುವುದು.-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ.

ಅಶೋಕ್‌ ಒಬ್ಬ ಸುಳ್ಳುಗಾರ ಹಾಗೂ ಜೋಕರ್‌: ಡಿ.ಕೆ.ಶಿವಕುಮಾರ್‌ ತಿರುಗೇಟು

ಜಿಪಂ, ತಾಪಂ ಚುನಾವಣೆ ಮಾಡುತ್ತೇವೆ: ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ ನಾವು ಚುನಾವಣೆ ನಡೆಸಲೇಬೇಕು. ಬಿಬಿಎಂಪಿ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಸೇರಿದಂತೆ ಎಲ್ಲಾ ಚುನಾವಣೆ ಮಾಡಲು ಬದ್ಧವಾಗಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.