ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ನಿಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮನವಿ

ಬೆಳಗಾವಿ(ಮೇ.04): ಹಿಂದೆ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗಲೆಲ್ಲ ಬಡವರಪರ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಸಾಧನೆ ಮಾಡಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ದೂರಿದರು. ಬೆಳಗಾವಿಯ ಮಣ್ಣೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಬುಧವಾರ ಪ್ರಚಾರ ನಡೆಸಿ ಮಾತನಾಡಿದ ಅವರು, ಉದ್ಯೋಗ ನೀಡುವ ಯೋಜನೆ ಇಲ್ಲ, ಮನೆ ನಿರ್ಮಾಣವಾಗಿಲ್ಲ, ಕೇವಲ ಭಾವನಾತ್ಮಕವಾಗಿ ಪ್ರಚೋದನೆ ನೀಡಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಹಾಗಾಗಿ ಮೇ.10ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವ ಮೂಲಕ ನಿಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಕೋರಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ಸಿಗಲಿದ್ದು, ಮೇ.10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಾಜನ ವರದಿಯ ತೀರ್ಪು ಬಂದ ನಂತರ ಗೋಕಾಕ ಜಿಲ್ಲೆ: ರಮೇಶ ಜಾರಕಿಹೊಳಿ

ಕಾಂಗ್ರೆಸ್‌ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಜನರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಂದ ಮುಕ್ತಿ ನೀಡಲಿವೆ. ಜತೆಗೆ ಪ್ರಣಾಳಿಕೆಯಲ್ಲಿ ಸಹ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಲಾಗಿದೆ. ರೈತರಿಗಾಗಿ, ಯುವಕರಿಗಾಗಿ, ಮಹಿಳೆಯರಿಗಾಗಿ ವಿವಿಧ ಯೋಜನೆಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಈ ಎಲ್ಲ ಯೋಜನೆಗಳು ಜಾರಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಕಾಂಗ್ರೆಸ್‌ ಇಲ್ಲದಂತೆ ಮಾಡುವ ಶಕ್ತಿ ಮೋದಿಗಿದೆ: ಸಚಿವ ರಾಮದಾಸ್‌ ಅಠವಳೆ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯ ಯಜಮಾನಿಗೆ ಪ್ರತಿ ತಿಂಗಳು .2 ಸಾವಿರದಂತೆ ವರ್ಷಕ್ಕೆ .24 ಸಾವಿರ ಪೋ›ತ್ಸಾಹ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು. ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು .3 ಸಾವಿರ ಹಾಗೂ ಡಿಪ್ಲೊಮಾ ಪದವೀಧರರಿಗೆ .15,00 ಗಳನ್ನು 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡಲಾಗುವುದು. ರೈತರ ಹಿತ ಕಾಯಲು ಸಹ ಕಾಂಗ್ರೆಸ್‌ ಸರ್ಕಾರ ವಿಶೇಷ ಯೋಜನೆ ರೂಪಿಸಲಿದೆ ಎಂದು ವಿವರಿಸಿದರು.

ಬ್ಯಾಲೆಟ್‌ ಯುನಿಟ್‌ನಲ್ಲಿ 4ನೇ ನಂಬರನಲ್ಲಿರುವ ನನ್ನ ಹೆಸರು ಫೋಟೋ ಮುಂದೆ ಇರುವ ಬಟನ್‌ ಒತ್ತುವ ಮೂಲಕ ಹಸ್ತದ ಚಿಹ್ನೆಗೆ ಮತ ನೀಡಿ. ಮಂದಿನ 5 ವರ್ಷಗಳಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ನನ್ನ ಹಲವಾರು ಕನಸಿನ ಯೋಜನೆಗಳನ್ನು ಜಾರಿಗೊಳಿಸುತ್ತೇನೆ. ನಿಮ್ಮ ನಿರೀಕ್ಷೆಗಳನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಅಂತ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ.