ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯೆ ಪ್ರವೇಶಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಬೆಂಗಳೂರು (ಜೂ.13): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯೆ ಪ್ರವೇಶಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ. ಈ ಕುರಿತು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು ಕಂಡುಬಂದಿದೆ ಎಂದು ದೂರಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 35 ಸಾವಿರ ಜನರಿಗೆ ಆಸನ ವ್ಯವಸ್ಥೆಯಿದೆ. ಆದರೆ ಉಚಿತ ಪಾಸ್ ಹಾಗೂ ತಪ್ಪಾದ ಘೋಷಣೆ, ಪ್ರಕಟಣೆಗಳಿಂದಾಗಿ ಅತ್ಯಧಿಕ ಸಂಖ್ಯೆಯಲ್ಲಿ ಜನ ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಇಂತಹ ಬೃಹತ್ ಕಾರ್ಯಕ್ರಮದಲ್ಲಿ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಕೂಡ ಇತ್ತು. ಆ್ಯಂಬುಲೆನ್ಸ್, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಕುಡಿಯುವ ನೀರು ಸೇರಿ ಅಗತ್ಯ ಸೌಲಭ್ಯಗಳನ್ನು ಒದಗಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ತಪ್ಪಿನಲ್ಲಿ ಆರ್ಸಿಬಿ, ಡಿಎನ್ಎ ಹಾಗೂ ಕ್ರಿಕೆಟ್ ಅಸೋಸಿಯೇಶನ್ನ ಪಾತ್ರವೂ ಇದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಸ್ವಯಂಪ್ರೇರಿತ ತನಿಖೆ ನಡೆಸಿ: ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಬಂದವರಲ್ಲಿ ಹೆಚ್ಚಿನವರು ಯುವಜನರೇ ಆಗಿದ್ದು, ಅವರ ಸುರಕ್ಷತೆ ಹಾಗೂ ಬದುಕುವ ಹಕ್ಕು ಕಿತ್ತುಕೊಂಡಂತಾಗಿದೆ. ಆದ್ದರಿಂದ ಈ ದುರಂತ ಕುರಿತು ಸ್ವಯಂ ಪ್ರೇರಿತವಾಗಿ ತನಿಖೆ ನಡೆಸಬೇಕು ಎಂದು ಆರ್.ಅಶೋಕ ಮನವಿ ಮಾಡಿದ್ದಾರೆ. ಇದು ನಿಜಕ್ಕೂ ತಡೆಯಬಹುದಾದ ದುರಂತರವಾಗಿತ್ತು. ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಧ್ಯಪ್ರವೇಶದಿಂದಾಗಿ ನೊಂದ ಕುಟುಂಬಗಳಿಗೆ ನ್ಯಾಯ ಸಿಗುವ ಜೊತೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬಹುದು ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ಡೀಸಿ ಮುಂದೆ ಹೇಳಿಕೆ ದಾಖಲು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾ ಮ್ಯಾಜಿಸ್ಟೇಟ್ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಬುಧವಾರ 10ಕ್ಕೂ ಹೆಚ್ಚಿನ ಗಾಯಾಳುಗಳಿಂದ ಹೇಳಿಕೆ ದಾಖಲಿಸಿಕೊಂಡರು. ಹೇಳಿಕೆ ನೀಡುವ ಕುರಿತು ಈಗಾಗಲೇ 55 ಗಾಯಾಳುಗಳಿಗೆ ನೋಟಿಸ್ ನೀಡಲಾಗಿದ್ದು, ಅದರಲ್ಲಿ ಬುಧವಾರ ಸುಮಾರು 14 ಮಂದಿ ಕಂದಾಯ ಭವನದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದರು. ವಿಡಿಯೋ ರೆಕಾರ್ಡಿಂಗ್ ಮೂಲಕ ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಉಳಿದ ಗಾಯಾಳುಗಳಲ್ಲಿ 10 ಮಂದಿಯ ಹೇಳಿಕೆಯನ್ನು ಈಗಾಗಲೇ ಆಸ್ಪತ್ರೆಯಲ್ಲೇ ದಾಖಲಿಸಲಾಗಿದೆ.
