ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಬಗ್ಗೆ ಕಾರ್ಯಕರ್ತರು ಪ್ರತಿ ಮನೆಗೂ ಮಾಹಿತಿ ತಲುಪಿಸುವ ಕೆಲಸ ಮಾಡಬೇಕು ಎಂದ ರವಿಕುಮಾರ

ರಾಯಬಾಗ(ನ.06): ಬಿಜೆಪಿಯನ್ನು ಸಂವಿಧಾನ ವಿರೋಧಿ, ಮೀಸಲಾತಿ ವಿರೋಧಿ, ಅಂಬೇಡ್ಕರ್‌ ವಿರೋಧಿ ಎಂದು ಟೀಕಿಸುತ್ತಿದ್ದ ವಿರೋಧ ಪಕ್ಷದವರಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವುದರ ಮೂಲಕ ಉತ್ತರ ನೀಡಿದೆ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ ಹೇಳಿದರು. ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಯಬಾಗ ಮತಕ್ಷೇತ್ರದ ಕಾರ್ಯಕರ್ತರ ಸಂಕಲ್ಪ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಬಗ್ಗೆ ಕಾರ್ಯಕರ್ತರು ಪ್ರತಿ ಮನೆಗೂ ಮಾಹಿತಿ ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೈತರ ಮಕ್ಕಳಿಗೆ ಶಿಷ್ಯವೇತನ, ರೈತರಿಗೆ ಕಿಸಾನ್‌ ಸಮ್ಮಾನ ನಿಧಿ, ಉಜ್ವಲ ಯೋಜನೆ, ಮನೆ ಮನೆಗೆ ನಳ ಸಂಪರ್ಕ, ಎಸ್‌ಸಿ/ಎಸ್‌ಟಿ ಬಿಪಿಎಲ್‌ ಪಡಿತರದಾರರಿಗೆ 75 ಯುನಿಟ್‌ ಉಚಿತ ವಿದ್ಯುತ್‌ ಯೋಜನೆ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತಂದು ದೇಶ ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದೆ. ಇನ್ನು ಐದು ವರ್ಷಗಳ ಕಾಲ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವದ ನಂ.1 ಸ್ಥಾನ ಪಡೆಯುವುದರಲ್ಲಿ ಯಾವುದೇ ಸಂಶಯ ಬೇಡ ಎಂದ ಅವರು, ಕಾರ್ಯಕರ್ತರು ಬೂತ್‌ಮಟ್ಟದಿಂದ ಪಕ್ಷವನ್ನು ಇನ್ನಷ್ಟುಬಲಿಷ್ಠಗೊಳಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ನಿಶ್ಚಿತವಾಗಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಪ್ರಭಾಕರ ಕೋರೆ

ಶಾಸಕ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಂ.ಐಹೊಳೆ ಮಾತನಾಡಿ, ರಾಯಬಾಗ ಪಟ್ಟಣದಲ್ಲಿ ನ.9ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಂಕಲ್ಪ ಯಾತ್ರೆ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯ ಮುಖಂಡರು, ಸಚಿವರು, ಜಿಲ್ಲೆಯ ಶಾಸಕರು, ಸಂಸದರು ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿ, ಬಿಜೆಪಿ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಪಕ್ಷ 150 ಸ್ಥಾನಗಳನ್ನು ಗೆಲ್ಲಲು ಪಣತೊಡಬೇಕು. ಈ ಸಭೆಗೆ ಸುಮಾರು 50 ಸಾವಿರ ಜನರ ಕೂಡುವ ವ್ಯವಸ್ಥೆ ಆಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಅಮರಸಿಂಹ ಪಾಟೀಲ, ಸಿಬಿಕೆಎಸ್‌ಎಸ್‌ಕೆ ಅಧ್ಯಕ್ಷ ಭರತೇಶ ಬನವಣೆ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಭೆಂಡವಾಡೆ, ಜಿಲ್ಲಾ ಉಪಾಧ್ಯಕ್ಷ ಸದಾನಂದ ಹಳಿಂಗಳಿ, ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೊಣವಾಡೆ, ನ್ಯಾಯವಾದಿ ಎಲ್‌.ಬಿ.ಚೌಗುಲೆ, ಮಹೇಶ ಭಾತೆ, ಮಲ್ಲಪ್ಪ ಮೈಶಾಳೆ, ರಾಜಶೇಖರ ಖನದಾಳೆ, ರಾಮಚಂದ್ರ ನಿಶಾನಂದಾರ, ತಾತ್ಯಸಾಹೇಬ ಕಾಟೆ, ಅಣ್ಣಾಸಾಹೇಬ ಖೆಮಲಾಪೂರೆ, ಸದಾಶಿವ ಘೋರ್ಪಡೆ, ಅರುಣ ಐಹೊಳೆ, ಗಂಗಾಧರ ಮೈಶಾಳೆ, ಅಮೀತ ಜಾಧವ, ಸಂಗಣ್ಣ ದತ್ತವಾಡೆ, ಅಪ್ಪಾಸಾಬ ಬ್ಯಾಕೂಡೆ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು. ಬಸವರಾಜ ಡೊಣವಾಡೆ ಸ್ವಾಗತಿಸಿದರು. ಕೆ.ಎಂ.ಮಡಿವಾಳ ನಿರೂಪಿಸಿ, ವಂದಿಸಿದರು.

ರಾಯಬಾಗ ಪಟ್ಟಣದಲ್ಲಿ ನ.9ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಂಕಲ್ಪ ಯಾತ್ರೆ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯದ ಮುಖಂಡರು, ಸಚಿವರು, ಜಿಲ್ಲೆಯ ಶಾಸಕರು, ಸಂಸದರು ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಎಲ್ಲರೂ ಸೇರಿಕೊಂಡು ಯಶಸ್ವಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಅಂತ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಡಿ.ಎಂ.ಐಹೊಳೆ ತಿಳಿಸಿದ್ದಾರೆ.