ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆಯ 6ನೇ ದಿನದಂದು ಲಕ್ಷ್ಮಿ ಅರುಣಾ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಉಚಿತ ಬಸ್ ಯೋಜನೆ ಮಹಿಳೆಯರಿಗೆ 'ಸಾವಿನ ಭಾಗ್ಯ'ವಾಗಿ ಪರಿಣಮಿಸಿದೆ ಎಂದು ಕಿಡಿಕಾರಿದರು.

ಕೊಪ್ಪಳ/ಕಂಪ್ಲಿ: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ 'ಬಳ್ಳಾರಿ ಚಲೋ' ಪಾದಯಾತ್ರೆ ಇಂದು 6ನೇ ದಿನಕ್ಕೆ ಕಾಲಿಟ್ಟಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಬೃಹತ್ ಬಹಿರಂಗ ಸಮಾವೇಶದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಅರುಣಾ, ರಾಜ್ಯದಲ್ಲಿರುವ ಡಿಕೆಶಿ ಸರ್ಕಾರ ಕೇವಲ ಭ್ರಷ್ಟ ಸರ್ಕಾರವಲ್ಲ, ಇದು ಮಹಿಳಾ ವಿರೋಧಿ ಮತ್ತು ರೈತ ವಿರೋಧಿ ಸರ್ಕಾರ. ಹೆಣ್ಮಕ್ಕಳಿಗೆ ಉಚಿತ ಬಸ್ ನೀಡಿದ್ದೇವೆ ಎಂದು ಹೇಳಿಕೊಳ್ಳುತ್ತೀರಿ, ಆದರೆ ಅದರ ಜೊತೆಗೆ ನೀವು ಸಾವಿನ ಭಾಗ್ಯವನ್ನೂ ನೀಡಿದ್ದೀರಿ. ಕೊಪ್ಪಳದಲ್ಲಿ ಬಸ್ ಹತ್ತುವಾಗ ಕಾಲು ಜಾರಿ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಬಸ್‌ಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ, ನ್ಯಾಯವೂ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಪುಟದಲ್ಲಿ ಮಹಿಳೆಯರಿಗಿಲ್ಲ ಸ್ಥಾನ

ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಈ ಸರ್ಕಾರದಲ್ಲಿ ಮಹಿಳೆಯರಿಗೆ ಒಬ್ಬೇ ಒಬ್ಬ ಸಚಿವ ಸ್ಥಾನವನ್ನೂ ನೀಡಿಲ್ಲ. ವಾಲ್ಮೀಕಿ ಹಗರಣದಲ್ಲಿ ನೊಂದ ಕುಟುಂಬಗಳಿಗೆ ನ್ಯಾಯ ಸಿಕ್ಕಿಲ್ಲ, ಪರಿಹಾರವೂ ನೀಡಿಲ್ಲ. ಬಿಜೆಪಿಯ ಈ ಪಾದಯಾತ್ರೆ ನೋಡಿ ಕಾಂಗ್ರೆಸ್ ನಾಯಕರಿಗೆ ಹೊಟ್ಟೆಕಿಚ್ಚು ಶುರುವಾಗಿದೆ. ಅದಕ್ಕಾಗಿಯೇ ಅವರು ಪಶ್ಚಾತ್ತಾಪ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕಂಪ್ಲಿ ಪಟ್ಟಣದಲ್ಲಿ ಡಬಲ್ ರಸ್ತೆ ನಿರ್ಮಾಣವಾಗಿದ್ದು ಬಿ.ಎಸ್. ಯಡಿಯೂರಪ್ಪ ಅವರ ಕಾಲದಲ್ಲಿ. ಬಳ್ಳಾರಿ ಭಾಗಕ್ಕೆ ಅಭಿವೃದ್ಧಿಯ ರುಚಿ ತೋರಿಸಿದ್ದು ಜನಾರ್ದನ ರೆಡ್ಡಿ ಅವರು. 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಅದಕ್ಕಾಗಿ ನೀವೆಲ್ಲರೂ ಆಶೀರ್ವಾದ ಮಾಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಬಹಿರಂಗ ಸಭೆಗೂ ಮುನ್ನ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ, ಎ. ನಾರಾಯಣಸ್ವಾಮಿ ಅವರಿಗೆ ಕಾರ್ಯಕರ್ತರು ಕ್ರೇನ್ ಮೂಲಕ ಬೃಹತ್ ಹಾರ ಹಾಕುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದು, ಇಡೀ ಕಂಪ್ಲಿ ಪಟ್ಟಣ ಕೇಸರಿಮಯವಾಗಿತ್ತು.