ಕಳಸಾ- ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷವೂ ಜ.2ರಂದು ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿತ್ತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಗಣ್ಯಾತಿಗಣ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರು ಇದ್ದರು. ಈ ಮೂಲಕ ಸರ್ಕಾರಕ್ಕೆ ಟಕ್ಕರ್‌ ನೀಡಬೇಕಿತ್ತು. 

ಸುವರ್ಣಸೌಧ(ಡಿ.30): ಮಹದಾಯಿ ಯೋಜನೆಗಾಗಿ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದ ಕಾಂಗ್ರೆಸ್‌ಗೆ ಬಿಜೆಪಿ ಚೆಕ್‌ಮೇಟ್‌ ನೀಡಿದಂತಾಗಿದೆ. ಕಳಸಾ- ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷವೂ ಜ.2ರಂದು ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿತ್ತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಗಣ್ಯಾತಿಗಣ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರು ಇದ್ದರು. ಈ ಮೂಲಕ ಸರ್ಕಾರಕ್ಕೆ ಟಕ್ಕರ್‌ ನೀಡಬೇಕು. ಉತ್ತರ ಕರ್ನಾಟಕದಲ್ಲಿ ಸಂಘಟನೆಯನ್ನು ಗಟ್ಟಿಗೊಳಿಸಿಕೊಳ್ಳುವ ಇರಾದೆ ಕಾಂಗ್ರೆಸ್ಸಿಗಿತ್ತು. ಆದರೆ ಇದೀಗ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಗುರುವಾರ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು ಎಂದಿರುವುದನ್ನು ಬಿಜೆಪಿ ಸರ್ಕಾರ ಘೋಷಿಸಿತು. ಈ ಮೂಲಕ ಕಾಂಗ್ರೆಸ್‌ಗೆ ಬಿಜೆಪಿ ಕೊನೆ ಕ್ಷಣದಲ್ಲಿ ಚೆಕ್‌ಮೇಟ್‌ ನೀಡಿದಂತಾಗಿದೆ.

ಇದೀಗ ಕಾಂಗ್ರೆಸ್‌ ಪ್ರತಿಭಟನೆ ಹಿಂದೆ ಸರಿದರೆ ಆ ಪಕ್ಷಕ್ಕೆ ಹೊಡೆತ ಬೀಳಲಿದೆ. ಇದರಿಂದಾಗಿ ಕೇಂದ್ರ ಸರ್ಕಾರ ನೀಡಿರುವ ಅನುಮೋದನೆಯಲ್ಲಿ ಏನಾದರೂ ಲೋಪದೋಷಗಳಿವೆಯೇ? ಅವುಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಬಹುದಾ? ಎಂಬುದರ ಚಿಂತನೆ ಕಾಂಗ್ರೆಸ್‌ನಲ್ಲಿ ಮೂಡಿದೆ. ಒಟ್ಟಿನಲ್ಲಿ ಕಾಂಗ್ರೆಸ್‌ ಇದೀಗ ಇಕ್ಕಟ್ಟಿನಲ್ಲಿ ಸಿಲುಕಿರುವುದಂತೂ ಸತ್ಯ.

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್‌ ಸಿಗ್ನಲ್‌: ಹಂಡೆ ಹಾಲು ಕುಡಿದಷ್ಟೇ ಸಂತಸವೆಂದ ಸಚಿವ ಕಾರಜೋಳ

ಕಾಂಗ್ರೆಸ್‌ ಹೋರಾಟದ ಕಾರಣ ಕಳಸಾಗೆ ಅಸ್ತು: ಸಿದ್ದು

ಬೆಳಗಾವಿ: ಚುನಾವಣೆ ಹತ್ತಿರ ಬಂದಾಗ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಅನುಮತಿ ನೀಡಿದ್ದೇಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮಹದಾಯಿ ಯೋಜನೆ ವಿಚಾರದಲ್ಲಿ ನಾವು ಜ.2ರಂದು ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನಾ ಸಮಾವೇಶ ನಡೆಸಲು ಮುಂದಾಗಿದ್ದಕ್ಕೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ತಾವು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕಳಸಾ ಬಂಡೂರಿ ಯೋಜನೆ ಆರಂಭಿಸುವುದಾಗಿ ಹಿಂದೆ ಯಡಿಯೂರಪ್ಪ ಹೇಳಿದ್ದರು. ಆದರೆ, ಇಲ್ಲಿಯವರೆಗೂ ಆಗಿರಲಿಲ್ಲ. ಚುನಾವಣೆ ಹತ್ತಿರ ಬರುತ್ತಿರುವ ಕಾರಣಕ್ಕೆ ತರಾತುರಿಯಲ್ಲಿ ಡಿಪಿಆರ್‌ಗೆ ಒಪ್ಪಿಗೆ ನೀಡಿರುವುದಾಗಿ ಹೇಳಿದ್ದಾರೆ’ ಎಂದು ಆರೋಪಿಸಿದರು.