Asianet Suvarna News Asianet Suvarna News

ಬಿಜೆಪಿ ಹಿರಿಯ ಶಾಸಕ ಸಿ.ಎಂ ಉದಾಸಿ ನಿಧನಕ್ಕೆ ಗಣ್ಯರ ಸಂತಾಪ

* ಬಿಜೆಪಿ ಶಾಸಕ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ ನಿಧನ
* ಶಾಸಕ ಸಿ.ಎಂ ಉದಾಸಿ ನಿಧನಕ್ಕೆ ಗಣ್ಯರ ಸಂತಾಪ
* ಹಾವೇರಿಯ ಹಾನಗಲ್ ನಲ್ಲಿ ಅಂತ್ಯಕ್ರಿಯೆ

bjp congress jds political leaders condoles MLA CM Udasi death rbj
Author
Bengaluru, First Published Jun 8, 2021, 4:30 PM IST

ಬೆಂಗಳೂರು, (ಜೂನ್.08): ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ ನಿಧನರಾಗಿದ್ದಾರೆ.

ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ಬಿಜೆಪಿ ಹಿರಿಯ ಶಾಸಕ ಸಿ.ಎಂ.ಉದಾಸಿ ವಿಧಿವಶ

ಆದ್ರೆ,ಇಂದು (ಮಂಗಳವಾರ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಾಳೆ (ಬುಧವಾರ) ಹಾವೇರಿಯ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಪುತ್ರ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ.

ಉದಾಸಿ ನಿಧನಕ್ಕೆ ಗಣ್ಯರ ಸಂತಾಪ 
ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.

ಬಿಎಸ್‌ವೈ ಸಂತಾಪ
ಸಿ.ಎಂ ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಎಚ್‌ಡಿ ದೇವೇಗೌಡ
ಮಾಜಿ ಸಚಿವರು ಹಾಗೂ ಶಾಸಕರಾದ ಸಿ.ಎಂ. ಉದಾಸಿ ಅವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ, ಹಿತೈಷಿಗಳು ಹಾಗೂ ಅಪಾರ ಬೆಂಬಲಿಗರಿಗೆ ಈ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಬಸವರಾಜ್ ಬೊಮ್ಮಾಯಿ
ಹಾನಗಲ್  ಕ್ಷೇತ್ರದ ಶಾಸಕರು, ಮಾಜಿ ಸಚಿವರು ನನ್ನ ಮಾರ್ಗದರ್ಶಕರಾಗಿದ್ದ ಶ್ರೀ ಸಿ.ಎಮ್. ಉದಾಸಿ ಅವರು ನಿಧನರಾದ ಸುದ್ದಿಯಿಂದ ಅತ್ಯಂತ ದುಃಖಿತನಾಗಿದ್ದೇನೆ.  ನಾಡು ಒಬ್ಬ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ‌. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

 ಉದಾಸಿ ನಿಧನಕ್ಕೆ ಡಿಸಿಎಂ ಶೋಕ
ಮಾಜಿ ಸಚಿವ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ಶಾಸಕ ಸಿ.ಎಂ.ಉದಾಸಿ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 

ಉದಾಸಿ ಅವರು ನಾಡು ಕಂಡ ಹಿರಿಯ ರಾಜಕಾರಣಿ. ಸಜ್ಜನ, ಸರಳತೆಯ ಮೂರ್ತಿ. ಕಿರಿಯ ಶಾಸಕರಿಗೆ ಮಾರ್ಗದರ್ಶಕರು ಕೂಡ ಆಗಿದ್ದರು. ಲೋಕೋಪಯೋಗಿ ಇಲಾಖೆ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಅವರು ಕಾರ್ಯನಿರ್ವಹಿಸಿದ್ದರು. ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ಅಗಲಿಕೆ ದುಃಖ ಉಂಟು ಮಾಡಿದೆ ಎಂದು ಡಿಸಿಎಂ ಹೇಳಿದ್ದಾರೆ. 

ಅಗಲಿದ ಹಿರಿಯ ಚೇತನಕ್ಕೆ ಸದ್ಗತಿ ಸಿಗಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.

Follow Us:
Download App:
  • android
  • ios