ಎಲ್ಲ ಹುಳಿಗಳಲ್ಲೇ ಶ್ರೇಷ್ಠವಾದದ್ದು ಲಿಂಬೆ ಹುಳಿ. ನಿಂಬೆಗಿಂತ ಹುಳಿಯಿಲ್ಲ, ದುಂಬಿಗಿಂತ ಕರೆಯಿಲ್ಲ, ಶಂಬುಗಿಂತ ದೊಡ್ಡ ದೇವರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಣ್ಣುಡಿ ಹೇಳಿದರು.

ವಿಜಯಪುರ (ಜು.15): ಎಲ್ಲ ಹುಳಿಗಳಲ್ಲೇ ಶ್ರೇಷ್ಠವಾದದ್ದು ಲಿಂಬೆ ಹುಳಿ. ನಿಂಬೆಗಿಂತ ಹುಳಿಯಿಲ್ಲ, ದುಂಬಿಗಿಂತ ಕರೆಯಿಲ್ಲ, ಶಂಬುಗಿಂತ ದೊಡ್ಡ ದೇವರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಾಣ್ಣುಡಿ ಹೇಳಿದರು. ಇಂಡಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಯಾವ ಕ್ಷೇತ್ರಕ್ಕೂ ಇಷ್ಟು ಹಣ ಕೊಟ್ಟಿಲ್ಲ, ಇಂಡಿಗೆ ಮಾತ್ರ ₹4 ಸಾವಿರ ಕೋಟಿ ಕೊಟ್ಟಿದ್ದೇನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅದರಿಂದ 93 ಸಾವಿರ ಎಕರೆ ಜಮೀನು ನೀರಾವರಿಯಾಗಲು ಅನುಕೂಲ ಕಲ್ಪಿಸಲಾಗಿದೆ. ಹೊರ್ತಿಯ ರೇವಣಸಿದ್ಧೇಶ್ವರ ಏತ ನೀರಾವರಿ, ತಿಡಗುಂದಿ ಶಾಖಾ ಕಾಲುವೆ, 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಉದ್ಘಾಟಿಸಲಾಗಿದೆ. ₹4167 ಕೋಟಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು. ಸಾರಿಗೆ ಇಲಾಖೆಯ ಶಕ್ತಿ ಯೋಜನೆಯಲ್ಲಿ ₹12,669 ಕೋಟಿ ಹಣ ಬಿಡುಗಡೆಯಾಗಿದೆ.

ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದವರಿಗೆ ಗುತ್ತಿಗೆ ಕೊಡುವುದು, ಕೆಎಸ್‌ಆರ್‌ಟಿಸಿಯಲ್ಲಿ ಉದ್ಯೋಗ ನೀಡುವುದು ಸೇರಿ ಅನೇಕ ಕೆಲಸ ಮಾಡಿದ್ದೇವೆ. ಕಲಬುರಗಿ, ಪಿರಿಯಾಪಟ್ಟಣದಲ್ಲಿ ಸಾವಿರಾರು ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಆರೋಗ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆಯಲ್ಲಿ ಅಭಿವೃದ್ಧಿಯ ಕಾಂತಿ ಮಾಡಿದ್ದೇವೆ. ನಮ್ಮ ಅಭಿವೃದ್ಧಿಯ ಮುಂದೆ ಬಿಜೆಪಿ ಟೀಕೆಗಳೆಲ್ಲ ಸತ್ತುಹೋಗಿವೆ ಎಂದು ಹೇಳಿದರು. ಬಿಜೆಪಿ ಆಡಳಿತದ ರಾಜ್ಯಗಳು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾದರಿಯನ್ನು ಅಳವಡಿಸಿಕೊಳ್ಳುತ್ತಿವೆ. ಗ್ಯಾರಂಟಿ ಯೋಜನೆಗಳು ಬಡವರಿಗಾಗಿ ತಿಂಗಳಿಗೆ ₹5 ಸಾವಿರ ಕೋಟಿ ಖರ್ಚು ಮಾಡುತ್ತಿದೆ‌.

ನಾವು ಮಾಡಿದ ಸಾಧನೆಗಳು ಶಾಶ್ವತವಾಗಿ ಉಳಿಯುವಂತೆ ಮಾಡುತ್ತಿವೆ. ಉಳುವವನಿಗೆ ಭೂಮಿ, ಪಂಚವಾರ್ಷಿಕ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಕೊಟ್ಟಿದೆ. ಇಂದಿರಾಗಾಂಧಿ ಕಾಲದಲ್ಲೇ ವಿಧವಾ ಮಾಶಾಸನ, ಓಲ್ಡ್ ಏಜ್ ಪೆನ್ಶನ್‌ ಕೊಟ್ಟಿದ್ದಾರೆ. ಇಂತಹ ಅನೇಕ ಯೋಜನೆಗಳನ್ನು ನಾವು ಮುಂದುವರೆಸಿಕೊಂಡು ಹೋಗುತ್ತೇವೆ. ಜಿಲ್ಲೆಗಳಲ್ಲಿ ಸಚಿವ ಸಂಪುಟ ಸಭೆ ಮುಂದಿನ ದಿನದಲ್ಲಿ ವಿಜಯಪುರದಲ್ಲೂ ಮಾಡಲಾಗುವುದು. ಜನರು ವಿಶ್ವಾಸ ಇಡಬೇಕು. 2028ರಲ್ಲಿ ಬಾಕಿ ಉಳಿದಿರುವ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಬರುವಂತೆ ಮಾಡಬೇಕು, ಈ‌ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬರುವಂತೆ ಮಾಡಬೇಕು ಎಂದು ಮನವಿ ಮಾಡಿದರು.