15 ದಿನಗಳಲ್ಲಿ ಮತ್ತು ದಸರಾ ಸಂದರ್ಭದಲ್ಲಿ ಸಮೀಕ್ಷೆ ಮುಗಿಸುತ್ತೇವೆ ಎಂಬುದು ಸರಿಯಲ್ಲ. ಯಾವುದೋ ಒತ್ತಡಕ್ಕೆ ಒಳಗಾಗಿ ಸಮೀಕ್ಷೆ ಮಾಡುವುದು ಸರಿಯಲ್ಲ.

ಬೆಂಗಳೂರು (ಸೆ.03): ತರಾತುರಿಯಲ್ಲಿ ಜಾತಿ ಸಮೀಕ್ಷೆ ಬೇಡ ಎಂದು ಒತ್ತಾಯಿಸಿ ಬಿಜೆಪಿ ಮುಖಂಡರ ನಿಯೋಗವು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ. ಮಂಗಳವಾರ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ಕುಮಾರ್ ನೇತೃತ್ವದ ಪಕ್ಷದ ಮುಖಂಡರ ನಿಯೋಗವು ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್‌ಕುಮಾರ್‌, 15 ದಿನಗಳಲ್ಲಿ ಮತ್ತು ದಸರಾ ಸಂದರ್ಭದಲ್ಲಿ ಸಮೀಕ್ಷೆ ಮುಗಿಸುತ್ತೇವೆ ಎಂಬುದು ಸರಿಯಲ್ಲ. ಯಾವುದೋ ಒತ್ತಡಕ್ಕೆ ಒಳಗಾಗಿ ಸಮೀಕ್ಷೆ ಮಾಡುವುದು ಸರಿಯಲ್ಲ. ಸುಮಾರು ಒಂದೂ ಮುಕ್ಕಾಲು 2 ಕೋಟಿ ಮನೆಗಳ ಸಮೀಕ್ಷೆ ಸುಲಭ ಸಾಧ್ಯವಲ್ಲ. ಬೇಸಿಗೆ ಕಾಲದಲ್ಲಿ ಸಮೀಕ್ಷೆ ಮಾಡಲು ಒತ್ತಾಯಿಸಿದ್ದೇವೆ ಎಂದು ವಿವರಿಸಿದರು. 1,400 ಜಾತಿಗಳ ಪಟ್ಟಿಯನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ ಅದರ ಸಂಬಂಧ ಆಕ್ಷೇಪಣೆಗಳನ್ನು ಕೇಳಿದ್ದಾರೆ.

ಸರ್ಕಾರದ ಯಾವುದೇ ಜಾತಿ ಪಟ್ಟಿಯಲ್ಲಿ ಇಲ್ಲದ, ಯಾವ ಆಯೋಗದ ಜಾತಿ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸೃಷ್ಟಿಸಿದ್ದಾರೆ. ಕುರುಬ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಈ ರೀತಿ 107 ಕಡೆಗಳಲ್ಲಿ ಹೊಸ ಜಾತಿಗಳನ್ನು ಪ್ರಕಟಿಸಿದ್ದಾರೆ. ಅವುಗಳಿಗೆ ಕೋಡ್ ನಂಬರ್ ನೀಡಿದ್ದು, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದು ಆಕ್ಷೇಪಿಸಿದರು. ಇಡೀ ರಾಜ್ಯದಲ್ಲಿ ಇದೊಂದು ಜನಾಂದೋಲನ ಆಗುವ ಸಾಧ್ಯತೆಗಳಿವೆ. ಕ್ರಿಶ್ಚಿಯನ್ ಎಂದಾಗ 2-3 ಉಪ ಜಾತಿ ಕೇಳಿದ್ದೆವು.

ಮುಸ್ಲಿಮರಲ್ಲಿ ಕೆಲವು ಉಪಜಾತಿ ಕೇಳಿದ್ದೆವು. ಎಲ್ಲ ಹಿಂದೂ ಉಪ ಜಾತಿಗಳಿಗೆ ಕ್ರಿಶ್ಚಿಯನ್, ಮುಸ್ಲಿಂ ಎಂದು ಹಾಕಿ ಮತ್ತೊಂದು ರೀತಿ ಮತಾಂತರಕ್ಕೆ ಪ್ರೇರಣೆ ಕೊಡುವ ಹುನ್ನಾರವನ್ನು ಸರ್ಕಾರ ಮಾಡಿದೆ. ಇದು ಮತ್ತೊಂದು ಮೀಸಲಾತಿಯ ಹುನ್ನಾರ ಎಂಬ ಅನುಮಾನ ಜನರಲ್ಲಿ ಮೂಡಿದೆ. ಹೊಸದಾಗಿ ಸೃಷ್ಟಿಸಿದ ಜಾತಿಗಳನ್ನು ಪಟ್ಟಿಯಿಂದ ಕೈಬಿಡಬೇಕು ಎಂದು ಆಗ್ರಹಿಸಿದರು. ನಿಯೋಗದಲ್ಲಿ ಸಂಸದ ಪಿ.ಸಿ.ಮೋಹನ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಮತ್ತಿತರರು ಇದ್ದರು.