ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ  ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮಕ್ಕೆ ಹೊಸ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಬೆಂಗಳೂರು, (ಆ.12): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ‘ಜನೋತ್ಸವ’ (Janostav) ಕಾರ್ಯಕ್ರಮ ನಡೆಸಲು ಮುಂದಾಗಿದ್ದು, ಹೊಸ ದಿನಾಂಕವನ್ನು ನಿಗದಿ ಮಾಡಲಾಗಿದೆ.

Add Asianetnews Kannada as a Preferred SourcegooglePreferred

 ಜನೋತ್ಸವ ಸಮಾವೇಶವನ್ನು ದೊಡ್ದಬಳ್ಳಾಪುರದಲ್ಲೇ ಆಗಸ್ಟ್ 28ರಂದು ನಡೆಸಲು ಬಿಜೆಪಿ ತೀರ್ಮಾನಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ತುಮಕೂರು ಜಿಲ್ಲೆಯ ತಾಲೂಕಿಗೆ ಸೀಮಿತವಾಗಿ ಸಮಾವೇಶ ಮಾಡಲಾಗುತ್ತಿದೆ.

ಸಿಎಂ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ: ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ಜುಲೈ 28ರಂದು ನಡೆಸಲು ತೀರ್ಮಾನಿಸಿತ್ತು. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆಯಾಗಿತ್ತು. ಇದರಿಂದ ಸಾಧನಾ ಸಮಾವೇಶವನ್ನು ಸ್ವತಃ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿದ್ದರು.

ಈ ಕಾರ್ಯಕ್ರಕ್ಕೆ ಆಹ್ವಾನ ನೀಡಲು ಸ್ವತಃ ಸಿಎಂ ಬೊಮ್ಮಾಯಿ ಅವರೇ ಇಂದು(ಶುಕ್ರವಾರ) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆಗಸ್ಟ್ 28ರಂದು ನಡೆಯುವ ಜನೋತ್ಸವ ಸಮಾವೇಶಕ್ಕೆ ಆಗಮಿಸಬೇಕೆಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿ ಇಟ್ಟುಕೊಂಡು ಈ ಸಮಾವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ.

ಇತ್ತೀಚೆಗೆ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮ ಯಶ್ವಸ್ವಿಯಾಗಿದೆ. ಇದರಿಂದ ಬಿಜೆಪಿಯನ್ನು ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕೌಂಟರ್ ಕೊಡಲು ಬಿಜೆಪಿ ಪ್ಲಾನ್ ಮಾಡಿದೆ. ಅದಕ್ಕೆ ಮೊದಲ ಹಂತವಾಗಿ ಈ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.