ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಜಾತಿ ಸಮೀಕ್ಷೆ ಅಸ್ತ್ರಕ್ಕೆ ತಿರುಗೇಟು ನೀಡಲು ಚಿಂತನೆ ನಡೆಸಿರುವ ಬಿಜೆಪಿಯು ಈ ನಿಟ್ಟಿನಲ್ಲಿ ದೇಶದ ಎಲ್ಲ ರಾಜ್ಯಗಳ ಇತರ ಹಿಂದುಳಿದ ವರ್ಗಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸಿದೆ. 

ಬೆಂಗಳೂರು/ನವದೆಹಲಿ (ನ.03): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಜಾತಿ ಸಮೀಕ್ಷೆ ಅಸ್ತ್ರಕ್ಕೆ ತಿರುಗೇಟು ನೀಡಲು ಚಿಂತನೆ ನಡೆಸಿರುವ ಬಿಜೆಪಿಯು ಈ ನಿಟ್ಟಿನಲ್ಲಿ ದೇಶದ ಎಲ್ಲ ರಾಜ್ಯಗಳ ಇತರ ಹಿಂದುಳಿದ ವರ್ಗಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸಿದೆ. ಗುರುವಾರ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜ್ಯಗಳ ಸುಮಾರು 40ಕ್ಕೂ ಹೆಚ್ಚು ಹಿಂದುಳಿದ ವರ್ಗಗಳ ಮುಖಂಡರು ಪಾಲ್ಗೊಂಡಿದ್ದರು. ವಿವಿಧ ರಾಜ್ಯಗಳಲ್ಲಿನ ಜಾತಿ ಸಮೀಕರಣ, ಒಬಿಸಿ ಸಮುದಾಯಗಳ ಪ್ರಾತಿನಿಧ್ಯ ಮತ್ತು ಮುಂದೇನು ಮಾಡಬಹುದು ಎಂಬುದರ ಕುರಿತು ಸಮಾಲೋಚನೆ ನಡೆಸಿದರು.

Add Asianetnews Kannada as a Preferred SourcegooglePreferred

ಕರ್ನಾಟಕದಿಂದ ಬಿಜೆಪಿಯ ಒಬಿಸಿ ನಾಯಕರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಪಿ.ಸಿ.ಮೋಹನ್‌ ಅವರು ವಿಶೇಷ ಆಹ್ವಾನದ ಮೇರೆಗೆ ಈ ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ ನಾಯಕರು ಕಾಂಗ್ರೆಸ್‌ನ ಜಾತಿ ಸಮೀಕ್ಷೆ ಅಸ್ತ್ರಕ್ಕೆ ಹೂಡಬೇಕಾದ ಪ್ರತ್ಯಸ್ತ್ರದ ಬಗ್ಗೆ ಚಿಂತನ ಮಂಥನ ನಡೆಸಿದ್ದಾರೆ. ಜತೆಗೆ ಕೇಂದ್ರ ಸರ್ಕಾರದಿಂದಲೇ ಒಬಿಸಿ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸಲೂ ನಿರ್ಧರಿಸಿದ್ದಾರೆ. ಸಂವಿಧಾನ ತಜ್ಞರ ಬಳಿ ಚರ್ಚಿಸಿ ಪಕ್ಷದ ನಿಲುವನ್ನು ಪ್ರಕಟಿಸಬೇಕು ಎಂಬ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪ್ರತಿನಿತ್ಯ ಬೈದರೆ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ?: ಬಿ.ಎಸ್‌.ಯಡಿಯೂರಪ್ಪ

ಇದೇ ವೇಳೆ ಒಬಿಸಿ ಸಮುದಾಯಕ್ಕೆ ಬಿಜೆಪಿ ನೀಡಿರುವ ಯೋಜನೆಗಳು, ಕೊಡುಗೆಗಳ ಬಗ್ಗೆ ವಿವಿಧ ರಾಜ್ಯಗಳ ಒಬಿಸಿ ನಾಯಕರು ಮುಂದಾಳತ್ವ ಮತ್ತು ಮುತುವರ್ಜಿ ವಹಿಸಿ ಮತದಾರರಿಗೆ ತಲುಪಿಸಬೇಕು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಒಬಿಸಿ ಸಮುದಾಯಕ್ಕೆ ಸೇರಿದವರು ಎನ್ನುವುದನ್ನು ಜನರಿಗೆ ಮನದಟ್ಟು ಮಾಡಬೇಕು ಎಂಬ ಸೂಚನೆಯನ್ನು ಸಭೆಯಲ್ಲಿ ಭಾಗವಹಿಸಿದ್ದ ನಾಯಕರಿಗೆ ವರಿಷ್ಠರು ನೀಡಿದರು ಎನ್ನಲಾಗಿದೆ. ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಕರ್ನಾಟಕದಲ್ಲಿನ ಜಾತಿ ಜನಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಈ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಭಿನ್ನಾಭಿಪ್ರಾಯ ತಲೆದೋರಿದೆ. ವರದಿ ಸಲ್ಲಿಕೆ ಬಳಿಕ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸಲಿದೆ ಎಂಬ ಮಾಹಿತಿ ನೀಡಿದರು.