‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.

ಬೆಂಗಳೂರು (ಜು.07): ‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಯರೆಡ್ಡಿ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ರಸ್ತೆ ಆಗಬೇಕು ಎಂದರೆ ಅಕ್ಕಿ ಬಿಡಿ ಎಂಬ ಅವರ ಹೇಳಿಕೆ ದುರಹಂಕಾರದ ಮಾತು. ರಾಜ್ಯದಲ್ಲಿ ಹಣಕಾಸಿನ ಸ್ಥಿತಿ ಹದಗೆಟ್ಟಿರುವುದಕ್ಕೆ ಅವರ ಈ ಮಾತೇ ಸಾಕ್ಷಿ ಎಂದು ಟೀಕಿಸಿದರು.

Add Asianetnews Kannada as a Preferred SourcegooglePreferred

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಯರಡ್ಡಿ ಮಾತ್ರವಲ್ಲ, ಕಾಂಗ್ರೆಸ್‌ನ ಬಹುತೇಕ ಶಾಸಕರು ಈ ಮಾತನ್ನೇ ಹೇಳುತ್ತಾರೆ. ಶಿಗ್ಗಾಂವ್‌ನಲ್ಲಿ ನನ್ನ ಸಮ್ಮುಖದಲ್ಲೇ ಕಾಂಗ್ರೆಸ್‌ ಶಾಸಕರು ಈ ಮಾತನ್ನು ಹೇಳಿದ್ದಾರೆ. ಈ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ ಎಂದು ಆರೋಪಿಸಿದರು. ಇದೇ ವೇಳೆ, ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ, ಗ್ಯಾರಂಟಿ ಘೋಷಣೆ ಮಾಡುವಾಗ ಬರೀ ಗ್ಯಾರಂಟಿ ಕೊಡ್ತೇವೆ, ರಸ್ತೆ ಅಭಿವೃದ್ಧಿ ಇಲ್ಲಾ ಎಂದು ಹೇಳಿದ್ರಾ. ಕಾಂಗ್ರೆಸ್ ಸರ್ಕಾರವೇ ಈ ರಾಜ್ಯಕ್ಕೆ ಶಾಪ, ಈ ಸರ್ಕಾರ ತೊಲಗಲಿ ಎಂದು ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಈ ಬಗ್ಗೆ ಕಿಡಿಕಾರಿದ ಶಾಸಕ ಅರವಿಂದ ಬೆಲ್ಲದ, ರಾಯರಡ್ಡಿಯವರು ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರು, ಅನುಭವಿ ರಾಜಕಾರಣಿ. ಸರ್ಕಾರದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಅನ್ನೋದಕ್ಕೆ ಹೀಗೆ ಹೇಳಿದ್ದಾರೆ. ಲೂಟಿ ನಿಲ್ಲಿಸಿದ್ರೆ ತಾನಾಗಿಯೇ ರಾಜ್ಯದ ಅಭಿವೃದ್ಧಿ ಆಗುತ್ತೆ ಎಂದರು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಪ್ರತಿಕ್ರಿಯಿಸಿ, ರಾಯರಡ್ಡಿಯವರು ಹೇಳಿದ್ದು ಸರಿಯಾಗಿದೆ. ಪಾಪ, ಈ ಸರ್ಕಾರದಲ್ಲಿ ದುಡ್ಡು ಎಲ್ಲಿದೆ?. ಇದು ಪಾಪರ್‌ ಸರ್ಕಾರ. ನಮ್ಮ ಸರ್ಕಾರ ಬಂದಾಗ ರಾಯರಡ್ಡಿಗೆ ಸತ್ಯವಂತ ಪ್ರಶಸ್ತಿ ಕೊಡಸ್ತೀನಿ ಎಂದರು.

ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಛಲವಾದಿ ನಾರಾಯಣಸ್ವಾಮಿ, ಜನರ ಮೂಗಿಗೆ ತುಪ್ಪ ಹಚ್ಚಿ ಲಟ್ಟಿ ಮಾಡೋಕೆ ಬಂದಿದ್ದಿರಾ? ಗ್ಯಾರಂಟಿಗೂ, ಅಭಿವೃದ್ಧಿಗೂ ಏನು ಸಂಬಂಧ. ಈ ಗ್ಯಾರಂಟಿ ಕೂಡ ಜನರಿಗೆ ಸರಿಯಾಗಿ ತಲುಪುತ್ತಿಲ್ಲ. ಈ ಸರ್ಕಾರದಲ್ಲಿ ಪ್ರತಿದಿನ ಒಂದೊಂದು ಭ್ರಷ್ಟಾಚಾರ ಹೊರಕ್ಕೆ ಬರ್ತಿದೆ ಎಂದರು.