ಸಿಎಂ ಬದಲಿಸುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯ​ಕ​ರು| ಸಿಎಂ ಬದಲಾವಣೆ ಊಹಾಪೋಹ ಅಲ್ಲಗೆಳೆದ ಸಚಿವರು| ಸಿಎಂ ಯಡಿಯೂರಪ್ಪ ಅವರನ್ನ ಎಚ್‌.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ ಜೋಷಿ, ಸದಾನಂದಗೌಡರನ್ನು ಜಗದೀಶ್‌ ಶೆಟ್ಟರ್‌ ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ| 

ಬೆಂಗಳೂರು(ಸೆ.12): ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಆಗೊಮ್ಮೆ ಈಗೊಮ್ಮೆ ಹುಟ್ಟಿಕೊಳ್ಳುತ್ತಿರುವ ಊಹಾಪೋಹಗಳನ್ನು ಖಡಾಖಂಡಿತವಾಗಿ ಅಲ್ಲಗೆಳೆದಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ಥ‌ನಾರಾಯಣ, ಸಚಿವರಾದ ಸಿ.ಸೋಮಣ್ಣ, ಡಾ.ಕೆ.ಸುಧಾಕರ್‌ ಮತ್ತು ನಾಗೇಶ್‌, ಬಿ.ಎಸ್‌.ಯಡಿಯೂರಪ್ಪನವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಸದಾನಂದಗೌಡರನ್ನು ಜಗದೀಶ್‌ ಶೆಟ್ಟರ್‌ ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ನಾಲ್ವರೂ ಅಭಿಪ್ರಾಯಪಟ್ಟಿದ್ದಾರೆ.

ಯಡಿಯೂರಪ್ಪನವರನ್ನು ಭೇಟಿಯಾಗಿದ್ಯಾಕೆ? ಕೊನೆಗೂ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

ಮಳವಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಾ.ಅಶ್ವತ್ಥ್‌ನಾರಾಯಣ, ರಾಜ್ಯ ಬಿಜೆಪಿ ನಾಯಕರು, ಸಚಿವರು ದೆಹಲಿಗೆ ಹೋದಾಗ ಮುಖ್ಯಮಂತ್ರಿಗಳ ಬದಲಾವಣೆ ನಡೆಯುತ್ತಿದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು. ಕೇಂದ್ರ ಸರ್ಕಾರದಿಂದ ರಾಜ್ಯಗಳಲ್ಲಿ ನಡೆಯಬೇಕಿರುವ ವಿವಿಧ ಇಲಾಖಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಲು ಸಚಿವರು ದೆಹಲಿಗೆ ತೆರಳಬೇಕಾಗುತ್ತದೆ. ಸಚಿವ ಜಗದೀಶ್‌ ಶೆಟ್ಟರ್‌ ಸಹ ಅದೇ ಕಾರಣಕ್ಕೆ ಹೋಗಿದ್ದಾರೆ ಎಂದರು. ಇದೇವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದನ್ನೂ ತಪ್ಪಾಗಿ ಅರ್ಥೈಸಿಕೊಳ್ಳುವುದು ಬೇಡ ಎಂದಿದ್ದಾರೆ.

ರಾಯಚೂರಿನಲ್ಲಿ ಬೈರತಿ ಬಸವರಾಜ್‌, ಹಾಸನದಲ್ಲಿ ಸೋಮಣ್ಣ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್‌, ಕೋಲಾರದಲ್ಲಿ ಎಚ್‌.ನಾಗೇಶ್‌ ಸಹ ಸುದ್ದಿಗಾರರ ಪ್ರಶ್ನೆಗಳಿಗೆ ಇದೇ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.