ರಾಜ್ಯ ಬಿಜೆಪಿ ನಾಯಕರು ಜವಾಬ್ದಾರಿ ತೆಗೆದುಕೊಂಡು ಈ ಚುನಾವಣೆ ನಡೆಸಬೇಕು. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಹೊಣೆಗಾರಿಕೆ ಇದೆ. ಈ ವಿಚಾರದಲ್ಲಿ ಮುಂದಿನ ವಾರ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. ಶೇ.100ರಷ್ಟು ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್.

ಚನ್ನಪಟ್ಟಣ(ಆ.22): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಟಿಕೆಟ್‌ ನನಗೇ ಸಿಗುವ ವಿಶ್ವಾಸವಿದೆ. ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ನನ್ನ ಮೊದಲ ಆದ್ಯತೆ ಮಾತೃ ಪಕ್ಷ ಬಿಜೆಪಿಗೆ. ಟಿಕೆಟ್ ಸಿಗದಿದ್ದರೆ ಮುಂದಿನ ಯೋಚನೆ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆ.26 ಅಥವಾ ಆ.27ಕ್ಕೆ ದೆಹಲಿಗೆ ತೆರಳಲಿದ್ದು, ಎನ್‌ಡಿಎ ವರಿಷ್ಠರ ಜತೆ ಟಿಕೆಟ್‌ ವಿಚಾರವಾಗಿ ಚರ್ಚೆ ನಡೆಸುತ್ತೇನೆ. ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪಕ್ಷದ ವರಿಷ್ಠರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದರು.

ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಬಾಲಕೃಷ್ಣ

ರಾಜ್ಯ ಬಿಜೆಪಿ ನಾಯಕರು ಜವಾಬ್ದಾರಿ ತೆಗೆದುಕೊಂಡು ಈ ಚುನಾವಣೆ ನಡೆಸಬೇಕು. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಹೊಣೆಗಾರಿಕೆ ಇದೆ. ಈ ವಿಚಾರದಲ್ಲಿ ಮುಂದಿನ ವಾರ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. ಶೇ.100ರಷ್ಟು ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದರು.

ಬಿ.ವೈ.ವಿಜಯೇಂದ್ರ ಅವರು ನನಗೆ ಟಿಕೆಟ್ ಕೊಡುವ ಮಾತು ಕೊಟ್ಟಿದ್ದಾರೆ. ಆದರೆ, ಇದು ಕುಮಾರಸ್ವಾಮಿ ಅವರ ಕ್ಷೇತ್ರ. ಹಾಗಾಗಿ ವರಿಷ್ಠರ ಜತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಬಾರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಅವರು ಕೂಡಾ ಟಿಕೆಟ್ ಕೊಡಲು ಒಪ್ಪಿದ್ದಾರೆ ಎಂದರು.

ಟಿಕೆಟ್ ವಿಚಾರವಾಗಿ ಈಗಾಗಲೇ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಸಂಸದ ಬಸವರಾಜ್ ಬೊಮ್ಮಾಯಿ, ಅಶೋಕ್, ಡಾ.ಅಶ್ವಥ್ ನಾರಾಯಣ್, ಸಿ.ಟಿ.ರವಿ, ಅರವಿಂದ್ ಬೆಲ್ಲದ್ ಅವರೊಂದಿಗೆ ಚರ್ಚೆ ನಡೆಸಿದ್ದು, ಅವರು ಎಚ್‌.ಡಿ.ಕುಮಾರಸ್ವಾಮಿಯೊಂದಿಗೆ ಚರ್ಚೆ ನಡೆಸಿ, ಟಿಕೆಟ್ ವಿಚಾರದಲ್ಲಿ ಅವರನ್ನು ಒಪ್ಪಿಸುವುದಾಗಿ ತಿಳಿಸಿದ್ದಾರೆ ಎಂದರು.