Asianet Suvarna News Asianet Suvarna News

ಸಿಎಂ ಸಿದ್ದರಾಮಯ್ಯ ತವರಲ್ಲಿ ಬಿಜೆಪಿ ಅತೃಪ್ತಿಗೆ ಮದ್ದರೆದ ಬಿ.ವೈ.ವಿಜಯೇಂದ್ರ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಂಚರಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಿದ್ದಾರೆ.

BJP State President BY Vijayendra Mysuru Kodagu Tour To Counter Siddaramaiahs Operation Hasta gvd
Author
First Published Mar 29, 2024, 7:59 AM IST

ಬೆಂಗಳೂರು (ಮಾ.29): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಂಚರಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಿದ್ದಾರೆ. ಜಿಲ್ಲಾ ಪಂಚಾಯ್ತಿಯ ಬಿಜೆಪಿ ಮಾಜಿ ಸದಸ್ಯ ಸದಾನಂದ ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ನಡೆದಿದ್ದ ಆಪರೇಷನ್ ಹಸ್ತವನ್ನು ವಿಫಲಗೊಳಿಸಿ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ವಿಜಯೇಂದ್ರ ಅವರ ಪಾತ್ರ ದೊಡ್ಡದು. ಅದೇ ರೀತಿ ಇನ್ನೂ ಅನೇಕ ಮುಖಂಡರನ್ನು ಮಾತುಕತೆ ಮೂಲಕ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ಮನವೊಲಿಸುವಲ್ಲಿ ಯಶಸ್ಸು ಸಾಧಿಸಿದರು.

ಒಂದೆಡೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ವಿವಿಧ ಲೋಕಸಭಾ ಕ್ಷೇತ್ರಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಬಿಕ್ಕಟ್ಟು ಶಮನಗೊಳಿಸುತ್ತಿದ್ದರೆ ಮತ್ತೊಂದೆಡೆ ವಿಜಯೇಂದ್ರ ಅವರೂ ಕಸರತ್ತು ನಡೆಸಿದ್ದಾರೆ. ಮೈಸೂರಿನ ಹಾಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಕೈಬಿಟ್ಟು ಮೈಸೂರು ಒಡೆಯರ್ ಸಂಸ್ಥಾನದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದ್ದರಿಂದ ಸಹಜವಾಗಿಯೇ ಪಕ್ಷದಲ್ಲಿ ತುಸು ಅಸಮಾಧಾನ ಉದ್ಭವಿಸಿತ್ತು. ಜತೆಗೆ ಇದರ ಲಾಭವನ್ನು ಪಡೆದುಕೊಳ್ಳಲು ಕಾಂಗ್ರೆಸ್ ನಾಯಕರು ಪ್ರಯತ್ನಿಸಿದ್ದರು. ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿದ್ದರಿಂದ ಅವರಿಗೆ ಇದು ಪ್ರತಿಷ್ಠೆಯ ಕ್ಷೇತ್ರವಾಗಿದೆ.

ಆದರೆ, ಇದನ್ನು ಅರಿತ ವಿಜಯೇಂದ್ರ ಅವರು ಎರಡು ದಿನಗಳ ಕಾಲ ಮೈಸೂರಿನಲ್ಲಿ ವಾಸ್ತವ್ಯ ಹೂಡುವ ಮೂಲಕ ಅಲ್ಲಿನ ಪಕ್ಷದ ಸಂಘಟನೆ ಬಲಪಡಿಸಿ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಮುಂದಾಗಿದ್ದು ಬಹುತೇಕ ಯಶಸ್ವಿಯಾಗಿದೆ ಎನ್ನಲಾಗಿದೆ. ಇದೇ ವೇಳೆ ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಬಿಜೆಪಿ- ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಪಾಲ್ಗೊಂಡು ಉಭಯ ಪಕ್ಷಗಳ ನಾಯಕರೊಂದಿಗೆ ಒಗ್ಗಟ್ಟು ಪ್ರದರ್ಶಿಸಿದರು. ಬಳಿಕ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯ ಎಚ್.ಡಿ. ಕುಮಾರಸ್ವಾಮಿ ಮತ್ತಿತರ ಮುಖಂಡರೊಂದಿಗೆ ಭಾಗವಹಿಸಿ ಮೈತ್ರಿ ಪಕ್ಷಗಳಲ್ಲಿ ಸಮನ್ವಯತೆ ಮೂಡಿಸುವಲ್ಲಿ ವಿಜಯೇಂದ್ರ ಸಫಲರಾದರು.

ಪ್ರತಾಪ ಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ: ಬಿ.ವೈ.ವಿಜಯೇಂದ್ರ

ವಿಜಯೇಂದ್ರಗೆ ಸ್ವಾಗತ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬುಧವಾರ ಸುಂಟಿಕೊಪ್ಪ ಬಿಜೆಪಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಕೋರಿದರು. ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಕನ್ನಡ ವೃತ್ತದ ಬಳಿಯಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಧನುಕಾವೇರಪ್ಪ ಮತ್ತು ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಹಾಗೂ ಸೋಮವಾರಪೇಟೆ ಮಂಡಲ ಒಬಿಸಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಸ್ವಾಗತ ಕೋರಿದರು. ಪ್ರಧಾನಿ ನರೇಂದ್ರ ಮೋದಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ನಾಯಕರಿಗೆ ಕಾರ್ಯಕರ್ತರು ಜೈಕಾರಗಳನ್ನು ಕೂಗಿದರು.

Follow Us:
Download App:
  • android
  • ios