ಬಿಜೆಪಿ ದೊಡ್ಡ ಪಕ್ಷವಾಗಿ ವಿರೋಧ ಪಕ್ಷದ ಕೆಲಸ ಮಾಡುತ್ತದೆ. ಬಿಜೆಪಿಯವರೇ ವಿರೋಧ ಪಕ್ಷದ ನಾಯಕರಾಗುತ್ತಾರೆ. ಮೈತ್ರಿಯಲ್ಲಿ ಅಧಿಕಾರ ಹಂಚಿಕೆ ಮಾಡಬಹುದು. ಆದರೆ, ವಿರೋಧ ಪಕ್ಷದ ಸ್ಥಾನ ಕೊಡಲು ಬರುವುದಿಲ್ಲ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು. 

ವಿಜಯಪುರ (ನ.15): ಬಿಜೆಪಿ ದೊಡ್ಡ ಪಕ್ಷವಾಗಿ ವಿರೋಧ ಪಕ್ಷದ ಕೆಲಸ ಮಾಡುತ್ತದೆ. ಬಿಜೆಪಿಯವರೇ ವಿರೋಧ ಪಕ್ಷದ ನಾಯಕರಾಗುತ್ತಾರೆ. ಮೈತ್ರಿಯಲ್ಲಿ ಅಧಿಕಾರ ಹಂಚಿಕೆ ಮಾಡಬಹುದು. ಆದರೆ, ವಿರೋಧ ಪಕ್ಷದ ಸ್ಥಾನ ಕೊಡಲು ಬರುವುದಿಲ್ಲ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಸಂತಸ ತಂದಿದೆ. ಯುವಕರಿಗೆ ಪ್ರೋತ್ಸಾಹ ಸಿಗುತ್ತೆ ಎಂಬುದನ್ನು ಬಿಜೆಪಿ ತೋರಿಸಿದೆ. ಯಡಿಯೂರಪ್ಪನವರು ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. 

Add Asianetnews Kannada as a Preferred SourcegooglePreferred

ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೂ ಸಿಕ್ಕಿದೆ. ವಿಜಯೇಂದ್ರರ ನಾಯಕತ್ವದಲ್ಲಿ ಯುವಕರು ಸಂಘಟಿತರಾಗಿ 25ಕ್ಕೂ ಅಧಿಕ ಲೋಕಸಭೆ ಸ್ಥಾನ ಗೆಲ್ಲಿಸಲಿದ್ದಾರೆ. ಇವರು ಇದೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದರು. ರಾಜಕಾರಣಲ್ಲಿದ್ದವರು ಸಹಜವಾಗಿಯೇ ಅಧಿಕಾರ ಅಪೇಕ್ಷೆ ಪಡುತ್ತಾರೆ. ಕಳೆದ ಬಾರಿ ನಾವು ಸರ್ಕಾರವನ್ನು ಕಳೆದುಕೊಂಡಿದ್ದೇವೆ. ಹಾಗಾಗಿ ಅಳೆದು ತೂಗಿ ಹೈಕಮಾಂಡ್ ನಿರ್ಧಾರ ಮಾಡಿರುತ್ತದೆ. ಅದಕ್ಕೆ ನಾವೆಲ್ಲ ಬೆಂಬಲಿಸಬೇಕು. 

ಕಾಂಗ್ರೆಸ್ಸಿನಲ್ಲಿ ನಿಷ್ಠಾವಂತರಾಗಿ ದುಡಿದವರಿಗೆ ಹೆಚ್ಚು ಮಾನ್ಯತೆ: ಸಚಿವ ಡಿ.ಸುಧಾಕರ್

ಅಸಮಾಧಾನ ಇದ್ದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗುತ್ತೆ. ಭಿನ್ನಾಭಿಪ್ರಾಯ ಎಲ್ಲೂ ಇಲ್ಲ. ಒಂದೆರೆಡು ದಿನ ಅಸಮಾಧಾನ ಇರುತ್ತೆ, ಅದೆಲ್ಲ ಸರಿಯಾಗುತ್ತೆ ಎಂದರು. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರವಿಲ್ಲ. ಪಕ್ಷದ ವರಿಷ್ಠರು ಯಾರು ಸ್ಪರ್ಧಿಸಬೇಕು ಎನ್ನುವುದನ್ನು ನಿರ್ಧರಿಸುತ್ತಾರೆ. ತಾವು ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಸುಳ್ಳು ಗ್ಯಾರಂಟಿ ಕೊಟ್ಟಿದ್ದಾರೆ. ತಾಕತ್ ಇದ್ದರೆ ಲೋಕಸಭೆ ಚುನಾವಣೆ ಎದುರಿಸಿ ತೋರಿಸಲಿ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ನುಡಿದರು.

ಕಾಂಗ್ರೆಸ್‌ನವರು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ: ರಾಜ್ಯದಲ್ಲಿ ಎಲ್ಲರೂ ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿದೆ ಎಂದು ನಂಬಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಜನ ಇವರಿಗೆ ಸಂಪೂರ್ಣ ಬಹುಮತದ ಅಧಿಕಾರ ನೀಡಿದ್ದಾರೆ. ಸುಭದ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. 

ಬರಗಾಲದಲ್ಲಿ ರೈತರ ನೆರವಿಗೆ ಬಾರದ ಈ ಸರ್ಕಾರದ ಎಲ್ಲ ಮಂತ್ರಿಗಳು ಹಾಗೂ ಶಾಸಕರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ರೈತರ ಕಷ್ಟ ಆಲಿಸದೇ ಕೇವಲ ಅಧಿಕಾರಕ್ಕಾಗಿ ಹಂಬಲಿಸುತ್ತಿದ್ದಾರೆ ಎಂದರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಮೂರು ಗುಂಪುಗಳಾಗಿದ್ದು, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ದಲಿತರ ಗುಂಪು, ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಗೌಡರ ಗುಂಪು, ಹಿಂದುಳಿದ ವರ್ಗಗಳ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಗುಂಪು ಹೀಗೆ 3 ಮೂರು ಗುಂಪುಗಳಾಗಿವೆ ಎಂದು ವ್ಯಂಗ್ಯವಾಡಿದರು.

ಬಾನಂಗಳಕ್ಕೆ ಕನ್ನಡ ರಂಗು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ಧ್ವಜ ವರ್ಣದ ಗಾಳಿಪಟ ಹಾರಾಟ!

ಉತ್ತರ ಕರ್ನಾಟಕ ಭಾಗದ ನಾಯಕರಾದ ಸಚಿವ ಎಚ್‌.ಕೆ. ಪಾಟೀಲ್‌ ಅವರನ್ನು ಡಿನ್ನರ್‌ ಪಾರ್ಟ್‌ಗೆ ಕರೆದಿಲ್ಲ. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು 2ನೇ ದರ್ಜೆಯವರಂತೆ ಕಾಣಲಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ 38 ಜನ ಲಿಂಗಾಯತ ಜನ ಶಾಸಕರಿದ್ದು, 7 ಜನ ಮಂತ್ರಿಗಳಿದ್ದಾರೆ. ಆದರೂ ಹಿರಿಯ ನಾಯಕ ಶಾಮನೂರು ಶಿವಶಂಕ್ರಪ್ಪ ತಮ್ಮ ನೋವು ತೋಡಿತೊಂಡಿದ್ದಾರೆ.