ವಿಧಾನಸಭೆಯಿಂದ ವಿಧಾನಪರಿಷತ್‌ ಚುನಾವಣೆಗೆ 40ಕ್ಕೂ ಹೆಚ್ಚು ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಚುನಾವಣಾ ಆಕಾಂಕ್ಷಿಗಳ ಹೆಸರು ಮಾತ್ರವಲ್ಲದೇ ಇತರ ಹೆಸರುಗಳನ್ನು ಸಹ ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ಮೂರು ಸ್ಥಾನಗಳಿಗೆ ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಅಂತಿಮ ನಿರ್ಣಯ ಮಾಡುವ ಅಧಿಕಾರ ಕೇಂದ್ರ ವರಿಷ್ಠರಿಗೆ ಬಿಡಲು ಸಭೆಯಲ್ಲಿ ನಿರ್ಧರಿಸಿದೆ.

ಬೆಂಗಳೂರು(ಮೇ.23):  ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಪಕ್ಷಕ್ಕೆ ಲಭ್ಯವಾಗುವ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ತೀರ್ಮಾನದ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಿಗೆ ನೀಡಲು ರಾಜ್ಯ ಬಿಜೆಪಿ ಕೋರ್‌ ಕಮಿಟಿ ನಿರ್ಣಯಿಸಿದೆ.

Add Asianetnews Kannada as a Preferred SourcegooglePreferred

ಬುಧವಾರ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಕೈಗೊಂಡ ನಿರ್ಣಯವನ್ನು ಕೇಂದ್ರದ ವರಿಷ್ಠರಿಗೆ ಕಳುಹಿಸಿಕೊಡಲಾಗುವುದು. ವರಿಷ್ಠರು ಯಾವ ಹೆಸರು ಕಳುಹಿಸಿದರೂ ಸ್ವೀಕಾರ ಮಾಡುವ ಬಗ್ಗೆ ಸಭೆಯಲ್ಲಿ ಸಹಮತ ವ್ಯಕ್ತವಾಗಿದೆ ಎನ್ನಲಾಗಿದೆ.

ಇನ್ನು ಮೇಲ್ಮನೆ ಕದನ ಭರಾಟೆ: 7 ಸ್ಥಾನಗಳಿಗೆ ಡಜನ್‌ ಆಕಾಂಕ್ಷಿಗಳು..!

ವಿಧಾನಸಭೆಯಿಂದ ವಿಧಾನಪರಿಷತ್‌ ಚುನಾವಣೆಗೆ 40ಕ್ಕೂ ಹೆಚ್ಚು ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಚುನಾವಣಾ ಆಕಾಂಕ್ಷಿಗಳ ಹೆಸರು ಮಾತ್ರವಲ್ಲದೇ ಇತರ ಹೆಸರುಗಳನ್ನು ಸಹ ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ಮೂರು ಸ್ಥಾನಗಳಿಗೆ ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಅಂತಿಮ ನಿರ್ಣಯ ಮಾಡುವ ಅಧಿಕಾರ ಕೇಂದ್ರ ವರಿಷ್ಠರಿಗೆ ಬಿಡಲು ಸಭೆಯಲ್ಲಿ ನಿರ್ಧರಿಸಿದೆ.

ಆಡಳಿತಾರೂಢ ಕಾಂಗ್ರೆಸ್‌ ಹೆಚ್ಚಿನ ಸ್ಥಾನ ಗಳಿಸಿದರೆ ಬಿಜೆಪಿಗೆ ಸಭಾಪತಿ, ಉಪಸಭಾಪತಿ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಸಭಾಪತಿ ಸ್ಥಾನ ಉಳಿಯಬೇಕಾದರೆ ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಬೇಕಾದ ಅಗತ್ಯತೆ ಇದೆ ಎಂಬುದರ ಕುರಿತು ಸಮಾಲೋಚನೆ ನಡೆಸಲಾಯಿತು. ಅಲ್ಲದೇ, ಓರ್ವ ಮಹಿಳಾ ಪ್ರಾತಿನಿಧ್ಯ ಇರಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಆದರೆ ಅಂತಿಮ ನಿರ್ಣಯ ಹೈಕಮಾಂಡ್‌ಗೆ ಬಿಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ ಮೂರು ಸ್ಥಾನಗಳು ಲಭಿಸಲಿದ್ದು, ಇದನ್ನು ಆಧರಿಸಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡಲಿದ್ದಾರೆ. 40ಕ್ಕೂ ಹೆಚ್ಚು ಹೆಸರುಗಳು ಚರ್ಚೆಯಾಗಿವೆ. ಮೂರು ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿದ್ದು, ಆಕಾಂಕ್ಷಿಗಳನ್ನು ಮಾತ್ರ ನಾವು ಚರ್ಚೆಗೆ ಪರಿಗಣಿಸಿಲ್ಲ. ಆಕಾಂಕ್ಷಿಗಳಲ್ಲದವರನ್ನೂ ಸಹ ಚರ್ಚೆಗೆ ತೆಗೆದುಕೊಂಡಿದ್ದೇವೆ ಎಂದರು.

ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್‌ಗೆ ಈಶ್ವರಪ್ಪ ಬೆಂಬಲ

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಸುಮಾರು 40ಕ್ಕೂ ಹೆಚ್ಚು ಹೆಸರುಗಳ ಕುರಿತು ಚರ್ಚೆ ಮಾಡಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರಿಗೆ ಕೇಂದ್ರದ ಅಧ್ಯಕ್ಷರು ಮತ್ತು ರಾಷ್ಟ್ರೀಯ ನಾಯಕರ ಜೊತೆ ಸಮಾಲೋಚನೆ ಮಾಡಿ ಅಂತಿಮ ನಿರ್ಣಯ ಮಾಡುವ ಅಧಿಕಾರವನ್ನು ಕೋರ್ ಸಮಿತಿ ಕೊಟ್ಟಿದೆ ಎಂದು ತಿಳಿಸಿದರು.

ಕೇಂದ್ರದ ಜೊತೆ ಸಮಾಲೋಚನೆ ನಡೆಸಿ ಪಕ್ಷದ ಕಡೆಯಿಂದ ವಿಧಾನಪರಿಷತ್ತಿನ ಅಭ್ಯರ್ಥಿಗಳು ಯಾರೆಂದು ನಿರ್ಣಯಿಸಲಾಗುತ್ತದೆ. ಅಲ್ಲದೇ, ವಿಧಾನಪರಿಷತ್ತಿಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಗೆಲುವಿನ ದೃಷ್ಟಿಯಿಂದ ಕೆಲವು ಸಲಹೆ- ಸೂಚನೆ ನೀಡಲಾಗಿದೆ ಎಂದು ಹೇಳಿದರು.