ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಉತ್ತಮ ನಾಯಕರಾಗುವುದರ ಜೊತೆಗೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸದಿಂದ ಕೊಂಡೊಯ್ಯುವ ಜವಾಬ್ದಾರಿ ನಿಭಾಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸಲಹೆ ನೀಡಿದ್ದಾರೆ. 

ಬೆಂಗಳೂರು (ಜ.03): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಉತ್ತಮ ನಾಯಕರಾಗುವುದರ ಜೊತೆಗೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸದಿಂದ ಕೊಂಡೊಯ್ಯುವ ಜವಾಬ್ದಾರಿ ನಿಭಾಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸಲಹೆ ನೀಡಿದ್ದಾರೆ. ನಗರದಲ್ಲಿ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಲವೊಮ್ಮೆ ಕಾರ್ಯಕರ್ತರ ಮಾತುಗಳು ಖಾರವಾಗಿರಬಹುದು. ಇಂತಹ ಸಂದರ್ಭದಲ್ಲಿ ಒಳ್ಳೆಯದನ್ನು ತೆಗೆದುಕೊಂಡು, ಟೀಕೆಗಳನ್ನು ನುಂಗಿಕೊಂಡು ಕೆಲಸ ಮಾಡಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಬಿಜೆಪಿಗೆ ಸ್ವಲ್ಪ ಹಿನ್ನೆಡೆಯಾಗಿದೆ. ಇದು ಕಾರ್ಯಕರ್ತರಿಗೆ ಅರ್ಥವಾಗದ ಸೋಲಾಗಿದ್ದು, ಪಕ್ಷದ ನಾಯಕರಿಗೂ ವಿಶ್ಲೇಷಣೆ ಮಾಡದಂತಹ ಸಂಗತಿಯಾಗಿದೆ. ಭಾವನಾತ್ಮಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ರಾಜ್ಯವು ಮುತ್ತು ಇದ್ದಂತೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಪಕ್ಷಕ್ಕೆ ಯುವನೇತಾರರು ಅಧ್ಯಕ್ಷರಾಗಿ ಸಿಕ್ಕಿದ್ದು, ವಿಜಯೇಂದ್ರ ಅವರಿಗೆ ಪಕ್ಷವನ್ನು ಮುನ್ನಡೆಸುವ ಶಕ್ತಿ, ಸಾಮರ್ಥ್ಯ ಇದೆ. ಪಕ್ಷದಲ್ಲಿನ ವಿಶ್ವಾಸ ಕೊರತೆಯನ್ನು ಹೋಗಲಾಡಿಸಿ, ಜಾತಿ, ಮತ, ಧರ್ಮಕ್ಕಿಂತ ಪಕ್ಷ ಮುಖ್ಯ ಎಂದು ಭಾವಿಸಿ ಕಟ್ಟಬೇಕಾಗಿದೆ. ಹೊಸ ಅಧ್ಯಕ್ಷರಿಂದ ಕಾರ್ಯಕರ್ತರಿಗೆ ಭರವಸೆಯ ಮಾತುಗಳು ಬರಬೇಕಾಗಿದೆ. ನಾಯಕರು ಅಧ್ಯಕ್ಷರಿಗೆ ಬೆಂಬಲ ನೀಡುವಂತಹ ಕೆಲಸಗಳನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಅಪರಾಧಿ ಅಪರಾಧಿಯೇ, ಪ್ರಲ್ಹಾದ್ ಜೋಶಿಗೆ ಕಾನೂನು ಗೊತ್ತಿದೆಯಾ?: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಜಾತಿಗಳನ್ನು ಒಡೆದು ಆಳುವ ಕೆಲಸ ಮಾಡುತ್ತಿದೆ. ಇದಕ್ಕೆಲ್ಲ ಬಿಜೆಪಿ ಇತಿಶ್ರೀ ಹೇಳಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಡೆಮುರಿ ಕಟ್ಟಲು ಪ್ರತಿಪಕ್ಷ ನಾಯಕ ಅಶೋಕ್‌ ಜತೆ ನಾವಿದ್ದೇವೆ ಎಂದು ಹೇಳಿದ ಗೌಡರು, ಜಗತ್ತಿನ ಯಶಸ್ವಿ ರಾಷ್ಟ್ರವಾಗಿ ಭಾರತ ಹೊರಹೊಮ್ಮುತ್ತಿದ್ದು, 10ನೇ ಸ್ಥಾನದಲ್ಲಿದ್ದ ಭಾರತವನ್ನು ಐದನೇ ಸ್ಥಾನಕ್ಕೆ ತಂದು ನಿಲ್ಲಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಇದರಲ್ಲಿ ಕರ್ನಾಟಕದ ಪಾತ್ರವೂ ಇದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ: ಎಂಎಲ್‌ಸಿ ಎನ್.ರವಿಕುಮಾರ್‌

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಕಾಂಗ್ರೆಸ್‌ ನಿರಂತರ ಆರೋಪ ಮಾಡುತ್ತಿದ್ದು, 40 ಪರ್ಸೆಂಟ್‌ ಆರೋಪ ಮಾಡಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಮೇಲೆ 80 ಪರ್ಸೆಂಟ್‌ನಲ್ಲಿ ಮುಳುಗಿದೆ. ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ಶಾಸಕರಿಗೆ ಅನುದಾನ ನೀಡಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದು, ರೈತರು ಆತ್ಮಹತ್ಯೆ ಮಾಡಿಕೊಂಡರೂ ಅವರಿಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಬದಲಿಗೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರು. ನೀಡುವ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಬಡವರ, ರೈತರ ವಿರೋಧಿ ಸರ್ಕಾರ ಇದೆ ಎಂದು ಟೀಕಾಪ್ರಹಾರ ನಡೆಸಿದರು. ಸಮಾರಂಭದಲ್ಲಿ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಪಕ್ಷದ ಶಾಸಕರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.