Asianet Suvarna News Asianet Suvarna News

Chikkamagaluru: ಚುನಾವಣಾ ಕಣ ದಿನೇ ದಿನೇ ರಂಗು: ಬಿಸಿಲಿನ ಧಗೆ, ಮುಂಜಾನೆ ಪ್ರಚಾರದ ಮೊರೆ ಹೋದ ಅಭ್ಯರ್ಥಿಗಳು!

ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಆದರೆ ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನಿಂದಾಗಿ ಎರಡು ಪಕ್ಷಗಳ ಅಭ್ಯರ್ಥಿಗಳು ಪ್ರಚಾರ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 

Candidates who went to campaign early in the morning due to sun problem at Chikkamagaluru gvd
Author
First Published Apr 15, 2024, 9:01 PM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಏ.15): ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಆದರೆ ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನಿಂದಾಗಿ ಎರಡು ಪಕ್ಷಗಳ ಅಭ್ಯರ್ಥಿಗಳು ಪ್ರಚಾರ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಧ್ಯಾಹ್ನದ ವೇಳೆಗೆ ಹೊರಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂಜಾನೆ ವೇಳೆಯ ಪ್ರಚಾರದ ಮೊರೆ ಹೋಗಿದ್ದಾರೆ.

ಬಿಸಿಲಿನ ಪ್ರಖರತೆ ಕಡಿಮೆಯಾದ ಬಳಿಕ ಮತದಾರರ ಭೇಟಿ: ಜಿಲ್ಲೆಯಲ್ಲಿ ಈ ಬಾರಿ ಭಾರಿ ಬಿಸಿಲಿನ ವಾತಾವರಣವಿದೆ. ಚಿಕ್ಕಮಗಳೂರು ಸೇರಿದಂತೆ ಮಾತನಾಡುವಾಗದಲ್ಲಿ ಬೇಸಿಗೆ ಅವಧಿಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಇರುತ್ತಿದ್ದ ಬಿಸಿಲಿನ ಪ್ರಮಾಣ ಈ ಬಾರಿ 37 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ. ಹೀಗಾಗಿ ಜನ ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಹೇಗಾದರೂ ಮಾಡಿ ಈ ಚುನಾವಣೆ ಗೆದ್ದು ಬೀಗಲೇ ಬೇಕು ಎಂದು ಶತಾಯಗತಾಯ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹಾಗೂ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಧ್ಯಾಹ್ನದ ವೇಳೆಯಲ್ಲಿ ಒಳಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದು, ಬೆಳಗಿನ ಜಾವದಿಂದ ಬಿಸಿಲು ಹೆಚ್ಚುವವರೆಗೆ ಹಾಗೂ ಸಂಜೆ ಬಿಸಿಲಿನ ಪ್ರಖರತೆ ಕಡಿಮೆಯಾದ ಬಳಿಕ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ. 

ಪಾಂಡವರು-ಕೌರವರು ಯಾರೆಂದು ಜನ ತೀರ್ಪು ನೀಡ್ತಾರೆ: ಶ್ರೀರಾಮುಲು ಲೇವಡಿ

ಅಭ್ಯರ್ಥಿಗಳು ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಜೊತೆಗೆ ಅಲ್ಲಲ್ಲಿ ಸಭೆ ನಡೆಸುವ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಆದರೆ ಹೀಗೆ ರಾಜಕೀಯ ಪಕ್ಷಗಳು ನಡೆಸುವ ಸಭೆಗೆ ನಿರೀಕ್ಷಿತ ಮಟ್ಟದಲ್ಲಿ ಜನ ಬರುತ್ತಿಲ್ಲ. ಇದಕ್ಕೆ ಮೂಲ ಕಾರಣ ಹೆಚ್ಚುತ್ತಿರುವ ಬಿಸಿಲು ಎನ್ನಲಾಗುತ್ತಿದೆ.ಇದನ್ನು ಮನಗಂಡ ಅಭ್ಯರ್ಥಿಗಳು ಮುಂಜಾನೆ ಆರು ಗಂಟೆಯಿಂದಲೇ ತಮ್ಮ ಪ್ರಚಾರ ಆರಂಭ ಮಾಡುತ್ತಿದ್ದಾರೆ. ಬೆಳ್ಳಂ ಬೆಳಗ್ಗೆ ವಾಯುವಿಹಾರಕ್ಕೆ ಬಂದವರನ್ನು ಭೇಟಿ ಮಾಡಿ ಮತಯಾಚನೆ ನಡೆಸಲಾಗುತ್ತಿದೆ. ಜೊತೆಗೆ ಮುಂಜಾನೆ ತೆರೆಯುವ ಅಂಗಡಿ ಮಾಲೀಕರು ಹಾಗೂ ಅಲ್ಲಿಗೆ ಬಂದ ಗ್ರಾಹಕರನ್ನು ಭೇಟಿ ಮಾಡಿ ತಮಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.

25 ಕೋಟಿ ಜನ 10 ವರ್ಷಗಳಲ್ಲಿ ಬಡತನ ರೇಖೆಯಿಂದ ಹೊರ ಬಂದಿದ್ದಾರೆ: ವಿದೇಶಾಂಗ ಸಚಿವ ಜೈಶಂಕರ್

ಕಾರ್ಯಕರ್ತರಿಗೂ ತಟ್ಟಿದ ಬಿಸಿಲ ಬೇಗೆ: ಈ ಬಾರಿಯ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳಿಬ್ಬರೂ ಸರಳ ಸಜ್ಜನಿಕೆಯ ರಾಜಕಾರಣಿಗಳು ಎಂದು ಜನರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಇಬ್ಬರು ಸಜ್ಜನರಲ್ಲಿ ಗೆಲ್ಲುವವರು ಯಾರು ಎಂಬುದು ಕುತೂಹಲ ಮೂಡಿಸಿದೆ. ಆದರೆ ಬಿರು ಬಿಸಿಲಿನಲ್ಲಿ ಪ್ರಚಾರ ನಡೆಸಲು ಕಾರ್ಯಕರ್ತರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಹೌದು ಬೆಳಗಿನ ವೇಳೆ ಹುಮ್ಮಸ್ಸಿನಿಂದ ಪ್ರಚಾರ ಆರಂಭಿಸುವ ಕಾರ್ಯಕರ್ತರು ಬಿಸಿಲು ಏರುತ್ತಿದ್ದಂತೆ ಕಳೆಗುಂದುತ್ತಿದ್ದಾರೆ. ಹೀಗಾಗಿ ಕಾರ್ಯಕರ್ತರು ಸಹ ಬೆಳಗ್ಗೆ ಹಾಗೂ ಸಂಜೆ ವೇಳೆ ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಮಧ್ಯಾಹ್ನದ ಅವಧಿಯಲ್ಲಿ ಜನ ಮನೆಯಿಂದ ಹೊರ ಬರುತ್ತಿಲ್ಲ. ಇನ್ನು ತೋಟವಿದ್ದವರು ತೋಟಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ಉಭಯ ಪಕ್ಷಗಳ ಕಾರ್ಯಕರ್ತರಿಗೆ ಮತದಾರರನ್ನು ಭೇಟಿ ಮಾಡುವುದೇ ಸವಾಲಿನ ಕೆಲಸವಾಗಿದೆ.

Follow Us:
Download App:
  • android
  • ios