ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗುರುವಾರ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ.  

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ತೃತೀಯ ರಂಗದ ನಾಯಕರು ಒಂದಾಗುವ ಪ್ರಯತ್ನ ಮುಂದುವರಿದಿದ್ದು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗುರುವಾರ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

Add Asianetnews Kannada as a Preferred SourcegooglePreferred

ಪದ್ಮನಾಭನಗರದಲ್ಲಿನ ನಿವಾಸಕ್ಕೆ ಗುರುವಾರ ಮಧ್ಯಾಹ್ನದ ವೇಳೆಗೆ ಚಂದ್ರಬಾಬು ನಾಯ್ಡ ಆಗಮಿಸಿ ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹ ಉಪಸ್ಥಿತರಿರುವರು. 

ಬಿಜೆಪಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷ ರಚನೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಒಗ್ಗಡೂವಿಕೆ, ರಾಜ್ಯ ರಾಜಕೀಯ, ಲೋಕಸಭಾ ಚುನಾವಣಾ ಸೇರಿದಂತೆ ಇತರೆ ವಿಷಯಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಇದೇ ವೇಳೆ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಲಿದ್ದಾರೆ. 

ಇತ್ತೀಚೆಗೆ ನಾಯ್ಡು ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಹಾಗೂ ಇತರ ಬಿಜೆಪಿಯೇತರ ನಾಯಕರನ್ನು ಭೇಟಿ ಮಾತುಕತೆ ನಡೆಸಿದ್ದು, ಮೈತ್ರಿಯ ಕುರಿತು ಗಂಭೀರವಾಗಿ ಚರ್ಚಿಸಿದ್ದರು. ಇದೀಗ ದೇವೇಗೌಡರನ್ನು ಭೇಟಿ ಮಾಡಿ ತೃತೀಯ ರಂಗವನ್ನು ಬಲಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದು ಮಹತ್ವ ಪಡೆದುಕೊಂಡಿದೆ.